ಬೆಂಗಳೂರು: ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಸಾರುವ ಉದ್ದೇಶದಿಂದ ನವೆಂಬರ್ ತಿಂಗಳಿಡೀ ಖಾಸಗಿ ಹಾಗೂ ಸರ್ಕಾರಿ ಕಟ್ಟಡಗಳಲ್ಲಿ ಕನ್ನಡ ಬಾವುಟ ಹಾರಿಸುವ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ಕರ್ನಾಟಕ ಕೇವಲ ನಾಡಲ್ಲ, ಸಂಸ್ಕೃತಿಯ ಬೀಡು. ಕನ್ನಡ ಕೇವಲ ನುಡಿಯಲ್ಲ, ನಮ್ಮ ಅಂತರಂಗದ ಮಾತು. ಕಲಿತವರಿಗೆ ಅಮೃತ, ನಡೆದವರಿಗೆ ನೆರಳು, ದಾರಿದೀಪ, ಕನ್ನಡ ಎನ್ನುವುದು ಜೀವನದ ವಿಧಾನ, ಎಂದರು.
ಅವರು ಮುಂದುವರಿದು, ಕನ್ನಡಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಈ ನೆಲದಲ್ಲಿ ಏನೋ ವೈಶಿಷ್ಟ್ಯ ಅಡಗಿದೆ. ಇಲ್ಲಿಗೆ ಬಂದವರು ಹಿಂದಿರುಗುವುದಿಲ್ಲ. ಎಲ್ಲರನ್ನೂ ಒಳಗೊಂಡಿರುವ ಕರ್ನಾಟಕ ಶಾಂತಿಯ ನೆಲ. ಹೊರಗಿನಿಂದ ಬಂದವರು ಸಹ ಇಲ್ಲಿ ಊಟ, ವಸತಿ ಗಳಿಸಿದ್ದಾರೆ , ಇದೇ ನಮ್ಮ ಕನ್ನಡ ತಾಯಿ ಭೂಮಿಯ ವಿಶೇಷ. ಈ ನೆಲದ ಸಂಸ್ಕೃತಿ, ಜಲ, ವಾತಾವರಣ ದೇಶದ ಯಾವ ಭಾಗದಲ್ಲಿಯೂ ಇಲ್ಲ, ಎಂದು ಹೇಳಿದರು.

ಕನ್ನಡ ಮತ್ತು ಕರ್ನಾಟಕದ ಮಹತ್ವವನ್ನು ಎಲ್ಲರಿಗೂ ತಿಳಿಯುವಂತೆ ಮಾಡಲು ನವೆಂಬರ್ ತಿಂಗಳಿಡೀ ಕನ್ನಡ ಬಾವುಟ ಹಾರಾಟ ಕಡ್ಡಾಯಗೊಳಿಸುವ ಪ್ರಸ್ತಾವನೆ ಇದೆ ಎಂದು ತಿಳಿಸಿದ ಅವರು, “ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು,” ಎಂದರು.
ಎಲ್ಲಾ ಕನ್ನಡಿಗರನ್ನು ಒಗ್ಗೂಡಿಸಬೇಕು. ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ಮರೆಯಬಾರದು. ಅನೇಕ ಹಿರಿಯರು ಈ ಭಾಷೆ, ನೆಲ, ಜಲ, ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯಕ್ಕೂ ಧ್ವಜ ಮತ್ತು ನಾಡಗೀತೆ ಎರಡೂ ಇಲ್ಲ, ಆದರೆ ನಾವು ಹೆಮ್ಮೆಯಿಂದ ಇವೆರಡನ್ನೂ ಹೊಂದಿದ್ದೇವೆ, ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ, ಸರ್ಕಾರಿ ಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ, ಹಾಗೂ ಉದ್ಯಮಗಳು, ಕಾರ್ಖಾನೆಗಳು ಮತ್ತು ವಾಣಿಜ್ಯ ಕೇಂದ್ರಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯ ಮಾಡಲಾಗಿದೆ ಎಂದು ಅವರು ತಿಳಿಸಿದರು. ಈ ವರ್ಷ ಕನ್ನಡದ ಹಬ್ಬವು ಸಮೃದ್ಧಿಯಿಂದ ಕೂಡಿದೆ, ಎಂದು ಉಪಮುಖ್ಯಮಂತ್ರಿಗಳು ಹೇಳಿದರು.






