ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ದೊರೆತಿರುವುದು ಸಂತಸದ ಸಂಗತಿ; ಪಾರದರ್ಶಕ ಹಾಗೂ ಜನಪರ ಆಡಳಿತಕ್ಕೆ ಆದ್ಯತೆ: ಸಚಿವ ಈಶ್ವರ್ ಬಿ. ಖಂಡ್ರೆ
ಬೆಂಗಳೂರು: ರಾಜ್ಯದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ಕರ್ನಾಟಕದ ಪ್ರತಿಯೊಂದು ಗ್ರಾಮ, ಪಟ್ಟಣ ಹಾಗೂ ನಗರಕ್ಕೂ ಸಮಾನವಾಗಿ ತಲುಪಬೇಕು. ಗ್ರಾಮೀಣ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಸಮತೋಲಿತ ಹಾಗೂ ಸಮಗ್ರ ಕರ್ನಾಟಕ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಾರ್ಗದರ್ಶನ ನೀಡಿದರು.
ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ತರಳಬಾಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರದಲ್ಲಿ ಕರ್ನಾಟಕ ಸರ್ಕಾರದ ನೂತನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ್ ಬಿ. ಖಂಡ್ರೆ ಅವರು ಶ್ರೀ ತರಳಬಾಳು ಜಗದ್ಗುರುಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಂದರ್ಭದಲ್ಲಿ ಜಗದ್ಗುರುಗಳು ಈ ಸಲಹೆ ನೀಡಿದರು.

ಗ್ರಾಮಾಭ್ಯುದಯವೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬುನಾದಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದ್ದು, ರಾಜ್ಯದ ಬಹುಪಾಲು ಜನರ ಜೀವನಮಟ್ಟದ ಸುಧಾರಣೆಯೊಂದಿಗೆ ನೇರವಾಗಿ ಸಂಪರ್ಕ ಹೊಂದಿದೆ. ಮಹಾತ್ಮ ಗಾಂಧೀಜಿಯವರು ಪ್ರತಿಪಾದಿಸಿದ ಗ್ರಾಮ ಸ್ವರಾಜ್ಯದ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಶ್ರೀ ಜಗದ್ಗುರುಗಳು ಸಚಿವರಿಗೆ ತಿಳಿಸಿದರು.
ಗ್ರಾಮಗಳಲ್ಲಿ ಮೂಲಸೌಕರ್ಯ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಉದ್ಯೋಗಾವಕಾಶ, ಸ್ವಚ್ಛತೆ ಹಾಗೂ ಸ್ಥಳೀಯ ಆಡಳಿತ ವ್ಯವಸ್ಥೆ ಬಲಪಡಿಸಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ನಿಜವಾದ ಅರ್ಥದಲ್ಲಿ ಸಮಗ್ರವಾಗುತ್ತದೆ. ಗ್ರಾಮಗಳು ಬಲಿಷ್ಠವಾಗದೆ ರಾಜ್ಯದ ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿ ಪೂರ್ಣವಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಬೆಂಗಳೂರು ಮೇಲಿನ ಒತ್ತಡ ಕಡಿಮೆ ಮಾಡಲು ಅಭಿವೃದ್ಧಿಯ ವಿಕೇಂದ್ರೀಕರಣ ಅಗತ್ಯ
ಕರ್ನಾಟಕದ ಅಭಿವೃದ್ಧಿ ಎಂದರೆ ಬೆಂಗಳೂರು ಮಾತ್ರ ಅಭಿವೃದ್ಧಿಯಾಗುವುದಲ್ಲ. ರಾಜ್ಯದ ಎಲ್ಲ ಜಿಲ್ಲೆಗಳು ಮತ್ತು ಪ್ರದೇಶಗಳು ಸಮಾನ ಅವಕಾಶಗಳೊಂದಿಗೆ ಮುನ್ನಡೆಯುವಂತಾಗಬೇಕು. ಬೆಂಗಳೂರು ಜ್ಞಾನ ಸೃಷ್ಟಿ, ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಯ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಬೆಳೆಯಬೇಕು. ಆದರೆ ಉದ್ಯೋಗ, ಕೈಗಾರಿಕೆ, ಶಿಕ್ಷಣ, ಆರೋಗ್ಯ ಮತ್ತು ಇತರ ಚಟುವಟಿಕೆಗಳನ್ನು ರಾಜ್ಯದ ವಿವಿಧ ನಗರಗಳು ಹಾಗೂ ಪ್ರದೇಶಗಳಿಗೆ ವಿಕೇಂದ್ರೀಕರಿಸುವ ಅಗತ್ಯವಿದೆ ಎಂದು ಶ್ರೀ ಜಗದ್ಗುರುಗಳು ಹೇಳಿದರು.
