ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರೇರಣ ಶಿಬಿರ: ಮಹಿಳೆಯರ ಸಾಧನೆ ಸಮಾಜದ ಪ್ರಗತಿಗೆ ಶಕ್ತಿ: ಶಕುಂತಲಾ ಚಂದ್ರಶೇಖರ್

On: August 23, 2026 3:03 PM
Follow Us:

ಶಿವಮೊಗ್ಗ: ತಮ್ಮ ವೃತ್ತಿ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧಕ ಮಹಿಳೆಯರು ಇತರರಿಗೆ ಸ್ಪೂರ್ತಿ ಹಾಗೂ ಪ್ರೇರಣೆಯಾಗಿ ನಿಲ್ಲುತ್ತಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಪ್ರೇರಣಾ ಶಿಬಿರದ ಅಂಗವಾಗಿ ನಡೆದ ‘ಸಾಧಕ ಮಹಿಳೆಯರ ಸನ್ಮಾನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂದಿನ ತಂತ್ರಜ್ಞಾನ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರಿಗೆ ಶಿಕ್ಷಣ, ಉದ್ಯೋಗ, ಉದ್ಯಮ, ಆಡಳಿತ, ಸಮಾಜಸೇವೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಹಲವು ಅವಕಾಶಗಳು ಲಭ್ಯವಿವೆ. ಮಹಿಳೆಯರು ತಮ್ಮಲ್ಲಿರುವ ಪ್ರತಿಭೆ, ಸಾಮರ್ಥ್ಯ ಹಾಗೂ ಆತ್ಮವಿಶ್ವಾಸವನ್ನು ಗುರುತಿಸಿಕೊಂಡು ದೊರೆಯುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವೈಯಕ್ತಿಕ ಬದುಕಿನಲ್ಲಿ ಯಶಸ್ಸು ಸಾಧಿಸುವುದರ ಜೊತೆಗೆ ಸಮಾಜದ ಒಳಿತಿಗಾಗಿ ತಮ್ಮ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಮಹಿಳೆಯರು ಸಾಧನೆ ಮಾಡುವುದಕ್ಕೆ ಕುಟುಂಬ ಹಾಗೂ ಸಮಾಜದ ಪ್ರೋತ್ಸಾಹವೂ ಪ್ರಮುಖವಾಗಿದೆ. ಒಂದು ಕ್ಷೇತ್ರದಲ್ಲಿ ಮಹಿಳೆಯೊಬ್ಬರು ಯಶಸ್ಸು ಸಾಧಿಸಿದಾಗ ಅದು ಅವರ ವೈಯಕ್ತಿಕ ಸಾಧನೆಗೆ ಮಾತ್ರ ಸೀಮಿತವಾಗದೆ, ಅವರ ಸುತ್ತಲಿನ ಅನೇಕ ಮಹಿಳೆಯರಿಗೆ ಹೊಸ ದಾರಿಯನ್ನು ತೋರಿಸುತ್ತದೆ. ಹೀಗಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರನ್ನು ಗುರುತಿಸಿ ಗೌರವಿಸುವುದು ಅತ್ಯಂತ ಅರ್ಥಪೂರ್ಣ ಕಾರ್ಯವಾಗಿದೆ ಎಂದು ಶಕುಂತಲಾ ಚಂದ್ರಶೇಖರ್ ಹೇಳಿದರು.

ಶಿಬಿರದ ನಾಯಕಿ ಮಲ್ಲೇಶ್ವರಿ ಜುಜಾರೆ ಮಾತನಾಡಿ, ಮಹಿಳೆಯರಲ್ಲಿ ಅಡಗಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಹೊರತರುವುದರ ಜೊತೆಗೆ ಅವರಿಗೆ ಆತ್ಮವಿಶ್ವಾಸ ತುಂಬುವುದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರ ಅನುಭವಗಳನ್ನು ಪರಿಚಯಿಸುವುದು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಚಟುವಟಿಕೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.

ಇಂತಹ ಶಿಬಿರಗಳು ಮಹಿಳೆಯರಿಗೆ ಪರಸ್ಪರ ಪರಿಚಯ, ಅನುಭವ ಹಂಚಿಕೆ ಹಾಗೂ ಹೊಸ ವಿಚಾರಗಳನ್ನು ಕಲಿಯಲು ಉತ್ತಮ ವೇದಿಕೆಯಾಗಿವೆ. ಭಾಗವಹಿಸಿರುವ ಪ್ರತಿಯೊಬ್ಬರೂ ಶಿಬಿರದ ಉದ್ದೇಶವನ್ನು ಅರ್ಥಮಾಡಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಕೇಂದ್ರ ಸ್ಥಾನಿಕ ಆಯುಕ್ತ ಜಿ. ವಿಜಯಕುಮಾರ್ ಮಾತನಾಡಿ, ಮಹಿಳೆಯರ ಸಾಮರ್ಥ್ಯವನ್ನು ಕುಟುಂಬದ ಸೀಮಿತ ಜವಾಬ್ದಾರಿಗಳಿಗೆ ಮಾತ್ರ ಸೀಮಿತಗೊಳಿಸದೆ, ಅವರಿಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸಬೇಕು ಎಂದರು.

