ಚಿತ್ರದುರ್ಗ: ಕರ್ನಾಟಕ ರಾಜಕಾರಣದ ಧ್ರುವತಾರೆ, ರೈತ ನಾಯಕ ಮತ್ತು ಬಿಜೆಪಿ ಕಟ್ಟಿದ ಅಪ್ರತಿಮ ಸಂಘಟಕ ಬಿ.ಎಸ್. ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆಯನ್ನು ಸ್ಮರಿಸುವ ‘ಅಭಿಮಾನೋತ್ಸವ’ಕ್ಕೆ ಕೋಟೆನಾಡು ಚಿತ್ರದುರ್ಗ ಸಜ್ಜಾಗುತ್ತಿದೆ. ಮೇ 9ರಂದು ನಡೆಯಲಿರುವ ಈ ಐತಿಹಾಸಿಕ ಸಮಾವೇಶಕ್ಕೆ ಸಂಬಂಧಿಸಿದಂತೆ ಭೂಮಿಪೂಜೆ ನೆರವೇರಿಸಲಾಗಿದ್ದು, ರಾಜ್ಯ ರಾಜಕಾರಣದಲ್ಲಿ ಈ ಕಾರ್ಯಕ್ರಮವು ಹೊಸ ಮೈಲಿಗಲ್ಲಾಗುವ ಮುನ್ಸೂಚನೆ ನೀಡಿದೆ.

ಛಲದಂಕ ಮಲ್ಲನಿಗೆ ಅಭಿಮಾನದ ಗೌರವ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೂಮಿಪೂಜೆ ನೆರವೇರಿಸಿ ಮಾತನಾಡಿ, “ಕರ್ನಾಟಕದಲ್ಲಿ ಹೋರಾಟ ಮತ್ತು ಛಲಕ್ಕೆ ಮತ್ತೊಂದು ಹೆಸರೇ ಯಡಿಯೂರಪ್ಪ. ಅಧಿಕಾರಕ್ಕಾಗಿ ಅವರು ಎಂದಿಗೂ ಹೋರಾಟ ನಡೆಸಲಿಲ್ಲ; ಬದಲಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿ, ದೀನದಲಿತರು ಹಾಗೂ ಮಹಿಳೆಯರ ಕಣ್ಣೀರು ಒರೆಸಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟರು,” ಎಂದು ಸ್ಮರಿಸಿದರು.
ಕುಟುಂಬಕ್ಕಿಂತ ಹೆಚ್ಚಾಗಿ ಸಮಾಜವನ್ನೇ ಪ್ರೀತಿಸಿದ ಯಡಿಯೂರಪ್ಪನವರು ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ರಾಜ್ಯಾದ್ಯಂತ ಸಂಚರಿಸಿ ಜನರ ಧ್ವನಿಯಾದವರು. ಅವರ ಈ ತ್ಯಾಗದ ಫಲವಾಗಿಯೇ ಇಂದು ಬಿಜೆಪಿ ದಕ್ಷಿಣ ಭಾರತದಲ್ಲಿ ಹೆಮ್ಮರವಾಗಿ ಬೆಳೆದು ನಿಂತಿದೆ ಎಂದು ವಿಶ್ಲೇಷಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ
ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮಾಹಿತಿ ನೀಡಿ, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಲು ಸಮ್ಮತಿಸಿದ್ದಾರೆ ಎಂದು ತಿಳಿಸಿದರು. ರಾಜ್ಯದ 29 ಸಾವಿರ ಗ್ರಾಮಗಳಿಂದ ಲಕ್ಷಾಂತರ ಜನರು ಈ ಸಂಭ್ರಮದಲ್ಲಿ ಭಾಗಿಯಾಗಲಿದ್ದು, ಪಕ್ಷಾತೀತವಾಗಿ ಅಭಿಮಾನಿಗಳು ಈ ಸಂಭ್ರಮೋತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ.

ಅಭಿಮಾನೋತ್ಸವದ ಭವ್ಯ ಸಿದ್ಧತೆಗಳು
ಮೇ 9ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ ಇದೆ. 1.5 ಲಕ್ಷ ಜನರಿಗೆ ಊಟದ ವ್ಯವಸ್ಥೆ, ಕುಡಿಯುವ ನೀರು, ಮಜ್ಜಿಗೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಬಿಸಿಲಿನ ತಾಪವನ್ನು ಗಮನದಲ್ಲಿಟ್ಟುಕೊಂಡು ವಿಶಾಲ ಶಾಮಿಯಾನ ಮತ್ತು ಟೆಂಟ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿಜಯೇಂದ್ರ ಮಾಹಿತಿ ನೀಡಿದರು.

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಅಭಿಮಾನೋತ್ಸವವನ್ನು ಐತಿಹಾಸಿಕವಾಗಿ ಆಯೋಜಿಸಲು ಎಲ್ಲ ಮುಖಂಡರು ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದರು.
ಸಾಧನೆಗಳು ಜನರಿಗೆ ತಲುಪಬೇಕು: ಆರ್. ಅಶೋಕ್
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಅಭಿಮಾನೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸಲಿದ್ದಾರೆ. ಅವರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸಲಾಗುವುದು. ಯಡಿಯೂರಪ್ಪ ಅವರ ಸಾಧನೆಗಳು ಜನರಿಗೆ ತಿಳಿಯುವಂತಾಗಬೇಕು ಎಂದರು.

ದೈವಸಂಕಲ್ಪದ ನಾಯಕತ್ವ: ಛಲವಾದಿ ನಾರಾಯಣಸ್ವಾಮಿ
ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅಭಿಪ್ರಾಯಪಟ್ಟಂತೆ, ಯಡಿಯೂರಪ್ಪ ಅವರು ಬಿಜೆಪಿಗೆ ದೈವಸಂಕಲ್ಪದ ಕೊಡುಗೆ. ಅವರ ನಾಯಕತ್ವದಲ್ಲಿ ಅನೇಕ ನಾಯಕರು ಬೆಳೆದಿದ್ದಾರೆ. ಈ ಅಭಿಮಾನೋತ್ಸವವು ಪಕ್ಷದ ಭವಿಷ್ಯಕ್ಕೆ ದಿಕ್ಕು ತೋರಿಸುವ ಕಾರ್ಯಕ್ರಮವಾಗಬೇಕು ಎಂದರು.
ರಾಜ್ಯದ ಮೂಲೆಮೂಲೆಯಿಂದ ಜನರ ಆಗಮನ
ಕೇಂದ್ರ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ಅವರು ಮಾತನಾಡಿ, ರಾಜ್ಯದ ಮೂಲೆಮೂಲೆಯಿಂದ ಜನರು ಭಾಗವಹಿಸಿ ಅಭಿಮಾನವನ್ನು ವ್ಯಕ್ತಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಚಿವ ಬಿ. ಶ್ರೀರಾಮುಲು ಅವರು, ಯಡಿಯೂರಪ್ಪ ಅವರು ಐದು ದಶಕಗಳ ಕಾಲ ಪಕ್ಷ ಸಂಘಟನೆಗೆ ದುಡಿದು ರಾಜ್ಯದಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಿದ್ದಾರೆ ಎಂದರು.
ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು, ಈ ಅಭಿಮಾನೋತ್ಸವವನ್ನು ಐತಿಹಾಸಿಕವಾಗಿ ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು, ಪಕ್ಷದ ಪದಾಧಿಕಾರಿಗಳು ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.





