ರಾಜ್ಯದ ಮೂಲೆ-ಮೂಲೆಗಳಿಂದ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಕರೆ
ಬೆಂಗಳೂರು, ಆ.7: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ವತಿಯಿಂದ ಆಗಸ್ಟ್ 8ರಂದು (ಶನಿವಾರ) ಬೆಳಿಗ್ಗೆ 10.30ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ಪುಷ್ಪ ಬೈರೇಗೌಡ ಕನ್ವೆನ್ಷನ್ ಹಾಲ್ನಲ್ಲಿ 4ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲೆಗಳು, ತಾಲೂಕುಗಳು ಹಾಗೂ ಹೋಬಳಿ ಮಟ್ಟದ ಪತ್ರಕರ್ತರು, ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯದಾದ್ಯಂತ ಪತ್ರಕರ್ತರ ಹಿತಾಸಕ್ತಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಪತ್ರಕರ್ತರ ಕಲ್ಯಾಣ, ವೃತ್ತಿ ಭದ್ರತೆ ಹಾಗೂ ಮೂಲಭೂತ ಸೌಲಭ್ಯಗಳಿಗಾಗಿ ಹಲವು ಹೋರಾಟಗಳು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಪತ್ರಕರ್ತರಿಗೆ ಉಚಿತ ಬಸ್ಪಾಸ್, ನಿವೇಶನ, ಆರೋಗ್ಯ ಸೌಲಭ್ಯ, ವಿಮೆ ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವಂತೆ ಸರ್ಕಾರವನ್ನು ಸಂಘಟನೆ ನಿರಂತರವಾಗಿ ಆಗ್ರಹಿಸುತ್ತಿದೆ ಎಂದು ತಿಳಿಸಿದ್ದಾರೆ.
ಈ ರಾಜ್ಯ ಸಮ್ಮೇಳನದಲ್ಲಿ ಪತ್ರಕರ್ತರ ಸಮಸ್ಯೆಗಳು, ಕಲ್ಯಾಣ ಯೋಜನೆಗಳು, ವೃತ್ತಿಪರ ಸವಾಲುಗಳು, ಸಂಘಟನಾ ಬಲವರ್ಧನೆ ಹಾಗೂ ಮುಂದಿನ ಹೋರಾಟಗಳ ರೂಪುರೇಷೆಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ. ರಾಜ್ಯದ ಮೂಲೆ-ಮೂಲೆಗಳಿಂದ ಆಗಮಿಸುವ ಪತ್ರಕರ್ತರ ಸಕ್ರಿಯ ಭಾಗವಹಿಸುವಿಕೆಯಿಂದ ಸಮ್ಮೇಳನವು ಯಶಸ್ವಿಯಾಗಲಿದ್ದು, ಎಲ್ಲ ಪತ್ರಕರ್ತ ಬಂಧುಗಳು ತಪ್ಪದೇ ಪಾಲ್ಗೊಂಡು ಸಂಘಟನೆಯ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಬಂಗ್ಲೆ ಮಲ್ಲಿಕಾರ್ಜುನ ಮನವಿ ಮಾಡಿದ್ದಾರೆ.