ಬೆಂಗಳೂರು ನಗರ ತನ್ನ ಹೊರುವ ಸಾಮರ್ಥ್ಯದ ಮಿತಿಯನ್ನು ತಲುಪುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ, ತ್ಯಾಜ್ಯ ನಿರ್ವಹಣೆ, ಕೊಳಚೆ ನೀರಿನ ವಿಲೇವಾರಿ, ಕುಡಿಯುವ ನೀರು ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಯ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಜನರು ಉದ್ಯೋಗ ಮತ್ತು ಉತ್ತಮ ಜೀವನಕ್ಕಾಗಿ ಬೆಂಗಳೂರಿನತ್ತ ವಲಸೆ ಬರುವ ಪರಿಸ್ಥಿತಿಯನ್ನು ತಗ್ಗಿಸಬೇಕು ಎಂದರು.
‘ಬೆಂಗಳೂರು ಕೇಂದ್ರಿತ ಅಭಿವೃದ್ಧಿ’ಯಿಂದ ‘ಸಮಗ್ರ ಕರ್ನಾಟಕದ ಅಭಿವೃದ್ಧಿ’ಯತ್ತ ರಾಜ್ಯ ಸಾಗಬೇಕಿದ್ದು, ಇದಕ್ಕಾಗಿ ಅಭಿವೃದ್ಧಿಯ ವಿಕೇಂದ್ರೀಕರಣವೇ ಪರಿಣಾಮಕಾರಿ ಮಾರ್ಗವಾಗಿದೆ ಎಂದು ಅವರು ತಿಳಿಸಿದರು.

ಮೂರನೇ ಬಾರಿ ಸಚಿವ ಸ್ಥಾನ ಗುರು-ದೈವಾನುಗ್ರಹದ ಫಲ: ಈಶ್ವರ್ ಬಿ. ಖಂಡ್ರೆ
ಶ್ರೀ ತರಳಬಾಳು ಜಗದ್ಗುರುಗಳವರ ಆಶೀರ್ವಾದ ಪಡೆದ ಸಚಿವ ಈಶ್ವರ್ ಬಿ. ಖಂಡ್ರೆ ಅವರು, ಮೂರನೇ ಬಾರಿಗೆ ಸಚಿವ ಸ್ಥಾನ ದೊರೆತಿರುವುದು ಗುರು ಹಾಗೂ ದೈವಾನುಗ್ರಹದ ಫಲ ಎಂದು ಭಕ್ತಿಪೂರ್ವಕವಾಗಿ ಹೇಳಿದರು.
ಈ ಹಿಂದೆ ಅರಣ್ಯ ಇಲಾಖೆಯ ಜವಾಬ್ದಾರಿ ನಿರ್ವಹಿಸುವ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಹಾಗೂ ಅರಣ್ಯ ಸಂಪತ್ತಿನ ರಕ್ಷಣೆಗೆ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದೀಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿ ದೊರೆತಿದ್ದು, ಈ ಇಲಾಖೆಯ ಮೂಲಕ ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಸಚಿವರು ಹೇಳಿದರು.
