ಬೆಂಗಳೂರು, ಡಿ.20: ಹೈಕಮಾಂಡ್ ನಾಯಕರು ಸೂಕ್ತ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನಗೆ ಕರೆಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಆ ವೇಳೆ ಇಬ್ಬರೂ ಒಟ್ಟಾಗಿ ದೆಹಲಿಗೆ ತೆರಳುತ್ತೇವೆ. ಇದರಲ್ಲಿ ಯಾವುದೇ ಗುಪ್ತತೆಯ ಪ್ರಶ್ನೆಯೇ ಇಲ್ಲ. ನಾನು ಕದ್ದುಮುಚ್ಚಿ ಹೋಗುವ ವ್ಯಕ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಶನಿವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ನಾಯಕರು ಆಹ್ವಾನ ನೀಡಿದರೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. “ಹೈಕಮಾಂಡ್ ನಾಯಕರು ನಮ್ಮಿಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಆಗ ನಾವು ದೆಹಲಿಗೆ ಹೋಗುತ್ತೇವೆ” ಎಂದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಚಾರ್ಜ್ಶೀಟ್ ಕೋರ್ಟ್ನಲ್ಲಿ ತಿರಸ್ಕೃತಗೊಂಡಿದೆ. ಈಗ ಒಂದು ಎಫ್ಐಆರ್ ಮಾತ್ರ ಬಾಕಿ ಉಳಿದಿದೆ. ನಮ್ಮ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯ ವಿರುದ್ಧವೇ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.
ವಿಧಾನ ಮಂಡಲ ಅಧಿವೇಶನದ ಬಳಿಕ ತಾವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಕುರಿತು ಚರ್ಚೆ ನಡೆಯುತ್ತಿದೆ ಎಂಬ ಪ್ರಶ್ನೆಗೆ, “ಆ ರೀತಿ ಏನಾದರೂ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ” ಎಂದು ಹೇಳಿದರು.
ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಕುರಿತು ಕೇಳಿದಾಗ, “ನಾನು ಮಂಗಳವಾರ ದೆಹಲಿಗೆ ತೆರಳುತ್ತೇನೆ. ಆ ವೇಳೆ ದೆಹಲಿ ಪೊಲೀಸರನ್ನು ಭೇಟಿ ಮಾಡುತ್ತೇನೆ. ಜೊತೆಗೆ ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಕರೆದಿರುವ ಸಭೆಯಲ್ಲಿ ಭಾಗವಹಿಸುತ್ತೇನೆ” ಎಂದರು.
ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ ಅವರು, ಕೇಂದ್ರ ಅರಣ್ಯ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರನ್ನು ಭೇಟಿಯಾಗಲು ಸಮಯ ಕೋರಿರುವುದಾಗಿ ಹೇಳಿದರು. “ರಾಜ್ಯದ ಹಿತಾಸಕ್ತಿಗಾಗಿ ಈ ಭೇಟಿಗಳು ಅಗತ್ಯ. ಎಲ್ಲ ಕಾರ್ಯ ಕ್ರಮಗಳು ಮುಗಿದ ಬಳಿಕ ಅವಕಾಶ ದೊರೆತರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ” ಎಂದು ಹೇಳಿದರು.
ನಾಗಸಾಧುಗಳು ಆಶೀರ್ವಾದ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ಅವರು ಮನೆಗೆ ಬಂದಿದ್ದಾರೆ. ಮನೆಗೆ ಬಂದವರನ್ನು ತಿರಸ್ಕರಿಸಲು ಸಾಧ್ಯವಿಲ್ಲ. ರಾಜಕೀಯದಲ್ಲಿರುವ ಕಾರಣ ಸಾಧು–ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲ ವರ್ಗದ ಜನರ ಆಶೀರ್ವಾದ ನಮಗೆ ಅಗತ್ಯ” ಎಂದರು.
“ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯನ್ನು ನಿರ್ವಹಿಸುತ್ತಿದ್ದು, ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಸಂಸ್ಥೆಗಳಿಗೆ ಸಹಾಯ ಮಾಡುತ್ತಿದೆ” ಎಂದು ಅವರು ಹೇಳಿದರು.






