ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಲವಾದ ಹೋರಾಟ; ಮನೆ ಹಾನಿ ಪರಿಹಾರ ₹5 ಲಕ್ಷಕ್ಕೆ ಹೆಚ್ಚಿಸಲು ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ
ಶಿವಮೊಗ್ಗ, ಆ.10: ದೇಶಭಕ್ತಿ, ರಾಷ್ಟ್ರಾಭಿಮಾನ ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ ಈ ಬಾರಿ ‘ಹರ್ ಘರ್ ತಿರಂಗಾ’ ಅಭಿಯಾನವನ್ನು ವಿಶೇಷವಾಗಿ ಹಮ್ಮಿಕೊಳ್ಳಲಾಗಿದ್ದು, ಸುಮಾರು 30 ಸಾವಿರ ಮನೆಗಳಿಗೆ ರಾಷ್ಟ್ರಧ್ವಜ ವಿತರಿಸಲಾಗುವುದು ಎಂದು ಬಿಜೆಪಿ ಶಿವಮೊಗ್ಗ ನಗರ ಅಧ್ಯಕ್ಷ ಮೋಹನ್ ರೆಡ್ಡಿ ತಿಳಿಸಿದರು.
ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ‘ಹರ್ ಘರ್ ತಿರಂಗಾ’ ಅಭಿಯಾನ ಆರಂಭವಾಗಿದ್ದು, ಪ್ರತಿಯೊಬ್ಬ ಭಾರತೀಯನ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಬೇಕು ಎಂದರು.
ಕಳೆದ ಮೂರು-ನಾಲ್ಕು ವರ್ಷಗಳಿಂದ ಶಿವಮೊಗ್ಗ ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಈ ವರ್ಷವೂ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

30 ಸಾವಿರ ಮನೆಗಳಿಗೆ ತಿರಂಗಾ ವಿತರಣೆ
ಆ.10ರಿಂದ 15ರವರೆಗೆ ಶಿವಮೊಗ್ಗ ನಗರದ ವಿವಿಧ ಬಡಾವಣೆಗಳು ಮತ್ತು ಬೂತ್ಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಸುಮಾರು 30 ಸಾವಿರ ಮನೆಗಳಿಗೆ ರಾಷ್ಟ್ರಧ್ವಜ ವಿತರಿಸಲಾಗುವುದು. ಪ್ರತಿ ಬೂತ್ನಲ್ಲೂ ಈ ಅಭಿಯಾನ ನಡೆಯಲಿದೆ ಎಂದು ಮೋಹನ್ ರೆಡ್ಡಿ ತಿಳಿಸಿದರು.
ರಾಷ್ಟ್ರಧ್ವಜವನ್ನು ಉಚಿತವಾಗಿ ನೀಡದೆ ₹25ಕ್ಕೆ ಧ್ವಜ ಹಾಗೂ ಕಡ್ಡಿಯನ್ನು ನೀಡಲಾಗುತ್ತಿದೆ. ವಸ್ತುವೊಂದನ್ನು ಉಚಿತವಾಗಿ ನೀಡಿದಾಗ ಅದರ ಮಹತ್ವ ಕಡಿಮೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ತಮ್ಮದೇ ಆದ ಕೊಡುಗೆಯೊಂದಿಗೆ ರಾಷ್ಟ್ರಧ್ವಜವನ್ನು ಪಡೆದು ಗೌರವದಿಂದ ಹಾರಿಸಬೇಕು ಎಂಬ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ಪ್ರತಿ ಬೂತ್ಗೆ ಧ್ವಜಗಳನ್ನು ಹಂಚಿಕೆ ಮಾಡಲಾಗಿದ್ದು, ಕಾರ್ಯಕರ್ತರು ಕಡ್ಡಿಗಳನ್ನು ಸಿದ್ಧಪಡಿಸುವ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನ ಬೇಡಿಕೆ ಬಂದರೆ ಹೆಚ್ಚುವರಿ ಧ್ವಜಗಳನ್ನು ತರಿಸಿ ಸಾರ್ವಜನಿಕರಿಗೆ ನೀಡಲಾಗುವುದು ಎಂದರು.
