ನವದೆಹಲಿ: ಬಿಹಾರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ತೀವ್ರ ಪ್ರತಿಭಟನೆ ನಡೆಸಿದ್ದು ಹೀಗಾಗಿ ಸಂಸತ್ತಿನ ಉಭಯ ಸದನಗಳನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ ನಂತರ ಲೋಕಸಭೆಯನ್ನು ಮುಂದೂಡಲಾಯಿತು. ಒಂದು ಕಡೆ ವಿಪಕ್ಷಗಳು ಚರ್ಚೆಗೆ ಒತ್ತಾಯಿಸುತ್ತಿವೆ. ಮತ್ತೊಂದೆಡೆ ಸದನಕ್ಕೆ ಅಡ್ಡಿಪಡಿಸುವ ಮೂಲಕ ‘ದ್ವಿಮುಖ ನೀತಿ’ ಅನುಸರಿಸುತ್ತಿದೆ ಎಂದು ಸರ್ಕಾರ ಆರೋಪಿಸಿದೆ.
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ಚುನಾವಣಾ ಆಯೋಗ ಆರಂಭಿಸಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಹಿಂಪಡೆಯುವಂತೆ ಮತ್ತು ಚರ್ಚೆಯನ್ನು ಮುಂದೂಡುವಂತೆ ವಿಪಕ್ಷಗಳು ಒತ್ತಾಯಿಸಿದ್ದವು. ಹೀಗಾಗಿ ಸಂಸತ್ತಿನ ಮಳೆಗಾಲದ ಅಧಿವೇಶನದ ಎರಡನೇ ದಿನದಂದು ಎರಡು ಬಾರಿ ಸದನವನ್ನು ಮುಂದೂಡಲಾಗಿತ್ತು. ನಂತರ ಮಧ್ಯಾಹ್ನ 2 ಗಂಟೆಗೆ ಸದನ ಮತ್ತೆ ಸೇರಿದಾಗ ವಿರೋಧ ಪಕ್ಷದ ಸದಸ್ಯರು ಲೋಕಸಭೆಯ ಬಾವಿಗೆ ಇಳಿದು ಪ್ರತಿಭಟಿಸಿದರು. ಹೀಗಾಗಿ ಸದನವನ್ನು ನಾಳೆಗೆ ಮುಂದೂಡಲಾಯಿತು

ಸದನದ ಭಾವಿಗಿಳಿದಿದ್ದ ವಿರೋಧ ಪಕ್ಷದ ಸಂಸದರನ್ನು ತಮ್ಮ ಸ್ಥಳಗಳಿಗೆ ಹೋಗಿ ಕುಳಿತುಕೊಳ್ಳುವಂತೆ ಸದನವನ್ನು ಸುಗಮವಾಗಿ ನಡೆಯಲು ಅನುವು ಮಾಡಿಕೊಡುವಂತೆ ಸಭಾಧ್ಯಕ್ಷ ದಿಲೀಪ್ ಸೈಕಿಯಾ ಅವರು, ಪದೇ ಪದೇ ವಿನಂತಿಸಿದರು. ಆದರೆ ವಿಪಕ್ಷಗಳು ಪ್ರತಿಭಟನೆಯನ್ನು ಮುಂದುವರೆಸಿದರು. ಈ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಎದ್ದು ವಿರೋಧ ಪಕ್ಷದ ನಡವಳಿಕೆಯನ್ನು ಖಂಡಿಸಿದರು.
ನಿನ್ನೆ ನಡೆದ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಮೊದಲು ಆಪರೇಷನ್ ಸಿಂಧೂರ್ ಬಗ್ಗೆ ಚರ್ಚೆ ನಡೆಸಲಾಗುವುದು ಮತ್ತು ಅದಕ್ಕೆ ಸಮಯವನ್ನು ಸಹ ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು. ಚರ್ಚೆ ನಡೆಯುವ ನಿಯಮವನ್ನು ಮಾತ್ರ ನಿರ್ಧರಿಸಲಾಗುತ್ತದೆ. ಅವರು ಫಲಕಗಳನ್ನು ಹಿಡಿದುಕೊಂಡು ಇಲ್ಲಿಗೆ ಬಂದು ನಿಯಮಗಳನ್ನು ಉಲ್ಲಂಘಿಸುತ್ತಾರೆ, ಇದನ್ನು ನಾನು ಖಂಡಿಸುತ್ತೇನೆ” ಎಂದು ರಿಜಿಜು ಹೇಳಿದರು.