ಬೆಳಗಾವಿ: ರಾಜ್ಯದಲ್ಲಿ ರೈತರ ಸಮಸ್ಯೆಗಳಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸದೆ, ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿ, ಬಿಜೆಪಿ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ಮುತ್ತಿಗೆ ನೀಡಿ ಬೃಹತ್ ಪ್ರತಿಭಟನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಗೆ ಸಾವಿರಾರು ರೈತರು ಸೇರಿ ಪಕ್ಷದ ನಾಯಕರು, ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.
ರೈತರ ಬೇಡಿಕೆಗಳನ್ನು ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಪ್ರತಿಭಟನೆಯಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಂಡಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುವರ್ಣಸೌಧದತ್ತ ಮುಂದಾದ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಕಟ್ಟುನಿಟ್ಟಿನ ಬಂದೋಬಸ್ತ್ ಏರ್ಪಡಿಸಿ ಬ್ಯಾರಿಕೇಡ್ಗಳ ಮೂಲಕ ಅವರನ್ನು ನಿರ್ಬಂಧಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ರೈತರ ಹೋರಾಟ ಯಶಸ್ವಿಯಾಗುವವರೆಗೆ ನಿದ್ದೆ ಮಾಡಲ್ಲ. ನಮ್ಮ ಹೋರಾಟ ನಿರಂತರವಾಗಿರುತ್ತದೆ. ಬಿಜೆಪಿಯು ಸದಾ ರೈತರ ಪರ ನಿಂತಿದೆ. ಆದರೆ ಪ್ರಸ್ತುತ ಸರ್ಕಾರ ಮಾತಿನ ನಾಟಕವಷ್ಟೇ ಮಾಡುತ್ತಿದೆ” ಎಂದು ಸರ್ಕಾರವನ್ನು ಟೀಕಿಸಿದರು.
ಸಿದ್ದರಾಮಯ್ಯ ಸರ್ಕಾರ ಕೇಂದ್ರದ ವಿರುದ್ಧ ಸುಳ್ಳು ಪ್ರಚಾರ ಮಾಡುತ್ತಿದೆ ಎಂಬ ಆರೋಪ ಹೊರಿಸಿದ ವಿಜಯೇಂದ್ರ, “2.5 ವರ್ಷಗಳ ಅವಧಿಯಲ್ಲಿ 2,500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಪರ ಯಾವುದೇ ಹೊಸ ಯೋಜನೆಗಳನ್ನು ಘೋಷಿಸಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಹಲವು ಶಾಸಕರು, ಮಾಜಿ ಸಚಿವರು, ರಾಜ್ಯ–ಜಿಲ್ಲಾ ಪದಾಧಿಕಾರಿಗಳು ಮತ್ತು ರೈತ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.






