ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕಾರ್ಪೊರೇಟ್‌ಗಳ ವಿರುದ್ಧ ರೈತರ ಆಕ್ರೋಶ; ರಸ್ತೆ ತಡೆಗೆ ಇಳಿದ ಹೆಚ್.ಆರ್. ಬಸವರಾಜಪ್ಪ ಸೇರಿ ಮುಖಂಡರ ಬಂಧನ

On: August 10, 2026 4:04 PM
Follow Us:
‘ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ’: ಶಿವಮೊಗ್ಗದಲ್ಲಿ ರೈತರ ರಣಕಹಳೆ; ಹೋರಾಟಗಾರರ ಬಂಧನ–ಬಿಡುಗಡೆ

ಶಿವಮೊಗ್ಗ, ಆ.10: ಕ್ವಿಟ್ ಇಂಡಿಯಾ ಚಳುವಳಿಯ ಸ್ಫೂರ್ತಿಯಲ್ಲಿ ‘ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಜೆ.ಸಿ.ಟಿ.ಯು ಕರೆ ನೀಡಿದ್ದ ಪ್ರತಿಭಟನೆಯ ಅಂಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಶಿವಮೊಗ್ಗದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ಹಾಗೂ ರಸ್ತೆ ತಡೆ ಚಳುವಳಿ ನಡೆಯಿತು.

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಅವರ ನೇತೃತ್ವದಲ್ಲಿ ನಗರದ ಬಿ.ಹೆಚ್. ರಸ್ತೆಯ ಗಾಂಧಿಬಜಾರ್ ಸಮೀಪದ ಶಿವಪ್ಪನಾಯಕ ಪ್ರತಿಮೆ ಬಳಿ ರೈತರು, ಕಾರ್ಮಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು.

ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗುವ ನೀತಿಗಳನ್ನು ಕೈಬಿಟ್ಟು, ರೈತರು, ಕಾರ್ಮಿಕರು ಹಾಗೂ ದುಡಿಯುವ ವರ್ಗದ ಹಿತಾಸಕ್ತಿಯನ್ನು ರಕ್ಷಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಪ್ರತಿಭಟನಾಕಾರರು ಒತ್ತಾಯಿಸಿದರು. ದೇಶದ ಕೃಷಿ, ನೈಸರ್ಗಿಕ ಸಂಪನ್ಮೂಲಗಳು ಹಾಗೂ ಸಾರ್ವಜನಿಕ ಆಸ್ತಿಗಳ ಮೇಲೆ ಕಾರ್ಪೊರೇಟ್ ಸಂಸ್ಥೆಗಳ ಹಿಡಿತ ಹೆಚ್ಚಾಗಲು ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ಕ್ವಿಟ್ ಇಂಡಿಯಾ ಚಳುವಳಿಯ ಸ್ಫೂರ್ತಿಯನ್ನು ನೆನಪಿಸಿಕೊಂಡ ಪ್ರತಿಭಟನಾಕಾರರು, ಅಂದು ಬ್ರಿಟಿಷರ ವಿರುದ್ಧ ‘ಭಾರತ ಬಿಟ್ಟು ತೊಲಗಿ’ ಎಂಬ ಘೋಷಣೆ ಮೊಳಗಿದ ರೀತಿಯಲ್ಲೇ ಇಂದು ದೇಶದ ಸಂಪನ್ಮೂಲಗಳು ಹಾಗೂ ಜನರ ಬದುಕಿನ ಮೇಲೆ ಪ್ರಭಾವ ಬೀರುತ್ತಿರುವ ಕಾರ್ಪೊರೇಟ್ ಶಕ್ತಿಗಳ ವಿರುದ್ಧ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ಪ್ರತಿಭಟನೆಯ ಭಾಗವಾಗಿ ರೈತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಸರ್ಕಾರದ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ‘ಕಾರ್ಪೊರೇಟ್‌ಗಳೇ ದೇಶ ಬಿಟ್ಟು ತೊಲಗಿ’, ‘ರೈತರನ್ನು ಉಳಿಸಿ–ಕೃಷಿಯನ್ನು ಉಳಿಸಿ’ ಸೇರಿದಂತೆ ವಿವಿಧ ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆ ತಡೆ ಚಳುವಳಿಯಿಂದ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ಹೋರಾಟ ಮುಂದುವರಿಸಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾನಿರತ ಮುಖಂಡರು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಂಧಿಸಿದರು.

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಸೇರಿದಂತೆ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಪೊಲೀಸ್ ವಾಹನಗಳಲ್ಲಿ ಕರೆದೊಯ್ದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಬಂಧನದ ನಡುವೆಯೂ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಪೊಲೀಸರು ಬಂಧಿತ ಹೋರಾಟಗಾರರನ್ನು ವಶದಲ್ಲಿರಿಸಿಕೊಂಡು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಬಿಡುಗಡೆ ಮಾಡಿದರು. ಬಂಧನ ಹಾಗೂ ಬಿಡುಗಡೆಯ ಬಳಿಕವೂ ರೈತ ಮುಖಂಡರು ತಮ್ಮ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿದರು.