ಆ.11ರಂದು ಬೃಹತ್ ಬೈಕ್ ರ್ಯಾಲಿ
‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಆ.11ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ಬೈಕ್ ರ್ಯಾಲಿ ಆಯೋಜಿಸಲಾಗಿದೆ. ಸಂಜೆ 4 ಗಂಟೆಗೆ ಅಲ್ಲಮಪ್ರಭು ಪಾರ್ಕ್ (ಹಳೆ ಜೈಲು ಆವರಣ)ದಿಂದ ರ್ಯಾಲಿ ಆರಂಭವಾಗಿ ಪ್ರಹ್ಲಾದ್ ಶೆಟ್ಟಿ ವೃತ್ತ, ಅಂದರೆ ಕೃಷ್ಣ ಕೆಫೆ ವೃತ್ತದವರೆಗೆ ನಡೆಯಲಿದೆ.
ಸುಮಾರು 1,000ರಿಂದ 1,500 ಬೈಕ್ಗಳು ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ವಿವಿಧ ಸಂಘ-ಸಂಸ್ಥೆಗಳು ಹಾಗೂ ದೇಶಾಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮೋಹನ್ ರೆಡ್ಡಿ ಹೇಳಿದರು.
ಮಹನೀಯರ ಪ್ರತಿಮೆಗಳನ್ನು ಸ್ವಚ್ಛತಾ ಕಾರ್ಯ
ಆ.12ರಂದು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸ್ವಾತಂತ್ರ್ಯ ಹೋರಾಟ ಹಾಗೂ ದೇಶದ ವಿವಿಧ ಕ್ಷೇತ್ರಗಳಿಗೆ ಕೊಡುಗೆ ನೀಡಿದ ಮಹನೀಯರ ಪ್ರತಿಮೆಗಳಿಗೆ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 7.30ರಿಂದ ಗಾಂಧಿ ಪ್ರತಿಮೆ, ಬಸವೇಶ್ವರ ಪ್ರತಿಮೆ, ವಿಶ್ವೇಶ್ವರಯ್ಯ ಪ್ರತಿಮೆ, ಶಿವಪ್ಪ ನಾಯಕ ಪ್ರತಿಮೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಸ್ವಚ್ಛಗೊಳಿಸಿ, ಬಳಿಕ ಗಾಂಧಿ ಪಾರ್ಕ್ನಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.
ಮಾಜಿ ಯೋಧರಿಗೆ ಸನ್ಮಾನ
ಆ.13ರಂದು ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಮಾಜಿ ಸೈನಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಜೆ 5 ಗಂಟೆಗೆ ಶಿವಪ್ಪನಾಯಕ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.
ಆ.14ರಂದು ಬೃಹತ್ ತಿರಂಗಾ ಯಾತ್ರೆ
ಆ.14ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗ ನಗರದಲ್ಲಿ ಬೃಹತ್ ‘ತಿರಂಗಾ ಯಾತ್ರೆ’ ನಡೆಯಲಿದೆ. ವಿವಿಧ ಸಂಘ-ಸಂಸ್ಥೆಗಳು, ಕನ್ನಡ ಸಂಘಗಳು, ಗಣಪತಿ ಸಂಘಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ದೇಶಾಭಿಮಾನಿ ಸಾರ್ವಜನಿಕರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ಮಹನೀಯರ ಕುರಿತಾದ ಸುಮಾರು ಎಂಟು ಟ್ಯಾಬ್ಲೋಗಳನ್ನು ವಿವಿಧ ಮಹಾಶಕ್ತಿ ಕೇಂದ್ರಗಳ ವತಿಯಿಂದ ಸಿದ್ಧಪಡಿಸಲಾಗುವುದು. ನಗರ ಸಮಿತಿಯಿಂದ ವಿಶೇಷ ಧ್ವಜ ವಾಹನ ಕೂಡ ಇರಲಿದೆ. 2,000ಕ್ಕೂ ಹೆಚ್ಚು ಜನರು ಯಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಮೋಹನ್ ರೆಡ್ಡಿ ಹೇಳಿದರು.
