ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ರಾಹುಲ್ ಗಾಂಧಿ ದೇಶದ ಜನರ ಕ್ಷಮೆಯಾಚಿಸಲಿ; ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

On: May 21, 2026 7:39 PM
Follow Us:

ಬೆಂಗಳೂರು: ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಐತಿಹಾಸಿಕ ಹಾಗೂ ಅಭೂತಪೂರ್ವ ಗೆಲುವು ಸಾಧಿಸಿದೆ. ಆದರೆ, ಬಿಜೆಪಿಯ ಈ ಜನಾದೇಶವನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹತಾಶೆಯಿಂದ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಜನರ ಕ್ಷಮೆಯನ್ನು ರಾಹುಲ್ ಗಾಂಧಿ ಅವರು ತಕ್ಷಣವೇ ಕೇಳಬೇಕು, ಇಲ್ಲದಿದ್ದರೆ ಅವರ ವಿರುದ್ಧ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಎಚ್ಚರಿಕೆ ನೀಡಿದ್ದಾರೆ.

​ಮಲ್ಲೇಶ್ವರಂನಲ್ಲಿರುವ ಬಿಜೆಪಿಯ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕತ್ವದ ವೈಫಲ್ಯ ಹಾಗೂ ರಾಜ್ಯ ಸರ್ಕಾರದ ಆಡಳಿತ ವಿರೋಧಿ ನೀತಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

​ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕುರಿತು ರಾಹುಲ್ ಗಾಂಧಿ ಇತ್ತೀಚೆಗೆ ನೀಡಿರುವ ಹೇಳಿಕೆಯನ್ನು ಕಟುವಾಗಿ ಖಂಡಿಸಿದ ಬಿ.ವೈ.ವಿಜಯೇಂದ್ರ, “ಕಾಂಗ್ರೆಸ್‌ನಂತಹ ಶತಮಾನದ ಇತಿಹಾಸವಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದವರಿಗೆ ಕನಿಷ್ಠ ರಾಜಕೀಯ ತಿಳುವಳಿಕೆ ಇರಬೇಕು. ಈ ರೀತಿಯ ಬಾಲಿಷ ಹಾಗೂ ಅವಹೇಳನಕಾರಿ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ. ಎಲುಬಿಲ್ಲದ ನಾಲಿಗೆ ಎಂದು ಏನೇನೋ ಮಾತನಾಡುವುದು ಸರಿಯಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

​”ಹಿಂದುಳಿದ ಸಮಾಜದಿಂದ ಬಂದು, ದೇಶದ ಜನರ ಅಪಾರ ಬೆಂಬಲದೊಂದಿಗೆ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮುನ್ನಡೆಯುತ್ತಿರುವ ನರೇಂದ್ರ ಮೋದಿ ಅವರು ಭಾರತವನ್ನು ವಿಶ್ವದ 4ನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಬೆಳೆಸಿದ್ದಾರೆ. ದೇಶದ ಈ ಅಭಿವೃದ್ಧಿ ಮತ್ತು ಭ್ರಷ್ಟಾಚಾರರಹಿತ ಆಡಳಿತವನ್ನು ಸಹಿಸಲು ಸಾಧ್ಯವಾಗದೆಯೇ ರಾಹುಲ್ ಗಾಂಧಿ ಇಂತಹ ನಿಂದನಾತ್ಮಕ ರಾಜಕಾರಣಕ್ಕೆ ಇಳಿದಿದ್ದಾರೆ,” ಎಂದು ಅವರು ಪ್ರಶ್ನಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ವಿಜಯೇಂದ್ರ, “ಕಾಶ್ಮೀರದಲ್ಲಿ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ‘ಆರ್ಟಿಕಲ್ 370’ ಅನ್ನು ರದ್ದುಪಡಿಸುವ ರಾಜಕೀಯ ಧೈರ್ಯ ಕಾಂಗ್ರೆಸ್‌ಗೆ ಇರಲಿಲ್ಲ. ಅದನ್ನು ಅಮಿತ್ ಶಾ ಅವರು ಯಶಸ್ವಿಯಾಗಿ ನಿರ್ವಹಿಸಿದರು. ದೇಶದಲ್ಲಿ ನಕ್ಸಲಿಸಂ ಅನ್ನು ಬುಡಸಮೇತ ಕಿತ್ತೊಗೆಯಲು ಶ್ರಮಿಸುತ್ತಿರುವ ಗೃಹ ಸಚಿವರನ್ನು ರಾಹುಲ್ ಗಾಂಧಿ ದೇಶದ್ರೋಹಿ ಎಂದು ಕರೆಯುತ್ತಾರೆಯೇ? ದೇಶದ ಭದ್ರತೆಗೆ ಧಕ್ಕೆ ತರುವ ಇಂತಹ ಹೇಳಿಕೆಗಳನ್ನು ದೇಶದ ಜನತೆ ಕ್ಷಮಿಸುವುದಿಲ್ಲ,” ಎಂದರು.

​ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಮುಖಂಡರ ವಿರುದ್ಧವೂ ಬಿ.ವೈ.ವಿಜಯೇಂದ್ರ ಹರಿಹಾಯ್ದರು. “ರಾಜ್ಯದಲ್ಲೂ ಸಹ ನಾಲಾಯಕ್ ಕಾಂಗ್ರೆಸ್ ನಾಯಕರ ದಂಡೇ ಇದೆ. ಇಲ್ಲಿನ ಸಚಿವರುಗಳು ತಾವೇನೋ ಜಾಗತಿಕ ರಕ್ಷಣಾ ಪರಿಣತರು ಅಥವಾ ವಿದೇಶಾಂಗ ಸಚಿವರು ಎಂಬಂತೆ ಅತ್ಯಂತ ಬೇಜವಾಬ್ದಾರಿಯಿಂದ ಮತ್ತು ಹುಚ್ಚುಚ್ಚಾಗಿ ಮಾತನಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದು ಮೂರು ವರ್ಷಗಳಾಗುತ್ತಾ ಬಂದರೂ, ಕೇವಲ ‘ಪೌತಿ ಖಾತೆ’ ಮಾಡಿಕೊಟ್ಟಿರುವುದನ್ನೇ ತಮ್ಮ ಜೀವಮಾನದ ಮಹಾನ್ ಸಾಧನೆ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ,” ಎಂದು ವ್ಯಂಗ್ಯವಾಡಿದರು.

​ಬಿಜೆಪಿಯ ಮುಂಬರುವ ಸಾಂಸ್ಥಿಕ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದ ರಾಜ್ಯಾಧ್ಯಕ್ಷರು, “ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬೀನ್ ಜೀ ಅವರು ಇದೇ ಮೇ 23 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ನಂತರ ಇದು ಅವರ ಮೊದಲ ಕರ್ನಾಟಕ ಭೇಟಿಯಾಗಿದೆ. ಮೇ 24 ರಂದು ಬೆಂಗಳೂರು ಉತ್ತರ ಜಿಲ್ಲೆಯ ಪ್ರಶಿಕ್ಷಣ ವರ್ಗದಲ್ಲಿ ಅವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯದ ಬಿಜೆಪಿ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರೊಂದಿಗೆ ಮಹತ್ವದ ಸಾಂಸ್ಥಿಕ ಸಭೆಯನ್ನು ಆಯೋಜಿಸಲಾಗಿದೆ,” ಎಂದು ಪ್ರಕಟಿಸಿದರು.

​ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಸುದೀರ್ಘ 12 ವರ್ಷಗಳ ಕಾಲ ಸೇವೆ ಸಲ್ಲಿಸಿ ಐತಿಹಾಸಿಕ ದಾಖಲೆ ನಿರ್ಮಿಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ವಿವಿಧ ಜನಪರ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ವಿಜಯೇಂದ್ರ ತಿಳಿಸಿದರು. ಮುಂಬರುವ ‘ವಿಶ್ವ ಪರಿಸರ ದಿನ’ ಹಾಗೂ ‘ಅಂತರರಾಷ್ಟ್ರೀಯ ಯೋಗ ದಿನ’ಗಳನ್ನು ಪಕ್ಷದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು. ರಾಷ್ಟ್ರೀಯ ಅಧ್ಯಕ್ಷರ ಸಮ್ಮುಖದಲ್ಲಿ ರಾಜ್ಯದ ಪ್ರಮುಖ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಮುಂದಿನ ರಾಜಕೀಯ ಕಾರ್ಯತಂತ್ರಗಳನ್ನು ರೂಪಿಸಲಾಗುವುದು ಎಂದರು.

​ಇದೇ ವೇಳೆ, ಬಿಡದಿ ಟೌನ್‌ಶಿಪ್ ಯೋಜನೆಯಿಂದ ಸಂತ್ರಸ್ತರಾಗುತ್ತಿರುವ ರೈತರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಯಾವುದೇ ಕಾರಣಕ್ಕೂ ಭೂಮಿ ಕಳೆದುಕೊಳ್ಳುವ ರೈತರನ್ನು ಬೀದಿ ಪಾಲಾಗಲು ಬಿಡುವುದಿಲ್ಲ. ಅವರ ಹಿತರಕ್ಷಣೆಗೆ ಬಿಜೆಪಿ ಬದ್ಧವಾಗಿದೆ,” ಎಂದು ಭರವಸೆ ನೀಡಿದರು.

​ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ರಾಜ್ಯ ಅಧ್ಯಕ್ಷರಾದ ರಾಜಣ್ಣ ಅವರು ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ತಂದಿದೆ ಎಂದು ವಿಜಯೇಂದ್ರ ಹರ್ಷ ವ್ಯಕ್ತಪಡಿಸಿದರು. ರಾಜಣ್ಣ ಅವರ ಸೇರ್ಪಡೆಯಿಂದಾಗಿ ತುಮಕೂರು, ಚಿತ್ರದುರ್ಗ ಸೇರಿದಂತೆ ಇಡೀ ಮಧ್ಯ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಜನಬಲ ಹಾಗೂ ಸಂಘಟನಾ ಶಕ್ತಿ ಮತ್ತಷ್ಟು ವೃದ್ಧಿಸಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಮನೆಯ ಸುತ್ತಮುತ್ತ ಸ್ವಚ್ಛತೆ ಇರಲಿ, ಡೆಂಗ್ಯೂ ಜ್ವರಕ್ಕೆ ಬ್ರೇಕ್ ಹಾಕಿ!: ಸೊಳ್ಳೆಗಳ ಉತ್ಪತ್ತಿ ತಡೆಗಟ್ಟಿ ಡೆಂಗ್ಯೂ ಮುಕ್ತ ಸಮಾಜ ನಿರ್ಮಿಸೋಣ: ಡಾ. ಗುಡದಪ್ಪ ಕಸಬಿ ಕರೆ

ಭೀಕರ ಮಳೆಗಾಳಿಗೆ ತುತ್ತಾದ ಅಡಿಕೆ ತೋಟಗಳು: ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೃಷಿಕ ಸಮಾಜದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ ಪುಣ್ಯಸ್ಮರಣೆ: “ದೇಶದ ಪ್ರಗತಿಗೆ ಅಡಿಪಾಯ ಹಾಕಿದ ನಾಯಕ ರಾಜೀವ್ ಗಾಂಧಿ” – ನಗರದ ಮಹದೇವಪ್ಪ

ಶಿಕ್ಷಣ ಇಲಾಖೆಯ ಸುಧಾರಣೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ: ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಕೆಪಿಎಸ್ ಶಾಲೆಗಳಿಗೆ ಹೊಸ ಚೈತನ್ಯ; ಶಿಕ್ಷಕರ ಭರ್ತಿಗೆ ಹಸಿರು ನಿಶಾನೆ

ಮಲೆನಾಡಿನ ಒಡಲಿಗೆ ಅಣುಕಂಟಕ: ಬೇಸೂರು ಅಣುಸ್ಥಾವರ ವಿರೋಧಿ ಹೋರಾಟಕ್ಕೆ ‘ಪರ್ಯಾವರಣ ಟ್ರಸ್ಟ್’ ಬೆಂಬಲ

ಶಿವಮೊಗ್ಗದ ಸಹಕಾರಿ ರಂಗದಲ್ಲಿ ಹೊಸ ಮೈಲುಗಲ್ಲು: “ಗೆಳೆಯರ ಬಳಗ ಸಹಕಾರ ಸಂಘದ” ನೂತನ ಕಚೇರಿ ಉದ್ಘಾಟನೆ – ಅನಿಲ್ ಕುಂಚಿ ನಾಯಕತ್ವಕ್ಕೆ ಗಣ್ಯರ ಶ್ಲಾಘನೆ!

Leave a Comment