ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕಾಂಗ್ರೆಸ್ ಆಡಳಿತದ ನಿಜಸ್ವರೂಪ ಬಹಿರಂಗ; ಭ್ರಷ್ಟರಿಗೆ ಮಂತ್ರಿಗಿರಿ.!: ಸಿ.ಟಿ. ರವಿ

On: August 4, 2026 12:59 PM
Follow Us:
ಚಾರ್ಜ್‌ಶೀಟ್ ಎದುರಿಸುತ್ತಿರುವವರನ್ನು ಸಚಿವರನ್ನಾಗಿ ಮಾಡಿರುವುದು ಭ್ರಷ್ಟಾಚಾರಕ್ಕೆ ಮನ್ನಣೆ; ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ದ್ರೋಹ ಎಂದ ಸಿ.ಟಿ.ರವಿ

ಬೆಂಗಳೂರು, ಆ.4: ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಸಚಿವ ಸಂಪುಟ ವಿಸ್ತರಣೆ ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಸಂವಿಧಾನ ಹಾಗೂ ಸಾರ್ವಜನಿಕ ನೈತಿಕತೆಗೆ ವಿರುದ್ಧವಾಗಿ ನಡೆದುಕೊಂಡಿರುವ ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನರ್‌ರಚನೆ, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ನಾಯಕರಿಗೆ ಸಚಿವ ಸ್ಥಾನ ನೀಡಿರುವುದು ಹಾಗೂ ಮಹಿಳಾ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಸ್ಪೀಕರ್, ಉಪಸಭಾಧ್ಯಕ್ಷರು, ವಿಧಾನ ಪರಿಷತ್ ಸಭಾಪತಿ ಹಾಗೂ ಉಪಸಭಾಪತಿ ಸೇರಿದಂತೆ ಸಂವಿಧಾನಾತ್ಮಕ ಹುದ್ದೆಗಳ ಗೌರವ ಕಾಪಾಡುವ ಬದಲು ಕಾಂಗ್ರೆಸ್ ಸರ್ಕಾರ ಅವುಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಂಡಿದ್ದು, ಇದು ಸಂವಿಧಾನದ ಮೌಲ್ಯಗಳಿಗೆ ಮಾಡಿದ ಅಪಚಾರವಾಗಿದೆ ಎಂದು ಸಿ.ಟಿ. ರವಿ ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಜಾರಿ ನಿರ್ದೇಶನಾಲಯ (ಇ.ಡಿ.) ಕೂಡ ಪ್ರತ್ಯೇಕ ಪ್ರಕರಣ ದಾಖಲಿಸಿ ಹಣ ಹಾಗೂ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಂಡಿದೆ. ಇಂತಹ ಗಂಭೀರ ಬೆಳವಣಿಗೆಗಳ ನಡುವೆಯೂ ಈ ಪ್ರಕರಣವನ್ನು ಸಣ್ಣದಾಗಿ ಬಿಂಬಿಸಲು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ “₹187 ಕೋಟಿ ಅಲ್ಲ, ₹89 ಕೋಟಿ ಮಾತ್ರ ದುರುಪಯೋಗವಾಗಿದೆ” ಎಂದು ಹೇಳುವ ಮೂಲಕ ಪ್ರಕರಣದ ಗಂಭೀರತೆಯನ್ನು ಕಡಿಮೆ ಮಾಡುವ ಪ್ರಯತ್ನ ನಡೆಸಿದ್ದರು ಎಂದು ಅವರು ಹೇಳಿದರು.

