ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆಗಳು ಇಲೆಕ್ಟ್ರಾನಿಕ್ ಮತಯಂತ್ರ (EVM) ಬಳಕೆಯಿಲ್ಲದೆ ಬ್ಯಾಲೆಟ್ ಪೇಪರ್ನಲ್ಲೇ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್. ಸಂಗ್ರೇಶ್ ಅವರು ಸ್ಪಷ್ಟಪಡಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗಳಿಗೆ ಮಾತ್ರ ಇವಿಎಂ ಬಳಸಲಾಗಿದೆ. ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ನಲ್ಲಿ ನಡೆಸಲು ಯಾವುದೇ ಅಡ್ಡಿಯಿಲ್ಲ. ಹೀಗಾಗಿ ಜಿಬಿಎ, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆಗಳು ಬ್ಯಾಲೆಟ್ ಪೇಪರ್ನಲ್ಲೇ ನಡೆಯಲಿವೆ ಎಂದು ತಿಳಿಸಿದರು.
ಸಾಕಷ್ಟು ಸಾರ್ವಜನಿಕರು ಹಾಗೂ ಸಂಘಟನೆಗಳು ಬ್ಯಾಲೆಟ್ ಅಥವಾ ಇವಿಎಂ ಯಾವುದು ಸೂಕ್ತ ಎಂಬ ಬಗ್ಗೆ ಪತ್ರಗಳನ್ನು ಸಲ್ಲಿಸಿದ್ದರು. ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಬ್ಯಾಲೆಟ್ ಪೇಪರ್ ಪದ್ಧತಿಯೇ ಹೆಚ್ಚು ಸೂಕ್ತ ಎಂದು ಆಯೋಗ ತೀರ್ಮಾನಿಸಿದೆ ಎಂದು ಅವರು ವಿವರಿಸಿದರು.

ಮೇ–ಜೂನ್ನಲ್ಲಿ ಜಿಲ್ಲಾ, ತಾಲೂಕು ಪಂಚಾಯ್ತಿ ಚುನಾವಣೆ ಸಾಧ್ಯತೆ
ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗಳನ್ನು ಮೇ ಅಥವಾ ಜೂನ್ ತಿಂಗಳಲ್ಲಿ ನಡೆಸುವ ಉದ್ದೇಶವಿದೆ ಎಂದು ಆಯುಕ್ತರು ಹೇಳಿದರು.
ಆದರೆ, ಡಿಲಿಮಿಟೇಷನ್ (ಮತಕ್ಷೇತ್ರ ಪುನರ್ವಿಂಗಡಣೆ) ವರದಿ ಸರ್ಕಾರದಿಂದ ಇನ್ನೂ ಸಲ್ಲಿಕೆಯಾಗಬೇಕಿದ್ದು, ಜನವರಿ 30ರಂದು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಒಂದು ಅರ್ಜಿಯ ತೀರ್ಪಿನ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಗ್ರಾಮ ಪಂಚಾಯ್ತಿ ಚುನಾವಣೆ ಕೂಡ ನಡೆಸಬೇಕಿದ್ದು, ಅದೂ ಬ್ಯಾಲೆಟ್ ಪೇಪರ್ನಲ್ಲೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ಜಿಬಿಎ ವ್ಯಾಪ್ತಿಯಲ್ಲಿ 88.91 ಲಕ್ಷ ಮತದಾರರು
ಈ ಸಂದರ್ಭದಲ್ಲಿ ಮಾತನಾಡಿದ ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುವ ಐದು ನಗರ ಪಾಲಿಕೆಗಳ ವಾರ್ಡ್ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಮನೆಮನೆಗೆ ಬಿಎಲ್ಓ ಪರಿಶೀಲನೆ
ಜನವರಿ 20ರಿಂದ ಫೆಬ್ರವರಿ 3ರವರೆಗೆ ಬೂತ್ ಲೆವಲ್ ಅಧಿಕಾರಿಗಳು (BLO) ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಅವಧಿಯಲ್ಲಿ ಹಕ್ಕು (Claim) ಮತ್ತು ಆಕ್ಷೇಪಣೆ (Objection) ಸಲ್ಲಿಸಲು ಅವಕಾಶವಿದ್ದು, ಅವುಗಳ ವಿಲೇವಾರಿಯನ್ನು ಫೆಬ್ರವರಿ 4ರಿಂದ ಮುಂದುವರೆಸಲಾಗುವುದು ಎಂದು ತಿಳಿಸಿದರು.
ಮಾರ್ಚ್ 16ರಂದು ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ ನಡೆಯಲಿದೆ.
ಜಾಲತಾಣದಲ್ಲಿ ಮತದಾರರ ಪಟ್ಟಿ ಲಭ್ಯ
ಜಿಬಿಎ ವ್ಯಾಪ್ತಿಯ ವಾರ್ಡ್ವಾರು ಕರಡು ಮತದಾರರ ಪಟ್ಟಿಯನ್ನು ಜಿಬಿಎ ಅಧಿಕೃತ ಜಾಲತಾಣ
👉 https://gba.karnataka.gov.in/home
ನಲ್ಲಿ ಪಿಡಿಎಫ್ ರೂಪದಲ್ಲಿ ಪ್ರಕಟಿಸಲಾಗುವುದು.
ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರಿರುವುದನ್ನು ಪರಿಶೀಲಿಸಿ, ಹೆಸರಿಲ್ಲದಿದ್ದಲ್ಲಿ ತಕ್ಷಣ ಅರ್ಜಿ ಸಲ್ಲಿಸಿ ಸೇರ್ಪಡೆ ಮಾಡಿಕೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಮನವಿ ಮಾಡಿದೆ. 18 ವರ್ಷ ಪೂರೈಸಿದ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಆಯುಕ್ತರು ಕೋರಿದರು.
ರಾಜಕೀಯ ಪಕ್ಷಗಳೊಂದಿಗೆ ಸಭೆ
ಈ ಸಂಬಂಧ ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಪ್ರತಿ ವಾರ್ಡ್ನ ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಲೆವಲ್ ಏಜೆಂಟ್ಗಳನ್ನು (BLA) ನೇಮಿಸಿ, ಮತದಾರರ ನೋಂದಣಿ ಹಾಗೂ ಪರಿಶೀಲನಾ ಕಾರ್ಯದಲ್ಲಿ ಚುನಾವಣಾಧಿಕಾರಿಗಳಿಗೆ ಸಹಕಾರ ನೀಡುವಂತೆ ಸೂಚಿಸಲಾಯಿತು.
ಸಭೆಯಲ್ಲಿ ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್, ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಡಿ.ಎಸ್., ಡಾ. ರಾಜೇಂದ್ರ ಕೆ.ವಿ, ಚುನಾವಣಾ ವಿಭಾಗದ ವಿಶೇಷ ಕರ್ತವ್ಯಾಧಿಕಾರಿ ಸೆಲ್ವಮಣಿ, ಅಪರ ಆಯುಕ್ತರು, ಸಹಾಯಕ ಆಯುಕ್ತರು, ತಹಸೀಲ್ದಾರ್ಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.







