ಶಿವಮೊಗ್ಗ: ಸಂಯುಕ್ತ ಹೋರಾಟ–ಕರ್ನಾಟಕದ ಕೋರ್ ಕಮಿಟಿ ಸಭೆಯು ಇತ್ತೀಚೆಗೆ ಶಿವಮೊಗ್ಗದಲ್ಲಿ ಸಂಘಟನೆಯ ಅಧ್ಯಕ್ಷರಾದ ಎಚ್.ಆರ್. ಬಸವರಾಜಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಜ್ಯದ ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಗ್ರಾಮೀಣ ಜನರ ಬದುಕಿಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ರೂಪುರೇಷೆಗಳ ಬಗ್ಗೆ ಸದಸ್ಯರು ಅಭಿಪ್ರಾಯ ವಿನಿಮಯ ನಡೆಸಿದರು.
ಕಾರ್ಪೊರೇಟ್ ನೀತಿ ಹಾಗೂ ಕೃಷಿ ಮಾರುಕಟ್ಟೆ ಚೌಕಟ್ಟಿನ ಕುರಿತು ಆತಂಕ
ಸಭೆಯಲ್ಲಿ ಪ್ರಮುಖವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಪೊರೇಟ್ ಪರವಾದ ಕೃಷಿ ನೀತಿಗಳ ಕುರಿತು ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಮುಕ್ತ ವಾಣಿಜ್ಯ ವ್ಯಾಪಾರ ಒಪ್ಪಂದಗಳಿಂದ ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರ ಮೇಲಾಗುವ ದುಷ್ಪರಿಣಾಮಗಳು ಹಾಗೂ ಪ್ರಸ್ತುತ ಕೃಷಿ ಮಾರುಕಟ್ಟೆ ಚೌಕಟ್ಟಿನಲ್ಲಿರುವ ಲೋಪದೋಷಗಳ ಬಗ್ಗೆ ನಾಯಕರು ಸುದೀರ್ಘವಾಗಿ ಚರ್ಚಿಸಿದರು. ರೈತರ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಆಗುತ್ತಿರುವ ಅನ್ಯಾಯ ಹಾಗೂ ಕೃಷಿ ಭೂಮಿಯನ್ನು ಕಾರ್ಪೊರೇಟ್ ಸಂಸ್ಥೆಗಳಿಗೆ ವಹಿಸಿಕೊಡುವ ನೀತಿಗಳ ವಿರುದ್ಧ ವ್ಯವಸ್ಥಿತ ಹೋರಾಟ ರೂಪಿಸಲು ನಿರ್ಧರಿಸಲಾಯಿತು.

ವಿದ್ಯುತ್ ಖಾಸಗೀಕರಣ ಮತ್ತು ಕಾರ್ಮಿಕ ನೀತಿಗಳಿಗೆ ವಿರೋಧ
ವಿದ್ಯುತ್ ವಲಯದ ಖಾಸಗೀಕರಣದಿಂದ ಸಾಮಾನ್ಯ ಜನರಿಗೆ ಹಾಗೂ ರೈತರ ಉಚಿತ ವಿದ್ಯುತ್ ಸೌಲಭ್ಯಕ್ಕೆ ಎದುರಾಗಲಿರುವ ಕಂಟಕಗಳ ಬಗ್ಗೆ ಸಭೆಯಲ್ಲಿ ಗಂಭೀರ ಆಲೋಚನೆ ನಡೆಸಲಾಯಿತು. ಇದರೊಂದಿಗೆ, ಇತ್ತೀಚಿನ ಕಾರ್ಮಿಕ ನೀತಿಗಳು ಕಾರ್ಮಿಕರ ಹಕ್ಕುಗಳನ್ನು ಕಸಿಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಮಿತಿಯು, ರೈತರು ಮತ್ತು ಕಾರ್ಮಿಕರು ಒಂದಾಗಿ ಈ ನೀತಿಗಳ ವಿರುದ್ಧ ಧ್ವನಿ ಎತ್ತಬೇಕಾದ ಅನಿವಾರ್ಯತೆಯನ್ನು ಚರ್ಚೆ ಮಾಡಲಾಯಿತು.
ಸಾಲ ಮನ್ನಾ, ಮನ್ ರೇಗಾ ಮತ್ತು ಮಹಿಳಾ ಮೀಸಲಾತಿ
ಸತತ ಬರಗಾಲ ಮತ್ತು ಆರ್ಥಿಕ ಸಂಕಷ್ಟದಿಂದ ಕಂಗಾಲಾಗಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂಬ ಬೇಡಿಕೆಯನ್ನು ಸಭೆಯಲ್ಲಿ ಬಲವಾಗಿ ಮಂಡಿಸಲಾಯಿತು. ಗ್ರಾಮೀಣ ಭಾಗದ ಜೀವನಾಡಿಯಾಗಿರುವ ‘ಮನ್ ರೇಗಾ’ (ಉದ್ಯೋಗ ಖಾತರಿ) ಯೋಜನೆಯಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಹಾಗೂ ದಿನಗೂಲಿಯನ್ನು ಹೆಚ್ಚಿಸಬೇಕೆಂದು ಒತ್ತಾಯಿಸಲಾಯಿತು. ಇದೇ ಸಂದರ್ಭದಲ್ಲಿ ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ಮಹಿಳಾ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ವಿಚಾರದ ಕುರಿತೂ ಪ್ರಮುಖ ಚರ್ಚೆಗಳು ನಡೆದವು.
ಸಂಯುಕ್ತ ಹೋರಾಟ ಬಲಪಡಿಸಲು ಕರೆ
ಒಟ್ಟಾರೆಯಾಗಿ ಶೋಷಿತ ವರ್ಗಗಳ, ರೈತರ ಮತ್ತು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ‘ಸಂಯುಕ್ತ ಹೋರಾಟ-ಕರ್ನಾಟಕ’ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವುದು ಅತ್ಯಗತ್ಯ ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಮುಂಬರುವ ದಿನಗಳಲ್ಲಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹಂತ ಹಂತವಾಗಿ ಬೃಹತ್ ಚಳವಳಿಗಳನ್ನು ಹಮ್ಮಿಕೊಳ್ಳಲು ಕೋರ್ ಕಮಿಟಿ ಒಮ್ಮತದ ನಿರ್ಧಾರ ಕೈಗೊಂಡಿತು.
ಈ ಪ್ರಮುಖ ಸಭೆಯಲ್ಲಿ ಸಂಯುಕ್ತ ಹೋರಾಟ-ಕರ್ನಾಟಕದ ರಾಜ್ಯ ಕೋರ್ ಕಮಿಟಿ ಸಮಿತಿಯ ಪದಾಧಿಕಾರಿಗಳು ಹಾಗೂ ಪ್ರಮುಖ ಸದಸ್ಯರು ಉಪಸ್ಥಿತರಿದ್ದು, ತಮ್ಮ ಭಾಗದ ಪ್ರಾದೇಶಿಕ ಸಮಸ್ಯೆಗಳನ್ನು ಹಂಚಿಕೊಳ್ಳುವ ಮೂಲಕ ಚರ್ಚೆಯನ್ನು ಯಶಸ್ವಿಗೊಳಿಸಿದರು.






