ಚಿತ್ರದುರ್ಗ: ಒಳಮೀಸಲಾತಿ ವರದಿಯ ಅಂಗೀಕಾರಕ್ಕೆ ಬೋವಿಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ತರಾತುರಿಯಲ್ಲಿ ಯಾವುದೇ ನಿರ್ಣಯ ಕೈಗೊಳ್ಳದೆ, ಎಲ್ಲಾ ಸಮುದಾಯಗಳೊಂದಿಗೆ ಸಮಾಲೋಚನೆ ನಡೆಸಿ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ತರಾತುರಿಯಲ್ಲಿ ವರದಿಯನ್ನು ಜಾರಿಗೊಳಿಸಿದರೆ, ಕಾನೂನಾತ್ಮಕವಾಗಿ ಮತ್ತು ಸಾರ್ವಜನಿಕವಾಗಿ ಹೋರಾಟ ರೂಪಿಸಬೇಕಾಗುತ್ತದೆ. ಸಚಿವ ಸಂಪುಟದಲ್ಲಿ ಸುಧೀರ್ಘ ಚರ್ಚೆ ನಡೆಸಿ, ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ವರದಿಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ.
ಸುಪ್ರೀಂ ಕೋರ್ಟ್ನ ಒಳಮೀಸಲಾತಿ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನಾಗಮೋಹನದಾಸ್ ಆಯೋಗವನ್ನು ರಚಿಸಿ, ಎರಡು ತಿಂಗಳ ಕಾಲ ಸಮೀಕ್ಷೆ ನಡೆಸಿತ್ತು. ಈ ವರದಿಯನ್ನು ಸರ್ಕಾರ ನಿನ್ನೆ ಸ್ವೀಕರಿಸಿದ್ದು, ನಾಳೆ ಸಚಿವ ಸಂಪುಟದಲ್ಲಿ ಮಂಡಿಸಲಿದೆ. ಆದರೆ, ಈ ವರದಿಯನ್ನು ಅಧಿಕೃತ ಎಂದು ಪರಿಗಣಿಸಲು ಸ್ವಾಮೀಜಿ ನಿರಾಕರಿಸಿದ್ದಾರೆ. ‘ವರದಿಯ ಬಗ್ಗೆ ಮಾಧ್ಯಮಗಳ ಮೂಲಕ ಮಾಹಿತಿ ತಿಳಿದಿದ್ದು, ಹಲವು ಸಮುದಾಯಗಳಿಗೆ ಅಸಮಾಧಾನವಿದೆ’ ಎಂದು ಅವರು ಹೇಳಿದ್ದಾರೆ.
ತರಾತುರಿಯಲ್ಲಿ ಜಾರಿ ಮಾಡಿದರೆ ಎಚ್ಚರ:
101 ಜಾತಿಗಳಿಗೆ ಅನ್ಯಾಯವಾಗದಂತೆ ವೈಜ್ಞಾನಿಕವಾಗಿ ವರದಿ ತಯಾರಾಗಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು. ಯಾರದೋ ಒತ್ತಡಕ್ಕೆ ಒಳಗಾಗಿ ವರದಿಯನ್ನು ಸ್ವೀಕರಿಸಿದ್ದಾರೆ ಎಂಬ ಅನುಮಾನ ಜನರಲ್ಲಿ ಮೂಡಬಾರದು. ಸರ್ಕಾರ ತಕ್ಷಣ ವರದಿಯನ್ನು ಸಾರ್ವಜನಿಕರಿಗೆ ವಿತರಿಸಿ, ಆಯಾ ಸಮುದಾಯಗಳ ಅಭಿಪ್ರಾಯ ಸಂಗ್ರಹಿಸಬೇಕು ಎಂದು ಆಗ್ರಹಿಸಿದ್ದಾರೆ. ಗದ್ದಲ-ಗಲಾಟೆಯಿಂದ ಸದನದಲ್ಲಿ ವರದಿಯನ್ನು ಅಂಗೀಕರಿಸದೆ, 1 ಕೋಟಿ 8 ಲಕ್ಷ ಪರಿಶಿಷ್ಟ ಜಾತಿಗಳ ಜನರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದಿದ್ದಾರೆ.