ಹೊಸನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾನಾಯಕ ಮಾತ್ರವಲ್ಲ, ಅಹಿಂಸೆ, ಸತ್ಯ, ಪ್ರಾಮಾಣಿಕತೆ ಮತ್ತು ಮಾನವೀಯ ಮೌಲ್ಯಗಳ ಬದುಕಿನ ಆದರ್ಶವನ್ನೂ ನೀಡಿದ ಮಹಾನ್ ಚಿಂತಕರಾಗಿದ್ದಾರೆ. ಅವರ ಆದರ್ಶಗಳನ್ನು ಮರೆತರೆ ಅದು ದೇಶದ ಪರಂಪರೆ ಹಾಗೂ ಆತ್ಮವನ್ನು ಮರೆತಂತೆಯೇ ಆಗುತ್ತದೆ ಎಂದು ಖ್ಯಾತ ಸಾಹಿತಿ ಎಂ.ಎನ್. ಸುಂದರರಾಜ್ ಅಭಿಪ್ರಾಯಪಟ್ಟರು.
ಹೊಸನಗರ ತಾಲೂಕಿನ ಹಲಗೆರಿ–ಮಂಡ್ರಿಯ ಶ್ರೀ ಚನ್ನಮ್ಮ ಪ್ರೌಢಶಾಲೆಯಲ್ಲಿ ಶಿವಮೊಗ್ಗ ಜಿಲ್ಲಾ ಸರ್ವೋದಯ ಮಂಡಲ ಹಾಗೂ ತಾಲೂಕು ಸರ್ವೋದಯ ಮಂಡಲ, ಹೊಸನಗರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಗಾಂಧೀ ಚಿಂತನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಜಾಗತಿಕ ಸಂಘರ್ಷಗಳಿಗೆ ಗಾಂಧಿ ಚಿಂತನೆಗಳೇ ಮದ್ದು: ಸಾಹಿತಿ ಎಂ. ಎನ್. ಸುಂದರರಾಜ್
ಗಾಂಧೀಜಿಯವರ ಜೀವನದ ಹಲವಾರು ಸ್ವಾರಸ್ಯಕರ ಘಟನೆಗಳನ್ನು ಉಲ್ಲೇಖಿಸಿದ ಅವರು, ಬ್ರಿಟಿಷರ ವಿರುದ್ಧ ಅಹಿಂಸಾತ್ಮಕ ಹೋರಾಟದ ಮೂಲಕ ಸ್ವಾತಂತ್ರ್ಯ ಸಮರವನ್ನು ಯಶಸ್ವಿಗೊಳಿಸಿದ ಗಾಂಧೀಜಿಯವರು ವಿಶ್ವಕ್ಕೆ ಶಾಂತಿ ಮತ್ತು ಸತ್ಯಾಗ್ರಹದ ಶಕ್ತಿಯನ್ನು ಪರಿಚಯಿಸಿದರು ಎಂದು ಹೇಳಿದರು.
ಇಂದಿನ ಜಾಗತಿಕ ಪರಿಸ್ಥಿತಿಯಲ್ಲಿ ದೇಶಗಳ ನಡುವೆ ಸಂಘರ್ಷ, ಯುದ್ಧ ಮತ್ತು ಹಿಂಸಾಚಾರಗಳು ಹೆಚ್ಚಾಗುತ್ತಿವೆ. ಆದರೆ ಹಿಂಸೆಯಿಂದ ಯಾವುದೇ ಶಾಶ್ವತ ಪರಿಹಾರ ದೊರೆಯುವುದಿಲ್ಲ. ಶಾಂತಿಯುತ ಹೋರಾಟ, ಸತ್ಯಾಗ್ರಹ ಮತ್ತು ಸಂವಾದದ ಮೂಲಕವೇ ಸಮಾಜದಲ್ಲಿ ಸೌಹಾರ್ದತೆ ಹಾಗೂ ಸಹಬಾಳ್ವೆ ನಿರ್ಮಾಣ ಸಾಧ್ಯ ಎಂಬುದನ್ನು ಗಾಂಧೀಜಿಯವರ ಜೀವನ ಸ್ಪಷ್ಟವಾಗಿ ತೋರಿಸುತ್ತದೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಗಾಂಧೀಜಿಯವರ ಸರಳ ಜೀವನ, ಉನ್ನತ ಚಿಂತನೆ ಮತ್ತು ಮೌಲ್ಯಾಧಾರಿತ ಬದುಕನ್ನು ಅರ್ಥಮಾಡಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಆದರ್ಶಗಳು ಇಂದಿನ ಯುವಜನತೆಗೆ ದಾರಿದೀಪವಾಗಿವೆ ಎಂದು ಕರೆ ನೀಡಿದರು.


ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ
ಈ ಸಂದರ್ಭದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪುಸ್ತಕಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.
ಶಿಕ್ಷಕ ಪಾಲಾಕ್ಷಪ್ಪ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ಆರತಿ ತಿವಾರಿ ಅವರು ಗಾಂಧೀಜಿಯವರ ಕುರಿತು ಕವನ ವಾಚನ ಮಾಡಿದರು. ಶಿಕ್ಷಕಿಯರಾದ ಕುಮಾರಿ ಅರ್ಪಿತಾ ಪಿ., ದೀಪಿಕಾ ಡಿ.ಜಿ. ಸೇರಿದಂತೆ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು.
ಗಾಂಧೀಜಿಯವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ಉದ್ದೇಶದೊಂದಿಗೆ ನಡೆದ ಈ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸುವಲ್ಲಿ ಯಶಸ್ವಿಯಾಯಿತು.