ಎಲ್ಲಾ ಕಾರ್ಯಕ್ರಮಗಳಲ್ಲೂ ಶಿವಮೊಗ್ಗ ನಗರದ ದೇಶಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಎಸ್ಐಆರ್ನಲ್ಲಿ ಬಿಜೆಪಿ ಕಾರ್ಯಕರ್ತರ ಪಾತ್ರ: ಶಿವಮೊಗ್ಗಕ್ಕೆ ರಾಜ್ಯದಲ್ಲಿ ಮೂರನೇ ಸ್ಥಾನ
ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಮಾತನಾಡಿದ ಮೋಹನ್ ರೆಡ್ಡಿ, ಶಿವಮೊಗ್ಗ ನಗರ ವ್ಯಾಪ್ತಿಯ 305 ಬೂತ್ಗಳಲ್ಲೂ ಬಿಜೆಪಿ ಕಾರ್ಯಕರ್ತರು ಬಿಎಲ್ಒ-2 ಆಗಿ ಕಾರ್ಯನಿರ್ವಹಿಸಿದ್ದು, ಮತದಾರರ ಮಾಹಿತಿ ಸಂಗ್ರಹ ಹಾಗೂ ಪರಿಶೀಲನಾ ಪ್ರಕ್ರಿಯೆಯಲ್ಲಿ ಸಹಕರಿಸಿದ್ದಾರೆ ಎಂದು ಹೇಳಿದರು.
ಪ್ರತಿ ಬಿಎಲ್ಒ ಜೊತೆ ಕಾರ್ಯಕರ್ತರು ಸಂಪರ್ಕದಲ್ಲಿದ್ದು, ಮನೆಗಳ ವಿಳಾಸ ಹಾಗೂ ಮತದಾರರ ಮಾಹಿತಿಯನ್ನು ಒದಗಿಸುವ ಮೂಲಕ ಪ್ರಕ್ರಿಯೆಗೆ ಸಹಕಾರ ನೀಡಿದ್ದಾರೆ. ಇದರ ಪರಿಣಾಮವಾಗಿ ಶಿವಮೊಗ್ಗ ನಗರವು ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದಿದ್ದು, ಸುಮಾರು 2.50 ಲಕ್ಷಕ್ಕೂ ಅಧಿಕ ಮತದಾರರ ಸೇರ್ಪಡೆ ಪ್ರಕ್ರಿಯೆಗೆ ಬಿಜೆಪಿ ಕಾರ್ಯಕರ್ತರು ಸಹಕಾರ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಮತದಾರರ ಪಟ್ಟಿಯಿಂದ ಹೆಸರುಗಳು ಕೈಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೆಲವು ಬೂತ್ಗಳಲ್ಲಿ ಫಾರಂ ಪಡೆದುಕೊಂಡು ಇನ್ನೂ ಸಲ್ಲಿಸದಿರುವವರು, ಸ್ಥಳಾಂತರಗೊಂಡವರು, ಮೃತಪಟ್ಟವರು ಅಥವಾ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರ ಪ್ರಕರಣಗಳಿರಬಹುದು. ಅಂತಹ ಪ್ರಕರಣಗಳನ್ನು ಕಾರ್ಯಕರ್ತರು ಪರಿಶೀಲಿಸುತ್ತಿದ್ದಾರೆ ಎಂದರು.
