ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಉಗ್ರರು, ಅತ್ಯಾಚಾರಿಗಳು, ಕೊಲೆ ಆರೋಪಿಗಳು ಸೇರಿದಂತೆ ಅಪರಾಧಿಗಳಿಗೆ ರಾಜಾತಿಥ್ಯ ಸಿಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಭಾರಿ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, “ಕಾಂಗ್ರೆಸ್ ಸರ್ಕಾರವು ಅಪರಾಧಿಗಳಿಗೆ ವಿಶೇಷ ಸವಲತ್ತು ನೀಡುವ ಮೂಲಕ ನೈತಿಕತೆ ಕಳೆದುಕೊಂಡ ದುರಾಡಳಿತ ನಡೆಸುತ್ತಿದೆ. ಉಗ್ರ ಸಂಘಟನೆ ISIS ಗೆ ಸಂಪರ್ಕ ಹೊಂದಿದ್ದ ಹಮೀದ್ ಶಕೀಲ್ ಮನ್ನಾನಿ ಮತ್ತು ಅತ್ಯಾಚಾರಿ ಉಮೇಶ್ ರೆಡ್ಡಿಯಂತಹ ಅಪರಾಧಿಗಳಿಗೆ ಐಷಾರಾಮಿ ಸೌಕರ್ಯ ಒದಗಿಸುವುದು ರಾಷ್ಟ್ರದ್ರೋಹದ ಕೃತ್ಯ. ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ,” ಎಂದು ಖಂಡಿಸಿದರು.

ಪ್ರತಿಭಟನಾಕಾರರು, ಜೈಲು ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ತಕ್ಷಣವೇ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸಬೇಕು,
ಗೃಹಸಚಿವರು ರಾಜೀನಾಮೆ ನೀಡಬೇಕು,
ಮುಖ್ಯಮಂತ್ರಿಗಳು ನೈತಿಕ ಜವಾಬ್ದಾರಿ ಹೊತ್ತು ಕ್ರಮ ಕೈಗೊಳ್ಳಬೇಕು, ಎಂದು ಆಗ್ರಹಿಸಿದರು.
ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಅಶ್ವತ್ಥನಾರಾಯಣ, ಮಾಜಿ ಸಚಿವರು ಸಿಟಿ ರವಿ, ಜಿ.ಗೋಪಾಲಯ್ಯ, ಶಾಸಕರಾದ ಎಂ.ಕೃಷ್ಣಪ್ಪ, ಉದಯ್ ಗರುಡಾಚಾರ್, ಎಂ.ಮುನಿರಾಜು, ಯುವಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕರಾದ ಧೀರಜ್ ಮುನಿರಾಜು, ಜಿಲ್ಲಾಧ್ಯಕ್ಷರಾದ ಸಿ.ಕೆ.ರಾಮಮೂರ್ತಿ, ಎಸ್.ಹರೀಶ್, ಸಪ್ತಗಿರಿ ಗೌಡ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.






