ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ

On: August 24, 2026 3:51 PM
Follow Us:

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಮುಖ ರೈಲು ಸಂಪರ್ಕ ಕೇಂದ್ರವಾಗಿರುವ ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿ ಹಾಗೂ ಶ್ರೀ ಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸಂಸದ ಬಿ.ವೈ.ರಾಘವೇಂದ್ರ ಅವರು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಬೈಂದೂರು ರೈಲ್ವೇ ನಿಲ್ದಾಣವು ಕೇವಲ ಸ್ಥಳೀಯ ಪ್ರಯಾಣಿಕರಿಗೆ ಮಾತ್ರವಲ್ಲದೆ ಕೊಲ್ಲೂರು ಸೇರಿದಂತೆ ಕರಾವಳಿ ಭಾಗದ ಧಾರ್ಮಿಕ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಪ್ರಮುಖ ಸಂಪರ್ಕ ಕೊಂಡಿಯಾಗಿ ರೂಪುಗೊಳ್ಳುತ್ತಿದೆ ಎಂದು ಹೇಳಿದರು.

ಈ ಹಿಂದೆ ಕೇವಲ ಹಾಲ್ಟ್ ಸ್ಟೇಷನ್ ಆಗಿದ್ದ ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣವನ್ನು ₹2.64 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದ್ದು, ನೂತನ ನಿಲ್ದಾಣ ಕಟ್ಟಡ, ಗಣಕೀಕೃತ ಟಿಕೆಟ್ ಕಾದಿರಿಸುವಿಕೆ ವ್ಯವಸ್ಥೆ (PRS) ಹಾಗೂ ಪ್ಲಾಟ್‌ಫಾರ್ಮ್ ವಿಸ್ತರಣೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಇದರಿಂದ ಪ್ರಯಾಣಿಕರಿಗೆ ಟಿಕೆಟ್ ಕಾಯ್ದಿರಿಸುವಿಕೆ ಸೇರಿದಂತೆ ವಿವಿಧ ರೈಲ್ವೇ ಸೇವೆಗಳು ಸ್ಥಳೀಯವಾಗಿಯೇ ಲಭ್ಯವಾಗುವಂತಾಗಿದೆ.

ಒಂದು ಕಾಲದಲ್ಲಿ ಯಾವುದೇ ಎಕ್ಸ್‌ಪ್ರೆಸ್ ರೈಲು ನಿಲುಗಡೆ ಇಲ್ಲದಿದ್ದ ಬೈಂದೂರು ನಿಲ್ದಾಣದಲ್ಲಿ ಇಂದು 50ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ರೈಲುಗಳು ನಿಲುಗಡೆಯಾಗುತ್ತಿರುವುದು ಈ ಭಾಗದ ರೈಲು ಸಂಪರ್ಕದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ರೈಲುಗಳ ಸಂಖ್ಯೆ ಹಾಗೂ ನಿಲುಗಡೆ ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಯಾಣಿಕರ ಓಡಾಟವೂ ಹೆಚ್ಚಿದ್ದು, ನೂರಾರು ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ ಉದ್ಯೋಗ ಮತ್ತು ಆದಾಯದ ಅವಕಾಶಗಳು ಸೃಷ್ಟಿಯಾಗಿವೆ ಎಂದು ರಾಘವೇಂದ್ರ ತಿಳಿಸಿದರು.

ಶ್ರೀ ಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಪ್ರತಿನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣವು ಕೊಲ್ಲೂರು ದೇವಸ್ಥಾನದಿಂದ ಸುಮಾರು 27 ಕಿ.ಮೀ. ದೂರದಲ್ಲಿದ್ದು, ರಾಷ್ಟ್ರೀಯ ಹೆದ್ದಾರಿ-766ಸಿ ಮೂಲಕ ನೇರ ರಸ್ತೆ ಸಂಪರ್ಕ ಹೊಂದಿದೆ.

ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಗೋವಾ ಸೇರಿದಂತೆ ವಿವಿಧ ರಾಜ್ಯಗಳಿಂದ ರೈಲಿನ ಮೂಲಕ ಕೊಲ್ಲೂರಿಗೆ ಆಗಮಿಸುವ ಭಕ್ತರಿಗೆ ಈ ನಿಲ್ದಾಣ ಅತ್ಯಂತ ಅನುಕೂಲಕರವಾಗಿದೆ. ಹೀಗಾಗಿ ಮೂಕಾಂಬಿಕಾ ರೋಡ್ ಬೈಂದೂರು ನಿಲ್ದಾಣವನ್ನು ಶ್ರೀ ಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಅಧಿಕೃತ ರೈಲು ನಿಲ್ದಾಣವಾಗಿ ಗುರುತಿಸುವಂತೆ ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದು ಸಂಸದರು ಹೇಳಿದರು.

ಈ ರೀತಿಯ ಅಧಿಕೃತ ಮಾನ್ಯತೆ ದೊರೆತಲ್ಲಿ ಕೊಲ್ಲೂರು ಕ್ಷೇತ್ರದ ಧಾರ್ಮಿಕ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ದೊರೆಯುವುದಲ್ಲದೆ, ದೇಶದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರಿಗೆ ಪ್ರಯಾಣ ವ್ಯವಸ್ಥೆ ಸುಲಭವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬೈಂದೂರು ರೈಲ್ವೇ ನಿಲ್ದಾಣವು ಉಡುಪಿ ಜಿಲ್ಲಾ ಕೇಂದ್ರದ ನಂತರ ಅತಿ ಹೆಚ್ಚು ಆದಾಯ ತರುವ ಪ್ರಮುಖ ನಿಲ್ದಾಣಗಳಲ್ಲಿ ಒಂದಾಗಿದೆ. ಹೀಗಾಗಿ ನಿಲ್ದಾಣವನ್ನು ಸಂಪೂರ್ಣ ಸೌಲಭ್ಯಗಳನ್ನು ಹೊಂದಿರುವ ‘Fully Fledged’ ರೈಲ್ವೇ ನಿಲ್ದಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ₹86 ಕೋಟಿ ವೆಚ್ಚದ ಸಮಗ್ರ ಅಭಿವೃದ್ಧಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಬಿ.ವೈ.ರಾಘವೇಂದ್ರ ತಿಳಿಸಿದರು.

ಪ್ರಸ್ತಾವನೆ ಜಾರಿಯಾದರೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಮೂಲಸೌಕರ್ಯ, ಪ್ಲಾಟ್‌ಫಾರ್ಮ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ವಿಸ್ತರಿಸಲು ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ಬೈಂದೂರು ನಿಲ್ದಾಣವನ್ನು ಈ ಭಾಗದ ಪ್ರಮುಖ ರೈಲು ಸಾರಿಗೆ ಕೇಂದ್ರವನ್ನಾಗಿ ರೂಪಿಸುವ ಗುರಿಯಿದೆ ಎಂದರು.

ಬೈಂದೂರು ನಿಲ್ದಾಣದಲ್ಲಿ ಪ್ರಸ್ತುತ ಹಲವು ಎಕ್ಸ್‌ಪ್ರೆಸ್ ರೈಲುಗಳು ನಿಲುಗಡೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಪ್ರಮುಖ ನಗರಗಳು ಹಾಗೂ ವಿವಿಧ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಇನ್ನಷ್ಟು ರೈಲುಗಳ ನಿಲುಗಡೆಗೆ ಪ್ರಯತ್ನ ಮುಂದುವರಿಸಲಾಗುವುದು ಎಂದು ಸಂಸದರು ಹೇಳಿದರು.