ರೈತರ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ, ಕೃಷಿ ಕ್ಷೇತ್ರದ ರಕ್ಷಣೆ, ಕಾರ್ಮಿಕರ ಹಕ್ಕುಗಳ ಸಂರಕ್ಷಣೆ ಹಾಗೂ ಸಾರ್ವಜನಿಕ ಸಂಪನ್ಮೂಲಗಳನ್ನು ಖಾಸಗಿ ಕಾರ್ಪೊರೇಟ್ ಸಂಸ್ಥೆಗಳ ವಶಕ್ಕೆ ನೀಡದಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸರ್ಕಾರಗಳು ರೈತರು ಮತ್ತು ದುಡಿಯುವ ವರ್ಗದ ಸಮಸ್ಯೆಗಳಿಗೆ ಸ್ಪಂದಿಸದೆ ಕಾರ್ಪೊರೇಟ್ ಹಿತಾಸಕ್ತಿಗಳಿಗೆ ಆದ್ಯತೆ ನೀಡಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್. ಅಶೋಕ್, ಡಿಎಸ್‌ಎಸ್ (ಅಂಬೇಡ್ಕರ್‌ವಾದ) ಜಿಲ್ಲಾ ಪ್ರಧಾನ ಸಂಚಾಲಕ ಟಿ.ಹೆಚ್. ಹಾಲೇಶಪ್ಪ, ಬಿಸಿಯೂಟ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಹನುಮಮ್ಮ, ಸಿಐಟಿಯು ಜಿಲ್ಲಾ ಸಂಚಾಲಕ ನಾರಾಯಣ, ರೈತ ಸಂಘದ ರಾಜ್ಯ ಉಪಾಧ್ಯಕ್ಷರಾದ ಟಿ.ಎಂ. ಚಂದ್ರಪ್ಪ, ಹಿಟ್ಟೂರು ರಾಜು, ರೈತ ಸಂಘದ ಮಹಿಳಾ ಸಂಚಾಲಕಿ ಭಾಗ್ಯ ರಾಘವೇಂದ್ರ, ಜಿಲ್ಲಾಧ್ಯಕ್ಷ ಕೆ. ರಾಘವೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ. ಜಗದೀಶ್, ಜಿಲ್ಲಾ ಉಪಾಧ್ಯಕ್ಷರಾದ ಎಂ. ಮಂಜಪ್ಪ, ಎಂ. ಮಹದೇವಪ್ಪ, ಪಿ. ಶೇಖರಪ್ಪ, ಎಂ.ಎಸ್. ತಿಮ್ಮಪ್ಪ, ಜಿಲ್ಲಾ ಕಾರ್ಯದರ್ಶಿ ಗುರುಶಾಂತ, ಜಿಲ್ಲಾ ಹಸಿರುಸೇನೆ ಸಂಚಾಲಕ ಎಂ.ಡಿ. ನಾಗರಾಜ್ ಉಪಸ್ಥಿತರಿದ್ದರು.

ಶಿವಮೊಗ್ಗ ತಾಲೂಕು ಅಧ್ಯಕ್ಷ ಸಿ. ಚಂದ್ರಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ಜ್ಞಾನೇಶ್, ಭದ್ರಾವತಿ ತಾಲೂಕು ಅಧ್ಯಕ್ಷ ಜಿ.ಎನ್. ಪಂಚಾಕ್ಷರಿ, ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಬಿ. ಹನುಮಂತಪ್ಪ ಸೇರಿದಂತೆ ವಿವಿಧ ತಾಲೂಕುಗಳ ಪದಾಧಿಕಾರಿಗಳು, ರೈತ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಶಿವಮೊಗ್ಗದಲ್ಲಿ ‘ಹರ್ ಘರ್ ತಿರಂಗಾ’ ಸಂಭ್ರಮ: 30 ಸಾವಿರ ಮನೆಗಳಿಗೆ ರಾಷ್ಟ್ರಧ್ವಜ ವಿತರಣೆ, ಬೃಹತ್ ತಿರಂಗಾ ಯಾತ್ರೆಗೆ ಬಿಜೆಪಿ ಸಿದ್ಧತೆ

ದೇಶವಿರೋಧಿ ಕಾಂಗ್ರೆಸ್‌ನಿಂದ ದೇಶಾಭಿಮಾನ ಕಲಿಯುವ ಅಗತ್ಯವಿಲ್ಲ: ವಿಜಯೇಂದ್ರ

ಭದ್ರಾ ನೀರು ಹರಿಯಲಿ, ಚಿತ್ರದುರ್ಗದ ಬರ ಅಳಿಯಲಿ! ₹5,300 ಕೋಟಿ ಸಾಲದು, ₹6,200 ಕೋಟಿ ಕೊಡಿ: ಕೇಂದ್ರ ಸರ್ಕಾರಕ್ಕೆ ತರಳಬಾಳು ಶ್ರೀಗಳ ಆಗ್ರಹ

‘ನೋ ಚೇಂಜ್‌’ ಎಂದ ಹೈಕಮಾಂಡ್‌; ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಬಿಗ್‌ ಶಾಕ್‌!

ಗುಡ್ಡೆಕಲ್ಲು ಜಾತ್ರಾ ಮಹೋತ್ಸವ: ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾಗೂ ಜೆಡಿಎಸ್ ನಾಯಕರಿಂದ ಶ್ರೀ ಬಾಲಸುಬ್ರಮಣ್ಯ ಸ್ವಾಮಿಗೆ ವಿಶೇಷ ಪೂಜೆ

ಆಗಸ್ಟ್‌ 8ರಂದು ನೆಲಮಂಗಲದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಪತ್ರಕರ್ತರ ಸಮ್ಮೇಳನ

Leave a Comment