ಅಗತ್ಯವಿರುವ ನೈಜ ಮತದಾರರನ್ನು ಪಟ್ಟಿಗೆ ಸೇರಿಸುವುದು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ನೀಡಿರುವ ಹೆಚ್ಚುವರಿ ಕಾಲಾವಕಾಶವನ್ನು ಬಳಸಿಕೊಂಡು ಕಾರ್ಯಕರ್ತರು ಕೆಲಸ ಮಾಡಲಿದ್ದಾರೆ ಎಂದು ಹೇಳಿದರು.
ಶಿವಮೊಗ್ಗದ ಕೆಲವು ಬೂತ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೆಸರುಗಳು ಕೈಬಿಟ್ಟಿರುವ ಕುರಿತು ಕೇಳಿದಾಗ, ಡಬಲ್ ಎಂಟ್ರಿ, ಸ್ಥಳಾಂತರ ಹಾಗೂ ಮೃತಪಟ್ಟಿರುವ ಮತದಾರರ ಹೆಸರುಗಳು ಪ್ರಮುಖ ಕಾರಣವಾಗಿರಬಹುದು. ಒಂದೇ ಮತದಾರರ ಹೆಸರು ಎರಡು ಕಡೆ ದಾಖಲಾಗಿದ್ದರೆ ಅಂತಹ ಹೆಸರುಗಳನ್ನು ಪರಿಶೀಲಿಸಿ ತೆಗೆದುಹಾಕಲಾಗಿದೆ ಎಂದು ಮೋಹನ್ ರೆಡ್ಡಿ ಹೇಳಿದರು.

ವಿಧಾನಸಭೆಯಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ: ಎಸ್.ಎನ್. ಚನ್ನಬಸಪ್ಪ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು, ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ ಪ್ರಮುಖ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ವಿರೋಧ ಪಕ್ಷದ ಶಾಸಕರಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿ ತಮ್ಮ ಮೇಲಿದೆ. ವಿಧಾನಸಭೆಯೊಳಗೆ ಯಾವ ವಿಷಯಗಳನ್ನು ಯಾವ ರೀತಿಯಲ್ಲಿ ಪ್ರಸ್ತಾಪಿಸಬೇಕು ಮತ್ತು ಸರ್ಕಾರಕ್ಕೆ ಯಾವ ವಿಚಾರದಲ್ಲಿ ಬಿಸಿ ಮುಟ್ಟಿಸಬೇಕು ಎಂಬುದರ ಕುರಿತು ಈಗಾಗಲೇ ಚರ್ಚೆ ನಡೆದಿದೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಜನರಲ್ಲಿ ಸರ್ಕಾರದ ಕಾರ್ಯವೈಖರಿ ಕುರಿತು ಅಸಮಾಧಾನ ಮೂಡಿರುವ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಕೇವಲ ಪ್ರತಿಭಟನೆ ನಡೆಸುವುದಷ್ಟೇ ಅಲ್ಲದೆ, ಫಲಿತಾಂಶ ಆಧಾರಿತ ಹೋರಾಟ ನಡೆಸಲು ಬಿಜೆಪಿ ಸಿದ್ಧವಾಗಿದೆ ಎಂದು ಚನ್ನಬಸಪ್ಪ ಹೇಳಿದರು.
ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರನ್ನು ಸಂಪುಟದಿಂದ ಕೈಬಿಡಲಿ
ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳಿದ್ದು, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂಬುದು ಬಿಜೆಪಿ ನಿಲುವಾಗಿದೆ ಎಂದು ಅವರು ಹೇಳಿದರು.
ವಾಲ್ಮೀಕಿ ನಿಗಮದ ಹಗರಣದ ವಿಚಾರವನ್ನು ಪ್ರಸ್ತಾಪಿಸಿದ ಚೆನ್ನಬಸಪ್ಪ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಚಂದ್ರಶೇಖರ್ ಅವರ ಸಾವಿನ ಪ್ರಕರಣವನ್ನೂ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದರು.
ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ದೊರಕಬೇಕು. ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಸಂಬಂಧಪಟ್ಟವರನ್ನು ಸಚಿವ ಸಂಪುಟಕ್ಕೆ ಸೇರಿಸಿರುವುದು ಸರಿಯಲ್ಲ ಎಂಬುದು ತಮ್ಮ ಅಭಿಪ್ರಾಯವಾಗಿದೆ. ಈ ವಿಚಾರವನ್ನು ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.
“ಚಂದ್ರಶೇಖರ್ ಕುಟುಂಬಕ್ಕೆ ನ್ಯಾಯ ದೊರಕಿಲ್ಲ ಎಂಬ ನೋವು ನಮ್ಮಲ್ಲಿದೆ. ಅವರ ಕುಟುಂಬಕ್ಕೆ ನ್ಯಾಯ ದೊರಕುವವರೆಗೆ ಈ ವಿಚಾರವನ್ನು ಕೈಬಿಡುವುದಿಲ್ಲ” ಎಂದು ಚನ್ನಬಸಪ್ಪ ಹೇಳಿದರು.
ರಾಜ್ಯದಲ್ಲಿ ಪಿಂಚಣಿ ಸಮಸ್ಯೆ, ಬಡವರ ಸಮಸ್ಯೆಗಳು ಸೇರಿದಂತೆ ಹಲವು ಜನಪರ ವಿಚಾರಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು. ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳಿಗೂ ವಿಶೇಷ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಮನೆ ಹಾನಿ ಪರಿಹಾರ ₹5 ಲಕ್ಷಕ್ಕೆ ಹೆಚ್ಚಿಸಲು ಆಗ್ರಹ
ಇತ್ತೀಚೆಗೆ ಅತಿವೃಷ್ಟಿಯಿಂದ ಮನೆಗಳಿಗೆ ಹಾನಿಯಾಗಿರುವ ಪ್ರಕರಣಗಳ ಕುರಿತು ಮಾತನಾಡಿದ ಶಾಸಕ ಚೆನ್ನಬಸಪ್ಪ, ಅಧಿಕಾರಿಗಳು ಹಾನಿಗೊಳಗಾದ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು ಮತ್ತು ಅರ್ಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ದೊರಕಿಸಬೇಕು ಎಂದು ಒತ್ತಾಯಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಪೂರ್ಣವಾಗಿ ಹಾನಿಗೊಳಗಾದ ಮನೆಗಳಿಗೆ ₹5 ಲಕ್ಷ ಪರಿಹಾರ ನೀಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ ₹1.20 ಲಕ್ಷದಷ್ಟು ಪರಿಹಾರ ನೀಡುವ ವ್ಯವಸ್ಥೆ ಮಾಡಿದೆ ಎಂದು ಅವರು ಆರೋಪಿಸಿದರು.
ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ನೀಡಬೇಕು ಎಂಬುದು ಬಿಜೆಪಿ ಆಗ್ರಹವಾಗಿದೆ. ಈ ಕುರಿತು ಹಿಂದೆಯೂ ವಿಧಾನಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈಗಲೂ ಈ ವಿಚಾರವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಅಧಿಕೃತ–ಅನಧಿಕೃತ ಮನೆಗಳೆಂಬ ಭೇದ ಬೇಡ
ಮನೆ ಹಾನಿ ಪರಿಹಾರ ನೀಡುವ ಸಂದರ್ಭದಲ್ಲಿ ಅಧಿಕೃತ ಮತ್ತು ಅನಧಿಕೃತ ಮನೆಗಳೆಂಬ ವ್ಯತ್ಯಾಸ ಮಾಡಬಾರದು ಎಂದು ಚನ್ನಬಸಪ್ಪ ಆಗ್ರಹಿಸಿದರು.
