ಬೆಂಗಳೂರು: ವಸೂಲಿವಾಲಾ ಸುರ್ಜೇವಾಲ ಕೇವಲ ರಾಜ್ಯ ಉಸ್ತುವಾರಿಯೋ? ಕರ್ನಾಟಕದ ಮುಖ್ಯಮಂತ್ರಿಯೋ? ಕಾಂಗ್ರೆಸ್ ಸ್ಪಷ್ಟಪಡಿಸಬೇಕು ಎಂದು ಜೆಡಿಎಸ್ ತಿಳಿಸಿದೆ.
ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್, ಇಷ್ಟು ದಿನ ಕಾಂಗ್ರೆಸ್ ಶಾಸಕರು ಹಾಗೂ ಸಚಿವರೊಂದಿಗೆ ಸಭೆ ನಡೆಸುತ್ತಿದ್ದ ರಣದೀಪ್ ಸುರ್ಜೇವಾಲಾ, ಈಗ ಸೂಪರ್ ಸಿಎಂ ರೀತಿ ಸರ್ಕಾರದ ಕಾರ್ಯದರ್ಶಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸುರ್ಜೇವಾಲಾಗೆ ಆ ಅಧಿಕಾರ ಕೊಟ್ಟವರು ಯಾರು? ಸರ್ಕಾರಿ ಅಧಿಕಾರಿಗಳ ಜೊತೆ ಸಭೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯ ಎಂದು ಕಿಡಿ ಕಾರಿದೆ.
ರಾಜ್ಯ ಆಡಳಿತರೂಢ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ, ಡಿಕೆಶಿ ಬಣಗಳ ನಡುವೆ ಅಧಿಕಾರಕ್ಕಾಗಿ ಅಂತರ್ಯುದ್ಧ ನಡೆಯುತ್ತಿದೆ. ಹೀಗಾಗಿ ಹೈಕಮಾಂಡ್ ಸದ್ದಿಲ್ಲದೆ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾರನ್ನೇ ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಿರುವ ಶಂಕೆಯೂ ವ್ಯಕ್ತವಾಗುತ್ತಿದೆ ಎಂದು ಜೆಡಿಎಸ್ ವ್ಯಂಗ್ಯವಾಡಿದೆ. ಹೈಕಮಾಂಡ್ ಗುಲಾಮಗಿರಿಯಲ್ಲಿ ತೊಡಗಿರುವ ಡಮ್ಮಿ ಸಿಎಂ ಸಿದ್ದರಾಮಯ್ಯ ಹಾಗೂ ಡಮ್ಮಿ ಡಿಸಿಎಂ ಡಿಕೆ ಶಿವಕುಮಾರ್ ಕರ್ನಾಟಕದ ಸ್ವಾಭಿಮಾನವನ್ನು ಅಡವಿಟ್ಟಿದ್ದಾರೆ. ಜೊತೆಗೆ ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಿರುವ ಜನಾದೇಶಕ್ಕೆ ಅಪಮಾನ, ವಿದ್ರೋಹ ಎಸಗುತ್ತಿದ್ದಾರೆ ಎಂದು ಜೆಡಿಎಸ್ ಟೀಕಿಸಿದೆ.
ಶಾಸಕರನ್ನು ಕರೆದು ಸುರ್ಜೇವಾಲಾ ಮೀಟಿಂಗ್ ಮಾಡಬಹುದು. ಆದರೆ ಸರ್ಕಾರಿ ಅಧಿಕಾರಿಗಳನ್ನು ಕರೆದು ಮಾತನಾಡುತ್ತಾರೆ ಎಂದರೆ ಅದು ಸಂವಿಧಾನಬಾಹಿರ ಕೃತ್ಯ ಆಗುತ್ತದೆ. ಅಧಿಕಾರಿಗಳನ್ನು ಕರೆದು ಅವರ ಜೊತೆಗೆ ಚರ್ಚೆ ಮಾಡುವುದು ಸಂವಿಧಾನ ವಿರೋಧಿ ಕೆಲಸ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ.