ಶಿವಮೊಗ್ಗ: “ಸಮಾಜದ ಶೋಷಿತ, ವಂಚಿತ ಹಾಗೂ ಹಿಂದುಳಿದ ವರ್ಗಗಳ ಧ್ವನಿಯಾಗಿ ನಿಂತು, ಸಾಮಾಜಿಕ ಸಮಾನತೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಪ್ರೊ. ಬಿ. ಕೃಷ್ಣಪ್ಪನವರ ಹೋರಾಟದ ಹಾದಿ ಇಂದಿನ ಪೀಳಿಗೆಗೆ ಸದಾ ಸ್ಮರಣೀಯ ಹಾಗೂ ಆದರ್ಶವಾಗಿದೆ,” ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ತಿಳಿಸಿದರು.
ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್), ಶಿವಮೊಗ್ಗ ಜಿಲ್ಲಾ ಶಾಖೆಯ ವತಿಯಿಂದ ಆಯೋಜಿಸಲಾಗಿದ್ದ ದಸಂಸ ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಸಮಾನತೆಯ ಧ್ವನಿ: ಪ್ರೊ. ಬಿ. ಕೃಷ್ಣಪ್ಪ
ಕಾರ್ಯಕ್ರಮದಲ್ಲಿ ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದ ಸಿ.ಎಸ್. ಷಡಾಕ್ಷರಿಯವರು, ಕೃಷ್ಣಪ್ಪನವರ ಸಮಾಜಮುಖಿ ಕಳಕಳಿಯನ್ನು ಪ್ರಶಂಸಿಸಿದರು.
“ಕರ್ನಾಟಕದಲ್ಲಿ ದಲಿತ ಮತ್ತು ಶೋಷಿತ ಸಮುದಾಯಗಳನ್ನು ಸಂಘಟಿಸಿ, ಅವರಿಗೆ ಸಾಂವಿಧಾನಿಕ ಹಕ್ಕುಗಳನ್ನು ತಂದುಕೊಡುವಲ್ಲಿ ಕೃಷ್ಣಪ್ಪನವರ ಪಾತ್ರ ಅನನ್ಯವಾದುದು. ಕೇವಲ ಭಾಷಣಕ್ಕೆ ಸೀಮಿತವಾಗದೆ, ತಳಮಟ್ಟದ ಜನರ ನೋವಿಗೆ ಮಿಡಿದು ಸಾಮಾಜಿಕ ನ್ಯಾಯಕ್ಕಾಗಿ ಅವರು ನಿರಂತರ ಹೋರಾಟ ನಡೆಸಿದರು,”
– ಸಿ.ಎಸ್. ಷಡಾಕ್ಷರಿ
ಈ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ. ಶರತ್ ಅನಂತಮೂರ್ತಿ, ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್, ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್, ಕೆಡಿಎಸ್ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ವಕೀಲರಾದ ಕೆ.ಪಿ.ಶ್ರೀಪಾಲ್, ಸೇರಿದಂತೆ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪ್ರಮುಖ ಪದಾಧಿಕಾರಿಗಳು, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.