ದಶಕಗಳಿಂದ ಜನರು ವಾಸಿಸುತ್ತಿರುವ ಪ್ರದೇಶಗಳಲ್ಲಿ ನಿರ್ಮಿಸಿರುವ ಮನೆಗಳಿಗೆ ಹಾನಿಯಾದಾಗ, ಸಂತ್ರಸ್ತ ಕುಟುಂಬಗಳಿಗೆ ಮಾನವೀಯ ದೃಷ್ಟಿಕೋನದಿಂದ ಪರಿಹಾರ ನೀಡಬೇಕು. ಜೊತೆಗೆ ಅರ್ಹರಿಗೆ ಹಕ್ಕುಪತ್ರ ನೀಡುವ ಮೂಲಕ ಅವರ ವಾಸಸ್ಥಳದ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದರು.
ಹಕ್ಕುಪತ್ರ ನೀಡುವಲ್ಲಿ ಇರುವ ಕಾನೂನು ತೊಡಕುಗಳನ್ನು ನಿವಾರಿಸಲು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಬಂದು ಪರಿಶೀಲನೆ ನಡೆಸಿದೆ. ಈ ಕುರಿತು ಹಲವು ಬಾರಿ ಚರ್ಚೆ ನಡೆದಿದ್ದರೂ ಅಂತಿಮ ಫಲಿತಾಂಶ ಇನ್ನೂ ದೊರೆತಿಲ್ಲ. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಸಮಸ್ಯೆಗೆ ಪರಿಹಾರ ದೊರೆಯುವ ವಿಶ್ವಾಸವಿದೆ ಎಂದು ಎಸ್.ಎನ್. ಚನ್ನಬಸಪ್ಪ ಹೇಳಿದರು.
ಒಟ್ಟಾರೆ, ‘ಹರ್ ಘರ್ ತಿರಂಗಾ’ ಅಭಿಯಾನದ ಮೂಲಕ ಶಿವಮೊಗ್ಗ ನಗರದಲ್ಲಿ ರಾಷ್ಟ್ರಭಕ್ತಿ ಕಾರ್ಯಕ್ರಮಗಳಿಗೆ ಬಿಜೆಪಿ ಒತ್ತು ನೀಡಿದ್ದು, ಮತ್ತೊಂದೆಡೆ ಎಸ್ಐಆರ್, ಮತದಾರರ ಪಟ್ಟಿ, ಮನೆ ಹಾನಿ ಪರಿಹಾರ, ಪಿಂಚಣಿ, ಭ್ರಷ್ಟಾಚಾರ ಹಾಗೂ ಜನಪರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಲು ಸಿದ್ಧತೆ ಮಾಡಿಕೊಂಡಿದೆ ಎಂದು ನಾಯಕರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಶಿವಮೊಗ್ಗ ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಜಿ ಸೂಡಾ ಅಧ್ಯಕ್ಷ ಎಸ್. ಜ್ಞಾನೇಶ್ವರ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ನವುಲೆ ಹಾಗೂ ದೀನ್ ದಯಾಳ್, ನಗರ ಪದಾಧಿಕಾರಿಗಳಾದ ರಂಗೇಶ್, ಪರಮೇಶ್ ನಾಯ್ಕ್, ವಡ್ಡಿನಕೊಪ್ಪ ಪ್ರಕಾಶ್, ವಿಶ್ವನಾಥ್, ಮಹಾಲಕ್ಷ್ಮಿ, ರಶ್ಮಿ ಶ್ರೀನಿವಾಸ್, ಪ್ರದೀಪ್, ಗಾಡಿಕೊಪ್ಪ ಕುಮಾರ್, ಲತಾ ಶ್ರೀನಿವಾಸ್ ಹಾಗೂ ಯಶೋದಾ, ಬಿಜೆಪಿ ಮಾಧ್ಯಮ ಸಂಚಾಲಕರಾದ ಚಂದ್ರಶೇಖರ, ಮಂಜುನಾಥ್, ಮುರಳಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.







