ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಆಗಸ್ಟ್ 10ರಂದು ದೇಶಾದ್ಯಂತ ‘ಜೈಲ್ ಭರೋ’ ಚಳುವಳಿ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆಗೆ ಹೆಚ್.ಆರ್. ಬಸವರಾಜಪ್ಪ ಕರೆ

On: August 6, 2026 1:45 PM
Follow Us:

ಶಿವಮೊಗ್ಗ, ಆಗಸ್ಟ್ 6: ಕ್ವಿಟ್ ಇಂಡಿಯಾ ಚಳುವಳಿಯ ಸ್ಪೂರ್ತಿಯೊಂದಿಗೆ “ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ” ಎಂಬ ಘೋಷಣೆಯಡಿ ಆಗಸ್ಟ್ 10ರಂದು ದೇಶಾದ್ಯಂತ ‘ಜೈಲ್ ಭರೋ’ ಚಳುವಳಿ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ ತಿಳಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕೂಡ ಈ ಹೋರಾಟವನ್ನು ವ್ಯಾಪಕವಾಗಿ ಆಯೋಜಿಸಲಾಗುತ್ತಿದ್ದು, ಆಗಸ್ಟ್ 10ರಂದು ಬೆಳಿಗ್ಗೆ ಶಿವಪ್ಪನಾಯಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ, ರಸ್ತೆ ತಡೆ ಹಾಗೂ ‘ಜೈಲ್ ಭರೋ’ ಚಳುವಳಿ ನಡೆಸಲಾಗುವುದು ಎಂದು ಹೇಳಿದರು. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು, ಯುವಜನರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.

ದೇಶದ ಕೃಷಿ, ಕಾರ್ಮಿಕ ಹಾಗೂ ಸಾರ್ವಜನಿಕ ವಲಯವನ್ನು ದುರ್ಬಲಗೊಳಿಸುವ ನೀತಿಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಸರಿಸುತ್ತಿವೆ ಎಂದು ಆರೋಪಿಸಿದ ಹೆಚ್.ಆರ್. ಬಸವರಾಜಪ್ಪ ಅವರು, ರೈತರ ಭೂಮಿಯನ್ನು ವಿವಿಧ ಯೋಜನೆಗಳ ಹೆಸರಿನಲ್ಲಿ ಸ್ವಾಧೀನಪಡಿಸಿಕೊಂಡು ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ದೂರಿದರು. ವಿದ್ಯುತ್ ಕ್ಷೇತ್ರದ ಖಾಸಗೀಕರಣ, ಕಾರ್ಪೊರೇಟ್ ಪರವಾದ ಹೊಸ ಬೀಜ ಕಾಯ್ದೆ ಹಾಗೂ ಕೃಷಿ ಕ್ಷೇತ್ರದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಹಿಡಿತ ಹೆಚ್ಚಿಸುವ ನೀತಿಗಳು ರೈತರ ಭವಿಷ್ಯಕ್ಕೆ ಅಪಾಯಕಾರಿಯಾಗಿವೆ ಎಂದು ಹೇಳಿದರು.

ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (MSP)ಗೆ ಕಾನೂನುಬದ್ಧ ಖಾತರಿ ನೀಡುವಲ್ಲಿ ಸರ್ಕಾರಗಳು ಹಿಂದೇಟು ಹಾಕುತ್ತಿವೆ ಎಂದು ಅವರು ಟೀಕಿಸಿದರು. ಇದೇ ವರ್ಷ ರಸಗೊಬ್ಬರದ ಬೆಲೆಯನ್ನು ಹಲವು ಬಾರಿ ಹೆಚ್ಚಿಸಿರುವುದರಿಂದ ಕೃಷಿ ಉತ್ಪಾದನಾ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ರೈತರಿಗೆ ನ್ಯಾಯಯುತ ಬೆಲೆ ಸಿಗದೆ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ಹೇಳಿದರು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ನಿತ್ಯೋಪಯೋಗಿ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ರೈತರು ಮಾತ್ರವಲ್ಲ, ಮಧ್ಯಮ ಹಾಗೂ ಬಡ ವರ್ಗದ ಜನರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಹಳೆಯ ಮಾನದಂಡಗಳ ಪ್ರಕಾರ ಪರಿಹಾರ ನೀಡುತ್ತಿರುವುದು ಸಮರ್ಪಕವಲ್ಲ ಎಂದು ಅವರು ಹೇಳಿದರು. ಪರಿಹಾರದ ಮಾನದಂಡಗಳನ್ನು ಕನಿಷ್ಠ ಶೇ.10ರಷ್ಟು ಹೆಚ್ಚಳ ಮಾಡಬೇಕು. ಕಳೆದ ವರ್ಷದ ಬೆಳೆ ವಿಮೆ ಪರಿಹಾರ ಹಾಗೂ ಎಂಎಸ್‌ಪಿ ಯೋಜನೆಯಡಿ ಖರೀದಿಸಿದ ಕೃಷಿ ಉತ್ಪನ್ನಗಳ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಬಸವರಾಜಪ್ಪ ಆರೋಪಿಸಿದರು. ಇದರ ಪರಿಣಾಮವಾಗಿ ಕಾನೂನುಬದ್ಧ ಕನಿಷ್ಠ ಕೂಲಿ, ಉದ್ಯೋಗ ಭದ್ರತೆ ಹಾಗೂ ಸಾಮಾಜಿಕ ಭದ್ರತೆ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ ಎಂದು ಹೇಳಿದರು.