ಚಾರ್ಜ್‌ಶೀಟ್ ಎದುರಿಸುತ್ತಿರುವ ವ್ಯಕ್ತಿಯನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರವನ್ನು ಸಮರ್ಥಿಸಿಕೊಂಡಂತಾಗಿದೆ. ಇದು ಕೇವಲ ಒಬ್ಬ ವ್ಯಕ್ತಿಗೆ ಸಚಿವ ಸ್ಥಾನ ನೀಡಿರುವ ವಿಚಾರವಲ್ಲ, ಭ್ರಷ್ಟಾಚಾರಕ್ಕೆ ಸರ್ಕಾರದ ಅಧಿಕೃತ ಬೆಂಬಲ ನೀಡಿದಂತಾಗಿದೆ ಎಂದು ಸಿ.ಟಿ. ರವಿ ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮವು ಪರಿಶಿಷ್ಟ ಪಂಗಡದ ಸಮುದಾಯದ ಅಭಿವೃದ್ಧಿಗಾಗಿ ರೂಪುಗೊಂಡ ಸಂಸ್ಥೆಯಾಗಿದೆ. ಆ ನಿಗಮದ ಹಣ ದುರುಪಯೋಗವಾದ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಮತ್ತೆ ಸಚಿವನನ್ನಾಗಿ ಮಾಡಿರುವುದು ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಕೆಲಸವಾಗಿದೆ. ಕಾಂಗ್ರೆಸ್ ಸರ್ಕಾರ ಸಮುದಾಯದ ಹಿತಾಸಕ್ತಿಗೆ ದ್ರೋಹ ಮಾಡಿದೆ ಎಂದು ಅವರು ಟೀಕಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ತೆಲಂಗಾಣ ವಿಧಾನಸಭೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆಗೆ ಬಳಸಲಾಗಿದೆ ಎಂದು ಬಿಜೆಪಿ ಮೊದಲಿನಿಂದಲೂ ಆರೋಪಿಸುತ್ತ ಬಂದಿದೆ. ಇದೀಗ ಅದೇ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ನಿರ್ಧಾರದ ಹಿಂದೆ ಬ್ಲ್ಯಾಕ್‌ಮೇಲ್ ಅಥವಾ ರಾಜಕೀಯ ಒತ್ತಡವೂ ಇರಬಹುದೆಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಸಿ.ಟಿ. ರವಿ ಹೇಳಿದರು.

ವಿಧಾನಸಭೆಯಲ್ಲಿ ಅಸಭ್ಯ ಭಾಷೆ ಬಳಸಿ ವಿವಾದಕ್ಕೀಡಾಗಿದ್ದ ಶಿವಲಿಂಗೇಗೌಡರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ವೈಫಲ್ಯ ಕಂಡವರಿಗೂ ಅವಕಾಶ ಕಲ್ಪಿಸಲಾಗಿದೆ. ಕಾರ್ಮಿಕ ಇಲಾಖೆಯಲ್ಲಿ ಕಿಟ್ ಹಗರಣದ ಆರೋಪ ಎದುರಿಸುತ್ತಿದ್ದವರಿಗೂ ಸಚಿವ ಸ್ಥಾನ ನೀಡಿರುವುದು ಸರ್ಕಾರದ ಆದ್ಯತೆಗಳನ್ನು ಪ್ರಶ್ನಿಸುವಂತಿದೆ ಎಂದು ಅವರು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಆ ಯೋಜನೆಗೆ ಸಂಬಂಧಿಸಿದವರಿಗೂ ಸಚಿವ ಸ್ಥಾನ ನೀಡಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು.

“ಮೈ ಲಡ್ಕೀ ಹೂಂ, ಮೈ ಲಡ್ ಸಕ್ತಿ ಹೂಂ” ಎಂದು ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತಿದ್ದ ಕಾಂಗ್ರೆಸ್ ನಾಯಕತ್ವ ಈಗ ತನ್ನದೇ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಎಷ್ಟು ಸ್ಥಾನ ನೀಡಿದೆ ಎಂಬ ಪ್ರಶ್ನೆಗೆ ಉತ್ತರಿಸಬೇಕು ಎಂದು ಸಿ.ಟಿ. ರವಿ ಹೇಳಿದರು.

“ಅಪ್ನಾ ಕಾಂಗ್ರೆಸ್ ಕ್ಯಾಬಿನೆಟ್ ಮೇ ಲಡ್ಕೀ ಕಹಾಂ ಹೈ?” ಎಂದು ಪ್ರಶ್ನಿಸಿದ ಅವರು, ಮಹಿಳಾ ಮೀಸಲಾತಿ ವಿಧೇಯಕವನ್ನು ವಿರೋಧಿಸಿದ್ದ ಕಾಂಗ್ರೆಸ್, ಈಗ ಸಚಿವ ಸಂಪುಟದಲ್ಲೂ ಮಹಿಳೆಯರಿಗೆ ಸಮರ್ಪಕ ಅವಕಾಶ ನೀಡದೇ ತನ್ನ ನಿಜವಾದ ನಿಲುವನ್ನು ತೋರಿಸಿದೆ ಎಂದು ಟೀಕಿಸಿದರು.