ಇಲಾಖೆಯಲ್ಲಿ ಪಾರದರ್ಶಕತೆ, ಜವಾಬ್ದಾರಿತನ ಮತ್ತು ಪರಿಣಾಮಕಾರಿ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಸರ್ಕಾರದ ಯೋಜನೆಗಳ ಪ್ರಯೋಜನಗಳು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ನರೇಗಾ ಕಾರ್ಮಿಕರಿಗೆ ಸಕಾಲದಲ್ಲಿ ಕೂಲಿ ಪಾವತಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಕೂಲಿ ಪಾವತಿಯಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದರು.
ಕಾರ್ಮಿಕರು ಸಲ್ಲಿಸುವ ಶ್ರಮಕ್ಕೆ ತಕ್ಕ ಪ್ರತಿಫಲ ನಿಗದಿತ ಸಮಯದಲ್ಲಿ ದೊರೆಯಬೇಕು ಎಂಬುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ನರೇಗಾ ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ ಹಾಗೂ ಗುಣಮಟ್ಟ ಕಾಪಾಡಲು ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದರು.
ಗ್ರಾಮೀಣ ಪ್ರದೇಶದ ಬಡ ಕುಟುಂಬಗಳಿಗೆ ಉದ್ಯೋಗದ ಭದ್ರತೆ ಒದಗಿಸುವ ನರೇಗಾ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡರೆ ಗ್ರಾಮೀಣ ಆರ್ಥಿಕತೆಗೂ ಬಲ ಸಿಗಲಿದೆ ಎಂದು ಸಚಿವರು ಹೇಳಿದರು.
ತಂತ್ರಜ್ಞಾನ ಬಳಕೆಯಿಂದ ಪಂಚಾಯತ್ ಆಡಳಿತಕ್ಕೆ ಮತ್ತಷ್ಟು ಪಾರದರ್ಶಕತೆ
ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯವೈಖರಿಯನ್ನು ಆಧುನೀಕರಿಸುವ ಜೊತೆಗೆ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪರಿಣಾಮಕಾರಿತ್ವ ಹೆಚ್ಚಿಸಲು ತಂತ್ರಜ್ಞಾನದ ಸದ್ಬಳಕೆಗೆ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಇಲಾಖೆಯ ಆಸ್ತಿಗಳ ಸಮಗ್ರ ಮಾಹಿತಿ, ಅವುಗಳ ನಿರ್ವಹಣೆ ಹಾಗೂ ಮೇಲ್ವಿಚಾರಣೆಗೆ ರೂಪಿಸಿರುವ ‘ಜಲ ಆಸ್ತಿ’ ವೆಬ್ ಅಪ್ಲಿಕೇಶನ್ ಕುರಿತು ಸಚಿವರು ಶ್ರೀ ಜಗದ್ಗುರುಗಳಿಗೆ ವಿವರಿಸಿದರು.
ಡಿಜಿಟಲ್ ವ್ಯವಸ್ಥೆಯ ಮೂಲಕ ಸರ್ಕಾರಿ ಆಸ್ತಿಗಳ ನಿರ್ವಹಣೆ ಹಾಗೂ ಯೋಜನೆಗಳ ಮೇಲ್ವಿಚಾರಣೆ ನಡೆಸುವುದರಿಂದ ಆಡಳಿತದ ದಕ್ಷತೆ ಹೆಚ್ಚುವುದರ ಜೊತೆಗೆ ಸಾರ್ವಜನಿಕರಿಗೂ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಇಲಾಖೆಯ ಕಾರ್ಯವೈಖರಿಯಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿಗಳ ಆರ್ಥಿಕ ಸಬಲೀಕರಣಕ್ಕೆ ಕ್ರಮ
ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎಂಬ ಉದ್ದೇಶದಿಂದ ಪಂಚಾಯಿತಿಗಳ ಸ್ವಂತ ಸಂಪನ್ಮೂಲಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಈಶ್ವರ್ ಬಿ. ಖಂಡ್ರೆ ತಿಳಿಸಿದರು.
ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸ್ವತ್ತುಗಳನ್ನು ಸೂಕ್ತವಾಗಿ ತೆರಿಗೆ ವ್ಯಾಪ್ತಿಗೆ ತರುವ ಮೂಲಕ ಸ್ಥಳೀಯ ಸಂಸ್ಥೆಗಳ ಆದಾಯವನ್ನು ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (2ನೇ ತಿದ್ದುಪಡಿ) ವಿಧೇಯಕ–2026ಕ್ಕೆ ವಿಧಾನಸಭೆಯ ಅನುಮೋದನೆ ದೊರೆತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಅನುಮೋದನೆಯಿಲ್ಲದ ಹಾಗೂ ಯೋಜನಾ ರಹಿತ ಬಡಾವಣೆಗಳ ಅಸಮರ್ಪಕ ವಿಸ್ತರಣೆಗೆ ಕಡಿವಾಣ ಹಾಕುವುದು, ಗ್ರಾಮೀಣ ಪ್ರದೇಶಗಳಲ್ಲಿ ವ್ಯವಸ್ಥಿತ ಅಭಿವೃದ್ಧಿಗೆ ಉತ್ತೇಜನ ನೀಡುವುದು ಮತ್ತು ಸ್ಥಳೀಯ ಸಂಸ್ಥೆಗಳನ್ನು ಆರ್ಥಿಕವಾಗಿ ಬಲಪಡಿಸುವುದು ಈ ಕ್ರಮಗಳ ಪ್ರಮುಖ ಉದ್ದೇಶವಾಗಿದೆ ಎಂದು ಅವರು ವಿವರಿಸಿದರು.
ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು
ರಾಜ್ಯದ ಗ್ರಾಮೀಣ ಜನರಿಗೆ ನಿರಂತರವಾಗಿ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಸಚಿವರು ಹೇಳಿದರು.
ರಾಜ್ಯದಲ್ಲಿ ಒಟ್ಟು 20,340 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ 17,208 ಘಟಕಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತಿವೆ. ಕಾರ್ಯನಿರ್ವಹಿಸದ ಘಟಕಗಳನ್ನು ಶೀಘ್ರ ದುರಸ್ತಿಗೊಳಿಸಿ ಗ್ರಾಮೀಣ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಪ್ರತಿ ದುರಸ್ತಿಗೊಳಿಸಬೇಕಾದ ಘಟಕಕ್ಕೆ ₹3,000 ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಅನುದಾನ ಲಭ್ಯವಿಲ್ಲದ ಸಂದರ್ಭದಲ್ಲಿ ಇಲಾಖೆಯಿಂದಲೇ ಹಣ ಒದಗಿಸಲಾಗುವುದು. ಘಟಕಗಳ ದುರಸ್ತಿಗಾಗಿ ಒಟ್ಟು ₹29.50 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಈಗಾಗಲೇ ₹13 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಗ್ರಾಮೀಣ ಜನರ ಬದುಕು ಸುಧಾರಿಸುವುದೇ ಇಲಾಖೆಯ ಗುರಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯವ್ಯಾಪ್ತಿ ಕೇವಲ ರಸ್ತೆ, ಚರಂಡಿ ಅಥವಾ ಕಟ್ಟಡ ನಿರ್ಮಾಣಕ್ಕೆ ಸೀಮಿತವಾಗದೆ, ಗ್ರಾಮೀಣ ಜನರ ಜೀವನಮಟ್ಟವನ್ನು ಸಮಗ್ರವಾಗಿ ಸುಧಾರಿಸುವತ್ತ ಸಾಗಬೇಕು ಎಂಬುದು ಶ್ರೀ ತರಳಬಾಳು ಜಗದ್ಗುರುಗಳವರ ಆಶಯವಾಗಿದೆ.
