ಬೆಂಗಳೂರು: “ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಕಳೆದ ಮೂರು ವರ್ಷಗಳಲ್ಲಿ ಜನತೆಗೆ ಕೇವಲ ವಂಚನೆ ಮತ್ತು ವಿಶ್ವಾಸದ್ರೋಹ ಎಸಗುವ ಕೆಲಸ ಮಾಡಿದೆ,” ಎಂದು ಬಿಜೆಪಿ ರಾಷ್ಟ್ರೀಯ ಮುಖಂಡ ನಿತಿನ್ ನಬಿನ್ ಅವರು ತೀವ್ರವಾಗಿ ಟೀಕಿಸಿದ್ದಾರೆ.
ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮದವರ ಜೊತೆಗೆ ಅವರು ಮಾತನಾಡಿದರು. ರಾಜ್ಯದ ಸದ್ಯದ ರಾಜಕೀಯ ವಿದ್ಯಮಾನಗಳು ಹಾಗೂ ಸರ್ಕಾರದ ವೈಫಲ್ಯಗಳ ಕುರಿತು ಅವರು ವಾಗ್ದಾಳಿ ನಡೆಸಿದರು.

ಒಳಜಗಳದಲ್ಲಿ ಮುಳುಗಿದ ಸರ್ಕಾರ; ಸಾರ್ವಜನಿಕ ಹಿತಾಸಕ್ತಿ ಮೂಲೆಗೆ
ಮಾಧ್ಯಮಗಳೊಂದಿಗೆ ಮಾತನಾಡಿದ ನಿತಿನ್ ನಬಿನ್ ಅವರು, “ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಒಳಜಗಳ ಮತ್ತು ಅಧಿಕಾರ ದಾಹದಿಂದಾಗಿ ರಾಜ್ಯದಲ್ಲಿ ಜನಹಿತದ ಕೆಲಸಗಳು ಸಂಪೂರ್ಣವಾಗಿ ಕಡೆಗಣಿಸಲ್ಪಟ್ಟಿವೆ. ಪ್ರಸ್ತುತ ಸರಕಾರಕ್ಕೂ ಮತ್ತು ಸಾರ್ವಜನಿಕರ ಹಿತರಕ್ಷಣೆಗೂ ಯಾವುದೇ ಸಂಬಂಧವೇ ಇಲ್ಲದಂತಾಗಿದೆ. ಆಡಳಿತ ನಡೆಸುತ್ತಿರುವ ನಾಯಕರು ಸರಕಾರವನ್ನು ಕೇವಲ ತಮ್ಮ ವೈಯಕ್ತಿಕ ಹಿತಾಸಕ್ತಿ ಮತ್ತು ಅಧಿಕಾರ ಉಳಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ,” ಎಂದು ಆರೋಪಿಸಿದರು.

ಅಭಿವೃದ್ಧಿ ಶೂನ್ಯ; ದೆಹಲಿ ಕಾಂಗ್ರೆಸ್ನ ‘ಎಟಿಎಂ’ ಆದ ಕರ್ನಾಟಕ
ರಾಜ್ಯದ ಪ್ರಗತಿಯ ಕುರಿತು ಕಳವಳ ವ್ಯಕ್ತಪಡಿಸಿದ ಅವರು, “ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ಈ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಯಾವುದೇ ಹೊಸ ಯೋಜನೆಗಳು ಜಾರಿಗೆ ಬರುತ್ತಿಲ್ಲ, ಮೂಲಸೌಕರ್ಯಗಳು ಹದಗೆಡುತ್ತಿವೆ. ಕರ್ನಾಟಕದ ಜನರ ತೆರಿಗೆ ಹಣವನ್ನು ದೆಹಲಿ ಹೈಕಮಾಂಡ್ ತೃಪ್ತಿಪಡಿಸಲು ಬಳಸಲಾಗುತ್ತಿದೆ. ಈ ಸರ್ಕಾರ ದೆಹಲಿ ಕಾಂಗ್ರೆಸ್ಸಿನ ಪಾಲಿಗೆ ಕೇವಲ ಒಂದು ‘ಎಟಿಎಂ’ ಆಗಿ ಮಾರ್ಪಟ್ಟಿದೆ,” ಎಂದು ದೂರಿದರು.
“ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕನಿಷ್ಠ ಸೌಜನ್ಯವೂ ಈ ಸರಕಾರಕ್ಕೆ ಇಲ್ಲದಂತಾಗಿದೆ.”
— ನಿತಿನ್ ನಬಿನ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ತರಬೇತಿ ಶಿಬಿರ ಹಾಗೂ ಪಕ್ಷದ ಸಂಘಟನೆ
ತಮ್ಮ ಕರ್ನಾಟಕ ಭೇಟಿಯ ಕುರಿತು ಮಾಹಿತಿ ನೀಡಿದ ಅವರು, “ನಮ್ಮ ಪಕ್ಷದ ವತಿಯಿಂದ ರಾಜ್ಯದ ವಿವಿಧೆಡೆ ಹಮ್ಮಿಕೊಳ್ಳಲಾಗಿರುವ ಜಿಲ್ಲಾ ತರಬೇತಿ ಶಿಬಿರಗಳಲ್ಲಿ ಪಾಲ್ಗೊಳ್ಳುವ ಅವಕಾಶ ನನಗೆ ಸಿಕ್ಕಿದೆ. ಕರ್ನಾಟಕದಲ್ಲಿ ಬಿಜೆಪಿಯ ಚಟುವಟಿಕೆಗಳು ಅತ್ಯಂತ ಸಕ್ರಿಯವಾಗಿ ನಡೆಯುತ್ತಿವೆ. ಕೆಳಮಟ್ಟದಿಂದ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಮತ್ತು ನಾಯಕರು ತೊಡಗಿಸಿಕೊಂಡಿರುವುದು ಶ್ಲಾಘನೀಯ,” ಎಂದು ತಿಳಿಸಿದರು.


ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಸಚಿವ ಬಿ. ಶ್ರೀರಾಮುಲು, ಪುದುಚೇರಿ ರಾಜ್ಯ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾಣ, ಕರ್ನಾಟಕ ರಾಜ್ಯ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್, ರಾಜ್ಯ ಸಹ-ಉಸ್ತುವಾರಿ ಸುಧಾಕರ್ ರೆಡ್ಡಿ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಉಪಸ್ಥಿತರಿದ್ದರು.






