ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಪ್ರಧಾನಿ ಮೋದಿ ಜನ್ಮದಿನಕ್ಕೆ ತಿಂಗಳ ಸೇವಾ ಸಂಭ್ರಮ: ಸೆ.17ರಿಂದ ‘ಸೇವಾ ಸಂಕಲ್ಪ ಅಭಿಯಾನ’:‘ಆಶೀರ್ವಾದದ ದೀಪ’ದಿಂದ ‘ನಮೋ ಸೇವಾ ಗಾಥಾ’ವರೆಗೆ ವಿವಿಧ ಸೇವಾ ಕಾರ್ಯಕ್ರಮಗಳು: ಸಂಸದ ಬಿ.ವೈ. ರಾಘವೇಂದ್ರ

On: September 16, 2026 6:36 PM
Follow Us:

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಹಾಗೂ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮ ಗಾಂಧೀಜಿ ಅವರ ಜಯಂತಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ಒಂದು ತಿಂಗಳ ಕಾಲ ವಿವಿಧ ಸೇವಾ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಸೇವಾ ಚಟುವಟಿಕೆಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ದೇಶಾದ್ಯಂತ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಕರೆ ನೀಡಿದ್ದಾರೆ ಎಂದರು.

ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ನಡೆಯುವ ಈ ಅಭಿಯಾನದಲ್ಲಿ ಜಿಲ್ಲಾ, ಮಂಡಲ ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ವಿವಿಧ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಅವುಗಳಿಂದ ಸಾರ್ವಜನಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ತಲುಪಿಸುವ ಕಾರ್ಯಕ್ಕೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17ರಂದು ಶಿವಮೊಗ್ಗ ಕ್ಷೇತ್ರದಾದ್ಯಂತ ‘ಆಶೀರ್ವಾದದ ದೀಪ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಬಿ.ವೈ. ರಾಘವೇಂದ್ರ ತಿಳಿಸಿದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸಿ, ಅವರ ಮನೆಗಳ ಅಂಗಳ ಅಥವಾ ವರಾಂಡಾದಲ್ಲಿ ಸಂಜೆ 7 ಗಂಟೆಗೆ ದೀಪ ಬೆಳಗಿಸುವ ಮೂಲಕ ಪ್ರಧಾನಮಂತ್ರಿಗಳಿಗೆ ಶುಭ ಹಾರೈಸುವ ಕಾರ್ಯಕ್ರಮ ರೂಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ದೊರೆಯಲಿ ಹಾಗೂ ವಿಕಸಿತ ಭಾರತ-2047ರ ಗುರಿ ಸಾಧನೆಗೆ ಮತ್ತಷ್ಟು ಶಕ್ತಿ ದೊರೆಯಲಿ ಎಂಬ ಆಶಯದೊಂದಿಗೆ ಈ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಫಲಾನುಭವಿಗಳಿದ್ದಾರೆ. ಅಂತಹ ಕುಟುಂಬಗಳನ್ನು ಗುರುತಿಸಿ ಅವರೊಂದಿಗೆ ಸಂಪರ್ಕ ಸಾಧಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಶಿವಮೊಗ್ಗ ನಗರದಲ್ಲಿ ನಿರ್ಮಾಣವಾಗಿರುವ ವಿವಿಧ ಮೇಲ್ಸೇತುವೆಗಳು, ಕಳಸವಳ್ಳಿ-ಸಿಗಂದೂರು ಸೇತುವೆ, ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆಯಡಿ ನಡೆಯುತ್ತಿರುವ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ, ಶಿವಮೊಗ್ಗ ವಿಮಾನ ನಿಲ್ದಾಣ, ಎಫ್‌ಎಂ ರೇಡಿಯೋ ಟವರ್ ಸೇರಿದಂತೆ ಹಲವು ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳನ್ನು ಅವರು ಪ್ರಸ್ತಾಪಿಸಿದರು.

ಸೆಪ್ಟೆಂಬರ್ 18ರಿಂದ 24ರವರೆಗೆ ‘ನಮೋ ಸೇವಾ ಗಾಥಾ’ ಹೆಸರಿನಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಸದರು ತಿಳಿಸಿದರು.

ಸ್ವಚ್ಛತಾ ಅಭಿಯಾನ, ರಕ್ತದಾನ ಶಿಬಿರ, ಆರೋಗ್ಯ ತಪಾಸಣಾ ಶಿಬಿರ, ಸೈಕಲ್ ಜಾಥಾ, ಮ್ಯಾರಥಾನ್ ಹಾಗೂ ಬೀದಿ ನಾಟಕ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಯೋಜಿಸಲಾಗಿದೆ.

ಮಹಿಳಾ ಮೋರ್ಚಾ, ಎಸ್‌ಸಿ ಮೋರ್ಚಾ, ಎಸ್‌ಟಿ ಮೋರ್ಚಾ, ಯುವ ಮೋರ್ಚಾ, ಓಬಿಸಿ ಮೋರ್ಚಾ ಸೇರಿದಂತೆ ಪಕ್ಷದ ವಿವಿಧ ಘಟಕಗಳು ತಮ್ಮ ಜವಾಬ್ದಾರಿಯನ್ನು ವಹಿಸಿಕೊಂಡು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಿವೆ ಎಂದು ಹೇಳಿದರು.

ಸೆಪ್ಟೆಂಬರ್ 25ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಗುವುದು. ಅವರ ‘ಅಂತ್ಯೋದಯ’ ಪರಿಕಲ್ಪನೆ ಹಾಗೂ ‘ಏಕಾತ್ಮ ಮಾನವತಾವಾದ’ದ ವಿಚಾರಗಳನ್ನು ಜನರಿಗೆ ಪರಿಚಯಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಘವೇಂದ್ರ ಹೇಳಿದರು.

ಬೂತ್ ಮಟ್ಟದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ದೇಶಭಕ್ತಿ ಗೀತೆಗಳ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುವುದು. ಹಿರಿಯರನ್ನು ಆಹ್ವಾನಿಸಿ ಅವರೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮಗಳನ್ನೂ ರೂಪಿಸಲಾಗಿದೆ ಎಂದರು.

ಸೆಪ್ಟೆಂಬರ್ 25ರಿಂದ ಅಕ್ಟೋಬರ್ 6ರವರೆಗೆ ‘ಅಂಗನವಾಡಿಯಲ್ಲಿ ಉತ್ಸವ’ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಪೌಷ್ಟಿಕತೆ, ಆರೋಗ್ಯ, ಲಸಿಕೆ, ಮಹಿಳಾ ಕಲ್ಯಾಣ ಹಾಗೂ ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು.

ಆರೋಗ್ಯ ತಪಾಸಣಾ ಶಿಬಿರ, ಮಕ್ಕಳ ತಜ್ಞರು ಹಾಗೂ ಪ್ರಸೂತಿ ತಜ್ಞರೊಂದಿಗೆ ಸಂವಾದ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ನಡೆಸಲು ಯೋಜಿಸಲಾಗಿದೆ ಎಂದು ಹೇಳಿದರು.

ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಜಯಂತಿಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು. ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಆದ್ಯತೆ ನೀಡುವುದರ ಜೊತೆಗೆ ‘ಲೋಕಲ್ ಫಾರ್ ವೋಕಲ್’ ಹಾಗೂ ಸ್ವದೇಶಿ ಪರಿಕಲ್ಪನೆಯನ್ನು ಉತ್ತೇಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಪ್ರತಿ ಮಂಡಲ ಮಟ್ಟದಲ್ಲಿ ನಾಟಕ ಪ್ರದರ್ಶನ ಆಯೋಜಿಸುವ ಉದ್ದೇಶವಿದ್ದು, ಇದಕ್ಕಾಗಿ ತಂಡಗಳನ್ನು ಸಿದ್ಧಪಡಿಸುವ ಕಾರ್ಯವೂ ನಡೆಯಲಿದೆ ಎಂದು ತಿಳಿಸಿದರು.

ಅಕ್ಟೋಬರ್ 7ರಿಂದ 14ರವರೆಗೆ ಮಕ್ಕಳಲ್ಲಿ ವಿಕಸಿತ ಭಾರತದ ಪರಿಕಲ್ಪನೆ ಮೂಡಿಸುವ ಉದ್ದೇಶದಿಂದ ‘25 ಕೋಟಿ ಮಕ್ಕಳ ಕನಸಿನ ಭಾರತ’ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಸಂಸದರು ಹೇಳಿದರು.

4ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಹಾಗೂ 8ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಶುಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ನಡೆಸಲು ಉದ್ದೇಶಿಸಲಾಗಿದೆ.

ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ಆಡಳಿತ ಮಂಡಳಿಗಳ ಸಹಕಾರದೊಂದಿಗೆ ಈ ಕಾರ್ಯಕ್ರಮಗಳನ್ನು ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2001ರ ಅಕ್ಟೋಬರ್ 7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. 2014ರ ಮೇ 26ರಂದು ಭಾರತದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಅವರು, ನಂತರದ ಲೋಕಸಭಾ ಚುನಾವಣೆಗಳಲ್ಲಿ ಪ್ರಧಾನಮಂತ್ರಿಯಾಗಿ ಮುಂದುವರಿದಿದ್ದಾರೆ ಎಂದು ರಾಘವೇಂದ್ರ ಹೇಳಿದರು.

ಗುಜರಾತ್ ಮುಖ್ಯಮಂತ್ರಿಯಾಗಿದ್ದ ಅವಧಿಯಿಂದ ಪ್ರಧಾನಮಂತ್ರಿಯಾಗಿರುವ ಅವಧಿಯವರೆಗೆ ಅವರ ಆಡಳಿತದ ವಿವಿಧ ಕಾರ್ಯಕ್ರಮಗಳನ್ನು ಪಕ್ಷದ ಕಾರ್ಯಕರ್ತರು ಜನರಿಗೆ ತಿಳಿಸುವ ಪ್ರಯತ್ನ ಮಾಡಲಿದ್ದಾರೆ ಎಂದರು.

ಜನಧನ್ ಯೋಜನೆ, ಸ್ವಚ್ಛ ಭಾರತ್ ಮಿಷನ್, ಉಜ್ವಲ ಯೋಜನೆ, ಆಯುಷ್ಮಾನ್ ಭಾರತ್, ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಸಂವಿಧಾನದ 370ನೇ ವಿಧಿಯ ಬದಲಾವಣೆ, ಜಲಜೀವನ್ ಮಿಷನ್, ಪಿಎಂ ಕಿಸಾನ್ ಸಮ್ಮಾನ್ ನಿಧಿ, ಸೌರಶಕ್ತಿ ಆಧಾರಿತ ಯೋಜನೆಗಳು ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಜನರಿಗೆ ಪರಿಚಯಿಸಲಾಗುವುದು ಎಂದು ಹೇಳಿದರು.

ದೇಶದ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಬಂಡವಾಳ ಹೂಡಿಕೆಗೆ ಕೇಂದ್ರ ಸರ್ಕಾರ ನೀಡುತ್ತಿರುವ ಆದ್ಯತೆಯ ಕುರಿತು ಜನರಿಗೆ ಮಾಹಿತಿ ನೀಡುವ ಕಾರ್ಯವೂ ನಡೆಯಲಿದೆ ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ 1886 ಬೂತ್‌ಗಳಿದ್ದು, ಎಲ್ಲಾ ಬೂತ್‌ಗಳಲ್ಲೂ ಸೇವಾ ಸಂಕಲ್ಪ ಅಭಿಯಾನದ ಕಾರ್ಯಕ್ರಮಗಳನ್ನು ನಡೆಸಲು ಸಂಘಟನೆ ಸಿದ್ಧತೆ ಮಾಡಿಕೊಂಡಿದೆ ಎಂದು ಬಿ.ವೈ. ರಾಘವೇಂದ್ರ ತಿಳಿಸಿದರು.

ಹಿಂದೆ ಕ್ಷೇತ್ರದಲ್ಲಿ 1793 ಬೂತ್‌ಗಳಿದ್ದವು. ಕ್ಷೇತ್ರಗಳ ಮರುವಿಂಗಡಣೆ ಮತ್ತು ಹೊಸ ಬೂತ್‌ಗಳ ರಚನೆಯ ಹಿನ್ನೆಲೆಯಲ್ಲಿ ಇದೀಗ ಬೂತ್‌ಗಳ ಸಂಖ್ಯೆ 1886ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಜಿಲ್ಲಾ ತಂಡ, ಮಂಡಲ ಪದಾಧಿಕಾರಿಗಳು ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಿ, ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ನಡೆಯಲಿರುವ ಒಂದು ತಿಂಗಳ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಅನುಷ್ಠಾನಗೊಳಿಸಲಿದ್ದಾರೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ನಡೆಯುವ ಕಾರ್ಯಕ್ರಮಗಳು ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ವಿವಿಧ ಸಾಮಾಜಿಕ ಹಾಗೂ ಸೇವಾ ಚಟುವಟಿಕೆಗಳ ಮೂಲಕ ಒಂದು ತಿಂಗಳ ಕಾಲ ಮುಂದುವರಿಯಲಿವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಜಗದೀಶ್ ಎನ್.ಕೆ., ಶಾಸಕರಾದ ಚನ್ನಬಸಪ್ಪ (ಚೆನ್ನಿ), ಡಾ. ಧನಂಜಯ ಸರ್ಜಿ, ಮಾಜಿ ಶಾಸಕರಾದ ಕೆ.ಜಿ. ಕುಮಾರಸ್ವಾಮಿ, ಜಿಲ್ಲಾ ವಕ್ತಾರರಾದ ಜ್ಯೋತಿ ಪ್ರಕಾಶ್, ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಹರಿಕೃಷ್ಣ, ಮಾಲತೇಶ್, ಬಳ್ಳೆಕೆರೆ ಸಂತೋಷ್, ಮಾಧ್ಯಮ ಪ್ರಮುಖ್ ಚಂದ್ರಶೇಖರ್ ಎಸ್. ಹಾಗೂ ಸಹ ಪ್ರಮುಖ್ ಮಂಜುನಾಥ್ ಎನ್. ಶ್ರೀನಾಗ್ ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

GAVS 2026 ಉದ್ಘಾಟನೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಆಹ್ವಾನ: ಕರ್ನಾಟಕ ಆರ್ಯವೈಶ್ಯ ಮಹಾಸಭಾ ನಿಯೋಗದೊಂದಿಗೆ ಡಿ.ಎಸ್. ಅರುಣ್ ಭೇಟಿ

ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಶ್ರೀ ರಂಭಾಪುರಿ ಜಗದ್ಗುರುಗಳ ಅಭಿನಂದನೆ

ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಕನ್ನಡಿಗರಿಗೆ ಹೆಮ್ಮೆಯ ಕ್ಷಣ

ಪತ್ರಕರ್ತರ ಸಂಘದಲ್ಲಿ ಕಾನೂನು ಸಮರ ತೀವ್ರ: ಎಫ್‌ಐಆರ್‌ನಿಂದ ಬೈಲಾವರೆಗೆ ಶಿವಾನಂದ ತಗಡೂರು ವಿರುದ್ಧ ಬಂಗ್ಲೆ ಮಲ್ಲಿಕಾರ್ಜುನ ದಾಖಲೆ ಸಮೇತ ಸವಾಲು!

ಗೌರಿ-ಗಣೇಶ ಹಬ್ಬ: ಭಕ್ತಿ, ಬಾಂಧವ್ಯ ಮತ್ತು ಪರಿಸರ ಕಾಳಜಿಯ ಸಂಗಮ; ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ: ಡಿ.ಎಸ್. ಅರುಣ್

ಐದು ದುರ್ಬಲ ರಾಷ್ಟ್ರಗಳ ಸಾಲಿನಲ್ಲಿದ್ದ ಭಾರತ ಇಂದು ಪ್ರಮುಖ ಆರ್ಥಿಕ ಶಕ್ತಿ: ಮೋದಿಯವರ ನಾಯಕತ್ವದಲ್ಲಿ ದೇಶದ ಆರ್ಥಿಕತೆ, ಮೂಲಸೌಕರ್ಯ, ಸಾಮಾಜಿಕ ಭದ್ರತೆ ಹಾಗೂ ರಾಷ್ಟ್ರೀಯ ಸುರಕ್ಷತೆಯಲ್ಲಿ ಮಹತ್ವದ ಬದಲಾವಣೆ: ಜೆ.ಪಿ. ನಡ್ಡಾ

Leave a Comment