ಶಿವಮೊಗ್ಗ: ಸುಸಂಸ್ಕೃತ ಸಮಾಜದ ನಿರ್ಮಾಣಕ್ಕೆ ಆದರ್ಶ ಚಿಂತನೆಗಳ ಅಗತ್ಯತೆ ಅತ್ಯಂತ ಹೆಚ್ಚಾಗಿದೆ. ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಂಘಟನೆಗಳು ಬೆಳೆದು ದೊಡ್ಡದಾಗಬೇಕು. ಆದರೆ, ಅವುಗಳಲ್ಲಿ ಅಧಿಕಾರಕ್ಕಾಗಿ ಸಂಘರ್ಷಗಳು ನಡೆಯಬಾರದು, ಎಂದು ಬಾಳೇಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ನಗರದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ದುಡಿಮೆ ಮತ್ತು ಪ್ರಾಮಾಣಿಕತೆಯೇ ಪ್ರಗತಿಯ ಮೂಲ
ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಆಶೀರ್ವಚನದಲ್ಲಿ, “ಸಮಾಜದ ಉನ್ನತಿಗೆ ಮತ್ತು ಶ್ರೇಯಸ್ಸಿಗೆ ಸದಾ ರಚನಾತ್ಮಕ ಕಾರ್ಯಗಳು ನಡೆಯುತ್ತಿರಬೇಕು. ಸುಖ-ನೆಮ್ಮದಿಯ ಬದುಕಿಗೆ ಆರ್ಥಿಕ ಸಂಪನ್ಮೂಲ ಬಹಳ ಮುಖ್ಯ. ಮನುಷ್ಯ ತನ್ನ ದೇಹವನ್ನು ದುಡಿಮೆಗೆ ಮತ್ತು ಮನಸ್ಸನ್ನು ಭಗವಂತನಿಗೆ ಅರ್ಪಿಸಿ ನಡೆದಾಗ ಬದುಕು ವಿಕಾಸಗೊಳ್ಳುತ್ತದೆ. ಸಹಕಾರ ಸಂಘಗಳಲ್ಲಿ ಸಾಲ ಪಡೆದವರು ಮರುಪಾವತಿಯನ್ನು ಪ್ರಾಮಾಣಿಕವಾಗಿ ಮಾಡಿದಾಗ ಮಾತ್ರ ಅಂತಹ ಸಂಸ್ಥೆಗಳು ಹೆಮ್ಮರವಾಗಿ ಬೆಳೆಯಲು ಸಾಧ್ಯ. ಕಣವಿಹಾಲದ ಎಸ್.ಎಸ್. ಪಾಟೀಲರು ಸಹಕಾರಿ ಸಂಘವನ್ನು ಹುಟ್ಟಿ ಹಾಕಿ ಬೆಳೆಸಿದ ಕೀರ್ತಿಗೆ ಪಾತ್ರರಾಗಿದ್ದಾರೆ” ಎಂದರು.