ಅದೇ ರೀತಿ ಬಿಜೂರು ಹಾಗೂ ಸೇನಾಪುರ ರೈಲ್ವೇ ನಿಲ್ದಾಣಗಳಲ್ಲಿಯೂ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಕಲ್ಪಿಸುವಂತೆ ರೈಲ್ವೇ ಇಲಾಖೆಗೆ ಮನವಿ ಮಾಡಲಾಗಿದೆ. ಈ ನಿಲುಗಡೆಗಳು ಮಂಜೂರಾದಲ್ಲಿ ಸ್ಥಳೀಯ ಪ್ರಯಾಣಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು ಹಾಗೂ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬೈಂದೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು ನೈಸರ್ಗಿಕ ಸೌಂದರ್ಯ ಹಾಗೂ ಪ್ರವಾಸಿ ತಾಣಗಳಿಂದ ಕೂಡಿವೆ. ರೈಲು ಸಂಪರ್ಕದ ವಿಸ್ತರಣೆ ಹಾಗೂ ಹೆಚ್ಚಿನ ರೈಲು ನಿಲುಗಡೆಗಳಿಂದ ಮರವಂತೆ ಕಡಲತೀರ, ಒತ್ತಿನೆಣೆ ಸೂರ್ಯಾಸ್ತ ತಾಣ ಸೇರಿದಂತೆ ಕರಾವಳಿ ಭಾಗದ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ ಹೆಚ್ಚಾಗಲಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದ ಧಾರ್ಮಿಕ ಪ್ರವಾಸೋದ್ಯಮದ ಜೊತೆಗೆ ಕರಾವಳಿಯ ನೈಸರ್ಗಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೂ ಉತ್ತಮ ರೈಲು ಸಂಪರ್ಕ ಪೂರಕವಾಗಲಿದೆ. ಇದರಿಂದ ಸ್ಥಳೀಯ ವ್ಯಾಪಾರ, ಹೋಟೆಲ್ ಉದ್ಯಮ, ಸಾರಿಗೆ ಕ್ಷೇತ್ರ ಹಾಗೂ ಪ್ರವಾಸೋದ್ಯಮ ಆಧಾರಿತ ಉದ್ಯೋಗಾವಕಾಶಗಳಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ ಎಂದು ಬಿ.ವೈ.ರಾಘವೇಂದ್ರ ಹೇಳಿದರು.

ಬೈಂದೂರು ರೈಲ್ವೇ ನಿಲ್ದಾಣದ ಅಭಿವೃದ್ಧಿ ಕೇವಲ ರೈಲ್ವೇ ಇಲಾಖೆಗೆ ಸೀಮಿತವಾಗದೆ, ಕೊಲ್ಲೂರು ಕ್ಷೇತ್ರದ ಭಕ್ತರು, ಸ್ಥಳೀಯ ಜನತೆ, ಪ್ರವಾಸಿಗರು ಹಾಗೂ ಕರಾವಳಿ ಭಾಗದ ಸಮಗ್ರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಹಂತ ಹಂತವಾಗಿ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.

K.M.Sathish Gowda

Join WhatsApp

Join Now

Facebook

Join Now

Read more

ರಾಜ್ಯಪಾಲರಿಗೂ ಮನವಿ ಸಲ್ಲಿಕೆ: ವಿರೋಧ ಪಕ್ಷವನ್ನು ಎದುರಿಸಲಾಗದೆ ಪಲಾಯನ ಮಾಡಿದ ಸರ್ಕಾರ – ಬಿ.ವೈ. ವಿಜಯೇಂದ್ರ ಆರೋಪ

ಸಿರಿಗೆರೆ ಸ್ವಚ್ಛತೆಗೆ ಶ್ರೀ ತರಳಬಾಳು ಮಠದ ಮತ್ತೊಂದು ಕೊಡುಗೆ: ₹13 ಲಕ್ಷ ವೆಚ್ಚದ ನೂತನ ಕಸ ವಿಲೇವಾರಿ ವಾಹನ

ಕರ್ನಾಟಕದಲ್ಲಿ SIR ಕರಡು ಮತದಾರರ ಪಟ್ಟಿ ಪ್ರಕಟ; 1.08 ಕೋಟಿ ಹೆಸರುಗಳು ಡಿಲೀಟ್: ಆಕ್ಷೇಪಣೆಗೆ ಸೆ.23ರವರೆಗೆ ಅವಕಾಶ

ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಗೆ ವೇಗ: ತಾಂತ್ರಿಕ ಅಡ್ಡಿ ನಿವಾರಣೆಗೆ ಎರಡು ವಾರಗಳ ಗಡುವು ನೀಡಿದ ಶ್ರೀ ತರಳಬಾಳು ಜಗದ್ಗುರುಗಳು

ಶಿಗ್ಗಾವಿ ಹನುಮಾನ್ ದೇವಸ್ಥಾನ ಪ್ರಕರಣ: ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರೇರಣ ಶಿಬಿರ: ಮಹಿಳೆಯರ ಸಾಧನೆ ಸಮಾಜದ ಪ್ರಗತಿಗೆ ಶಕ್ತಿ: ಶಕುಂತಲಾ ಚಂದ್ರಶೇಖರ್

Leave a Comment