ಗ್ರಾಮಗಳಲ್ಲಿ ಉತ್ತಮ ಮೂಲಸೌಕರ್ಯ, ಶುದ್ಧ ಕುಡಿಯುವ ನೀರು, ಉದ್ಯೋಗ, ಶಿಕ್ಷಣ, ಆರೋಗ್ಯ ಮತ್ತು ಬಲಿಷ್ಠ ಸ್ಥಳೀಯ ಆಡಳಿತ ವ್ಯವಸ್ಥೆ ನಿರ್ಮಾಣವಾದರೆ ಗ್ರಾಮೀಣ ಪ್ರದೇಶಗಳಿಂದ ನಗರಗಳತ್ತ ನಡೆಯುವ ಅನಿವಾರ್ಯ ವಲಸೆ ಕಡಿಮೆಯಾಗಲಿದೆ. ಇದರಿಂದ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಮೇಲಿನ ಒತ್ತಡವೂ ತಗ್ಗಲಿದೆ ಎಂದು ಜಗದ್ಗುರುಗಳು ಅಭಿಪ್ರಾಯಪಟ್ಟರು.
ಮಾರ್ಗದರ್ಶನವನ್ನು ಗೌರವದಿಂದ ಸ್ವೀಕರಿಸಿದ ಸಚಿವರು
ಗ್ರಾಮೀಣಾಭಿವೃದ್ಧಿ, ಪಂಚಾಯತ್ ವ್ಯವಸ್ಥೆಯ ಸಬಲೀಕರಣ, ಕುಡಿಯುವ ನೀರು, ಸ್ಥಳೀಯ ಸಂಸ್ಥೆಗಳ ಆರ್ಥಿಕ ಸದೃಢತೆ ಹಾಗೂ ರಾಜ್ಯದ ಸಮತೋಲಿತ ಅಭಿವೃದ್ಧಿಗೆ ಸಂಬಂಧಿಸಿದಂತೆ ಶ್ರೀ ತರಳಬಾಳು ಜಗದ್ಗುರುಗಳು ನೀಡಿದ ಮಾರ್ಗದರ್ಶನವನ್ನು ಸಚಿವ ಈಶ್ವರ್ ಬಿ. ಖಂಡ್ರೆ ಅವರು ಗೌರವದಿಂದ ಸ್ವೀಕರಿಸಿದರು.
ರೈತರು, ಗ್ರಾಮೀಣ ಜನರು ಹಾಗೂ ಸ್ಥಳೀಯ ಸಂಸ್ಥೆಗಳ ಹಿತಾಸಕ್ತಿಯನ್ನು ಕೇಂದ್ರದಲ್ಲಿಟ್ಟುಕೊಂಡು ಇಲಾಖೆಯ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ಶ್ರೀ ಜಗದ್ಗುರುಗಳವರಲ್ಲಿ ಅರಿಕೆ ಮಾಡಿಕೊಂಡರು.
ಗ್ರಾಮ ಬಲಿಷ್ಠವಾದರೆ ರಾಜ್ಯ ಬಲಿಷ್ಠವಾಗುತ್ತದೆ. ಗ್ರಾಮೀಣ ಪ್ರದೇಶಗಳ ಸಮತೋಲಿತ ಅಭಿವೃದ್ಧಿಯೇ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬುನಾದಿಯಾಗಿದ್ದು, ಈ ದಿಸೆಯಲ್ಲಿ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು ಎಂಬ ಆಶಯದೊಂದಿಗೆ ಶ್ರೀ ತರಳಬಾಳು ಜಗದ್ಗುರುಗಳು ಸಚಿವರಿಗೆ ಆಶೀರ್ವಾದ ನೀಡಿದರು.
ಈ ಸಂದರ್ಭದಲ್ಲಿ ಬೇಲೂರು ತಾಲ್ಲೂಕಿನ ಮುಖಂಡ ಹಾಗೂ ಉದ್ಯಮಿ ಗ್ರಾನೈಟ್ ರಾಜಶೇಖರ್, ತರಳಬಾಳು ಕೇಂದ್ರದ ಅಧ್ಯಕ್ಷರಾದ ಸಿ. ಚಂದ್ರಪ್ಪ, ಕಾರ್ಯದರ್ಶಿ ವಿಶ್ವನಾಥ್ ಬಾತಿ, ಚಿರಂಜೀವಿ ಜತ್ತಿ, ಶ್ರೀ ನಂದಿ ಡೆವಲಪರ್ ಗಂಗಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.