ಒಗ್ಗಟ್ಟಿನ ಮಂತ್ರ: “ವೀರಶೈವ-ಲಿಂಗಾಯತ ಜನತೆ ಎಲ್ಲಿಯವರೆಗೆ ತಮ್ಮೊಳಗಿನ ಒಳಪಂಗಡಗಳನ್ನು ಮರೆತು ಒಗ್ಗಟ್ಟಾಗಿ ಬಾಳುವುದಿಲ್ಲವೋ, ಅಲ್ಲಿಯವರೆಗೆ ಸಮಾಜಕ್ಕೆ ಉಜ್ವಲ ಭವಿಷ್ಯವಿಲ್ಲ,” ಎಂದು ಇದೇ ಸಂದರ್ಭದಲ್ಲಿ ಜಗದ್ಗುರುಗಳು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಸಹಕಾರದಿಂದ ಸಮೃದ್ಧಿ ಸಾಧ್ಯ: ಶ್ರೀ ಕಾಶಿ ಜಗದ್ಗುರುಗಳು
ಸಮಾರಂಭದ ಜಂಟಿ ಸಾನ್ನಿಧ್ಯ ವಹಿಸಿದ್ದ ಶ್ರೀ ಕಾಶಿ ಪೀಠದ ಡಾ. ಚಂದ್ರಶೇಖರ ಜಗದ್ಗುರುಗಳು ಆಶೀರ್ವಚನ ನೀಡಿ, “ಯಾವುದೇ ಒಂದು ಸಂಘ ಸಂಸ್ಥೆಗಳು ಬೆಳೆದು ಯಶಸ್ವಿಯಾಗಬೇಕಾದರೆ ಅಲ್ಲಿನ ಸದಸ್ಯರ ಸಹನೆ, ಸಹಕಾರ ಮತ್ತು ತಾಳ್ಮೆ ಅತ್ಯಂತ ಮುಖ್ಯ. ಪರಸ್ಪರ ಸಹಕಾರದಿಂದ ಸಮಾಜದಲ್ಲಿ ಸಮೃದ್ಧಿ ಉಂಟಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಆರ್ಥಿಕವಾಗಿ ದುರ್ಬಲಗೊಂಡ ಜನತೆಗೆ ಈ ಸಂಘವು ಸೂಕ್ತ ಸಹಕಾರ ನೀಡಿ ಬೆಳೆಸಿರುವುದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಶ್ರೀ ಬಸವೇಶ್ವರಸ್ವಾಮಿ ಪತ್ತಿನ ಸಹಕಾರ ಸಂಘವು ಇಂದು ನೂರು ವರ್ಷ ಪೂರೈಸಿ ಶತಮಾನೋತ್ಸವ ಆಚರಿಸುತ್ತಿರುವುದು ಅತ್ಯಂತ ಸಂತೋಷದ ಸಂಗತಿ” ಎಂದರು.
ಕಾರ್ಯಕ್ರಮದಲ್ಲಿ ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯರು, ಶ್ರೀ ಬಿಳಕಿ ರಾಚೋಟೇಶ್ವರ ಶಿವಾಚಾರ್ಯರು, ಶ್ರೀ ಮಳಲಿ ಮಠದ ಡಾ. ನಾಗಭೂಷಣ ಶಿವಾಚಾರ್ಯರು, ಶ್ರೀ ತೊಗರ್ಸಿ ಚನ್ನವೀರ ಶಿವಾಚಾರ್ಯರು, ಹಾಗೂ ತಾವರೆಕೆರೆಯ ಶ್ರೀ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಜಿ ಸಂಸದ ಆಯನೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಬಳ್ಳೇಕೆರೆ ಸಂತೋಷ್, ಸಿ.ಎಸ್. ಷಡಕ್ಷರಿ, ಎಸ್.ಎಸ್. ಜ್ಯೋತಿಪ್ರಕಾಶ್, ಎಸ್.ಕೆ. ಮರಿಯಪ್ಪ, ಎಸ್.ಪಿ. ದಿನೇಶ್, ಟಿ.ವಿ. ಶ್ರೀನಿವಾಸ್ ಉಪಸ್ಥಿತರಿದ್ದರು.
ಗೌರವ ಸಮರ್ಪಣೆ: ಸಂಘದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರುಗಳು ಹಾಗೂ ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ಈ ಸಂದರ್ಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
ಆರಂಭದಲ್ಲಿ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಮಹಾಲಿಂಗಪ್ಪನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಎಂ.ಆರ್. ಪ್ರಕಾಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ನಡೆದು ಬಂದ ದಾರಿಯನ್ನು ವಿವರಿಸಿದರು. ಸಂಘದ ಉಪಾಧ್ಯಕ್ಷರಾದ ಕೆ.ಎಸ್. ತಾರಾನಾಥ್ ಸರ್ವರನ್ನೂ ಸ್ವಾಗತಿಸಿದರು, ಶಾಂತಾ ಆನಂದ್ ಕಾರ್ಯಕ್ರಮ ನಿರೂಪಿಸಿದರು.