ಸಚಿವ ಸಂಪುಟ ವಿಸ್ತರಣೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೈರಾಗಿರುವುದು ಕಾಂಗ್ರೆಸ್‌ನೊಳಗಿನ ಬೆಳವಣಿಗೆಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪಕ್ಷದೊಳಗೆ ಎಲ್ಲವೂ ಸರಿಯಿಲ್ಲ ಎಂಬ ಸಂದೇಶ ಇದರಿಂದ ಹೊರಬಂದಿದೆ ಎಂದು ಅವರು ಹೇಳಿದರು.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಂಬಂಧಿತ ಪೋಸ್ಟರ್‌ಗಳಿಗೆ ಅವರದೇ ಪಕ್ಷದ ಕಾರ್ಯಕರ್ತರು ವಿಶೇಷ ಪೂಜೆ ನಡೆಸಿರುವುದು ರಾಜಕೀಯವಾಗಿ ಹೊಸ ಬೆಳವಣಿಗೆಗೆ ಮುನ್ನುಡಿಯಾಗಿದೆ. ಕಾಂಗ್ರೆಸ್‌ನ ಒಳರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಬೆಳವಣಿಗೆಗಳು ಸಂಭವಿಸುವ ಸಾಧ್ಯತೆ ಇದೆ. “ಉಳಿದ ಸಂಗತಿಗಳನ್ನು ಕಾದು ನೋಡೋಣ” ಎಂದು ಸಿ.ಟಿ. ರವಿ ಹೇಳಿದರು.

K.M.Sathish Gowda

Join WhatsApp

Join Now

Facebook

Join Now

Read more

​ಮಾತೃ ಆರೋಗ್ಯ ರಕ್ಷಣೆಗೆ ಮೋದಿ ಸರ್ಕಾರದ ಹೆಜ್ಜೆ; ಕರ್ನಾಟಕದಲ್ಲಿ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಸಕಾಲಿಕ ವೈದ್ಯಕೀಯ ಆಸರೆ: ಬಿ.ವೈ.ರಾಘವೇಂದ್ರ

ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ತೀವ್ರ ಬರದ ಸಂಕಷ್ಟದಲ್ಲಿ; ರೈತರ ನೆರವಿಗೆ ತಕ್ಷಣ ₹10,000 ಕೋಟಿ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು: ಬಿ.ವೈ. ವಿಜಯೇಂದ್ರ ಆಗ್ರಹ

ಡಿ.ಕೆ. ಶಿವಕುಮಾರ್ ಸಂಪುಟಕ್ಕೆ 19 ನೂತನ ಸಚಿವರ ಸೇರ್ಪಡೆ

​ಹೋರಾಟವೇ ಉಸಿರು, ರೈತ ಸೇವೆಯೇ ಬದುಕು,.! ರೈತರ ಕಣ್ಣೀರಿಗೆ ಧ್ವನಿಯಾದ ಕ್ರಾಂತಿಕಾರಿ: ಹೋರಾಟದಿಂದಲೇ ಇತಿಹಾಸ ನಿರ್ಮಿಸಿದ ಧೀಮಂತ ನಾಯಕ ಹೆಚ್.ಆರ್. ಬಸವರಾಜಪ್ಪ

ಕಾವೇರಿ ಹಕ್ಕು ರಕ್ಷಣೆಗೆ ಸರ್ವಪಕ್ಷ ಒಗ್ಗಟ್ಟು: ರಾಜ್ಯದ ಹಿತಕ್ಕೆ ರಾಜಿ ಇಲ್ಲ ಎಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕಾವೇರಿ ನಮ್ಮನ್ನು ವಿಭಜಿಸಬಾರದು, ಒಗ್ಗೂಡಿಸಬೇಕು; ಮೇಕೆದಾಟಿಗೆ ಸಹಕಾರ ನೀಡಿ: ತಮಿಳುನಾಡು ಮುಖ್ಯಮಂತ್ರಿ ವಿಜಯ್‌ಗೆ ಬಿ.ವೈ. ವಿಜಯೇಂದ್ರ ಪತ್ರ

Leave a Comment