ಮಹಿಳೆಯರು ಅಡುಗೆಮನೆಗೆ ಮಾತ್ರ ಸೀಮಿತರಾಗದೆ ಉದ್ಯಮ, ಶಿಕ್ಷಣ, ಸಮಾಜಸೇವೆ, ಆಡಳಿತ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ ಸಮಾಜದ ಅಭಿವೃದ್ಧಿಗೂ ಮಹತ್ವದ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೈಗಾರಿಕಾ ಉದ್ಯಮಿ ಸಹನಾ ನಂದನ್ ಅವರ ಸಾಧನೆಯನ್ನು ಉಲ್ಲೇಖಿಸಿದ ಅವರು, ಕೈಗಾರಿಕಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅವರು 250ಕ್ಕೂ ಹೆಚ್ಚು ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿದ್ದಾರೆ. ಅಲ್ಲದೆ ಹಲವು ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿರುವುದು ಅವರ ಸಾಧನೆಗೆ ಸಾಕ್ಷಿಯಾಗಿದೆ. ಇಂತಹ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಅವರ ಸೇವೆಯನ್ನು ಸಮಾಜಕ್ಕೆ ಪರಿಚಯಿಸುವುದರ ಜೊತೆಗೆ ಇನ್ನಷ್ಟು ಮಹಿಳೆಯರಿಗೆ ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಪ್ರೇರಣೆ ನೀಡಬಹುದು ಎಂದರು.

ಕಾರ್ಯಕ್ರಮದಲ್ಲಿ ಗಣ್ಯರಾದ ಲಕ್ಷ್ಮಿ ಕೆ. ರವಿ ಅವರು ಸನ್ಮಾನಿತರ ಪರಿಚಯ ಮಾಡಿಕೊಟ್ಟರು. ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ಮಹಿಳೆಯರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ವಿಪತ್ತು ನಿರ್ವಹಣಾ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕುಮಾರಿ ಸುಜಾತ ಅವರನ್ನೂ ಈ ಸಂದರ್ಭದಲ್ಲಿ ಗೌರವಿಸಲಾಯಿತು. ವಿಪತ್ತು ಸಂದರ್ಭಗಳಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಅವರು ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ದೆಹಲಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸುವ ಅವಕಾಶ ಹಾಗೂ ರಾಷ್ಟ್ರಪತಿಗಳ ಔತಣಕೂಟದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿರುವುದು ಅವರ ಸಾಧನೆಯ ವಿಶೇಷತೆಯಾಗಿದೆ.

ಕಾರ್ಯಕ್ರಮದಲ್ಲಿ ರಾಜ್ಯ ಸಂಘಟನಾ ಆಯುಕ್ತೆ ಸುಮನಾ ಶೇಖರ್, ಎ.ವಿ. ರಾಜೇಶ್, ಎನ್.ಕೆ. ಕೃಷ್ಣಸ್ವಾಮಿ, ಸಹ ಕಾರ್ಯದರ್ಶಿ ವೈ.ಆರ್. ವಿರೇಶಪ್ಪ, ತರಬೇತಿ ಆಯುಕ್ತ ಎಚ್. ಶಿವಶಂಕರ್, ಮಲ್ಲಿಕಾರ್ಜುನ ಕಾನೂರ್, ಚಂದ್ರಶೇಖರ್ ಸೇರಿದಂತೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಪದಾಧಿಕಾರಿಗಳು ಹಾಗೂ ಶಿಬಿರದ ವಿವಿಧ ಜವಾಬ್ದಾರಿಯಲ್ಲಿದ್ದವರು ಉಪಸ್ಥಿತರಿದ್ದರು.

ಮಹಿಳೆಯರ ಸಾಧನೆಯನ್ನು ಗುರುತಿಸಿ ಗೌರವಿಸುವ ಮೂಲಕ ಅವರಲ್ಲಿ ಮತ್ತಷ್ಟು ಆತ್ಮವಿಶ್ವಾಸ ಮೂಡಿಸುವುದು ಮತ್ತು ಸಮಾಜದ ಇತರ ಮಹಿಳೆಯರಿಗೂ ಸಾಧನೆಯತ್ತ ಹೆಜ್ಜೆ ಇಡಲು ಪ್ರೇರಣೆ ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.

K.M.Sathish Gowda

Join WhatsApp

Join Now

Facebook

Join Now

Read more

ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಗೆ ವೇಗ: ತಾಂತ್ರಿಕ ಅಡ್ಡಿ ನಿವಾರಣೆಗೆ ಎರಡು ವಾರಗಳ ಗಡುವು ನೀಡಿದ ಶ್ರೀ ತರಳಬಾಳು ಜಗದ್ಗುರುಗಳು

ಶಿಗ್ಗಾವಿ ಹನುಮಾನ್ ದೇವಸ್ಥಾನ ಪ್ರಕರಣ: ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

ಕಬ್ಬಳ ಗ್ರಾಮದಲ್ಲಿ ನೂತನ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಕಲಶಾರೋಹಣ; ಧಾರ್ಮಿಕ ಕೇಂದ್ರಗಳ ಜತೆಗೆ ಮಕ್ಕಳ ಶಿಕ್ಷಣಕ್ಕೂ ಆದ್ಯತೆ ನೀಡಲು ಜಗದ್ಗುರು ಡಾ. ಶಾಂತವೀರ ಮಹಾಸ್ವಾಮೀಜಿ ಕರೆ

ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫೈಗೆ ಶೀಘ್ರ ಪ್ರಸ್ತಾವನೆ ಸಲ್ಲಿಸಿ: ಸಚಿವ ಮಧು ಬಂಗಾರಪ್ಪ ಸೂಚನೆ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ; ಹಿರಿಯರ ಅನುಭವ ಮತ್ತು ಕೊಡುಗೆ ಸಮಾಜಕ್ಕೆ ದಾರಿದೀಪ: ಜಿ. ವಿಜಯ್ ಕುಮಾರ್

ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ಶಾಶ್ವತ ಪರಿಹಾರ ಕಲ್ಪಿಸಿ: ಸಚಿವ ಚಲುವರಾಯಸ್ವಾಮಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

Leave a Comment