ಈ ರಾಷ್ಟ್ರವ್ಯಾಪಿ ಹೋರಾಟದ ಮೂಲಕ ದೇಶಾದ್ಯಂತ ರೈತರಿಗೆ ಋಣಮುಕ್ತ ಕಾಯ್ದೆ ಜಾರಿಗೊಳಿಸುವುದು, ಕಾರ್ಮಿಕರಿಗೆ ಕಾನೂನಾತ್ಮಕ ಕನಿಷ್ಠ ವೇತನ ನಿಗದಿಪಡಿಸುವುದು, ಕೃಷಿ ಕ್ಷೇತ್ರಕ್ಕೆ ಸಮಗ್ರ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಹಾಗೂ ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೆ ತರುವಂತೆ ಸರ್ಕಾರವನ್ನು ಒತ್ತಾಯಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಹೋರಾಟ ಯಾವುದೇ ಒಂದು ಸಂಘಟನೆಯ ಕಾರ್ಯಕ್ರಮವಲ್ಲ. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರ ಹಕ್ಕುಗಳಿಗಾಗಿ ನಡೆಯುತ್ತಿರುವ ರಾಷ್ಟ್ರವ್ಯಾಪಿ ಜನಾಂದೋಲನವಾಗಿದೆ ಎಂದು ಹೆಚ್.ಆರ್. ಬಸವರಾಜಪ್ಪ ಹೇಳಿದರು. ಆಗಸ್ಟ್ 10ರಂದು ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ನಡೆಯುವ ಬೃಹತ್ ಪ್ರತಿಭಟನೆ ಹಾಗೂ ‘ಜೈಲ್ ಭರೋ’ ಚಳುವಳಿಯಲ್ಲಿ ಜಿಲ್ಲೆಯ ಎಲ್ಲಾ ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಹೆಚ್.ಆರ್. ಬಸವರಾಜಪ್ಪ, ಬಿಸಿ ಊಟ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಹನುಮಮ್ಮ, CITU ಜಿಲ್ಲಾ ಸಂಚಾಲಕ ಎಂ. ನಾರಾಯಣ್, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಟಿ.ಎಂ. ಚಂದ್ರಪ್ಪ, ರೈತ ಸಂಘದ ಮಹಿಳಾ ಸಂಚಾಲಕಿ ಭಾಗ್ಯ ರಾಘವೇಂದ್ರ, ರೈತ ಸಂಘದ ಜಿಲ್ಲಾಧ್ಯಕ್ಷ ಕೆ. ರಾಘವೇಂದ್ರ ಹಾಗೂ ಡಿ.ಎಸ್.ಎಸ್. (ಅಂಬೇಡ್ಕರ್‌ವಾದ) ಜಿಲ್ಲಾ ಸಂಚಾಲಕ ಶೇಷಪ್ಪ ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಗುಡ್ಡೆಕಲ್ಲಿನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರಿಂದ ವಿಶೇಷ ಪೂಜೆ, ಸ್ವಾಮಿಯ ದರ್ಶನ

SIR: ಮತದಾರರ ಪಟ್ಟಿಯಿಂದ 1.11 ಕೋಟಿ ಹೆಸರು ಡಿಲೀಟ್ ಪ್ರಕ್ರಿಯೆಯಲ್ಲಿ; ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ, ತಪ್ಪಿದ್ದರೆ ಸರಿಪಡಿಸಿ

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಶಿವಮೊಗ್ಗ ರೈಲ್ವೆ ಅಭಿವೃದ್ಧಿಗೆ ಹೊಸ ಮೈಲಿಗಲ್ಲು: ಸಂಸದ ಬಿ.ವೈ. ರಾಘವೇಂದ್ರ

ರಾಜಕೀಯ ಲೆಕ್ಕಾಚಾರ ಬದಲಾವಣೆ;ಲೋಕಸಭೆ ಸ್ಥಾನ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ: ಆಗಸ್ಟ್‌ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ?

ಸರ್ಕಾರಿ ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡಿ; ಕೆಪಿಎಸ್‌ಸಿ ಅಕ್ರಮಗಳಿಗೆ ಕಡಿವಾಣ ಹಾಕಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಡಾ. ಧನಂಜಯ ಸರ್ಜಿ ವಾಗ್ದಾಳಿ

ನೀಟ್ ಅಕ್ರಮಕ್ಕೆ ಬಲಿಯಾಯ್ತು ಬಡ ರೈತನ ಡಾಕ್ಟರ್ ಆಗುವ ಕನಸು: ಕೇಂದ್ರ ಸರ್ಕಾರದ ಬೇಜವಾಬ್ದಾರಿಗೆ ಶಿಕಾರಿಪುರದ ಪ್ರತಿಭಾವಂತ ವಿದ್ಯಾರ್ಥಿ ಬಲಿ!

Leave a Comment