ನವದೆಹಲಿ: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಲೋಕಸಭೆ- ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಸೇರಿ ಭಾರಿ ಪ್ರಮಾಣದ ಮತಕಳವು ನಡೆಸಿವೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಅವರು ವಿವರ ನೀಡಿದ್ದಾರೆ. ಬೆಂಗಳೂರಿನ ಮಹದೇವಪುರ ಕ್ಷೇತ್ರ ಒಂದರಲ್ಲಿಯೇ 1 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಕಲಿ ಮತದಾನ ನಡೆದಿದೆ. ಭಾರತದ ಚುನಾವಣಾ ಆಯೋಗ (ಇಸಿಐ) ಆಡಳಿತಾರೂಢ ಬಿಜೆಪಿಯೊಂದಿಗೆ ಶಾಮೀಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದು, ಕರ್ನಾಟಕದ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದ ನಕಲಿ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಇದು ದೇಶದಲ್ಲಿ ಚುನಾವಣಾ ಪ್ರಕ್ರಿಯೆಗಳ ವಿಶ್ವಾಸಾರ್ಹತೆಯ ಬಗ್ಗೆ ವ್ಯಾಪಕ ಕಳವಳವನ್ನು ಹುಟ್ಟುಹಾಕಿದೆ ಎಂದು ಹೇಳಿದ್ದಾರೆ.
ಚುನಾವಣಾ ಆಯೋಗವು ಎಲೆಕ್ಟ್ರಾನಿಕ್ ಡೇಟಾವನ್ನು ಏಕೆ ಒದಗಿಸುವುದಿಲ್ಲ ಎಂದು ಪ್ರಶ್ನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನಾವು ಆಯೋಗವನ್ನು ಪದೇ ಪದೆ ಡೇಟಾವನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಕೇಳಿದೆವು, ಆದರೆ ಅವರು ಅದನ್ನು ನಮಗೆ ನೀಡಿಲ್ಲ. ಚುನಾವಣಾ ಆಯೋಗವು ನಮಗೆ ಉತ್ತರಿಸಲು ಸಹ ನಿರಾಕರಿಸಿತು’ ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಬ್ಬ ವ್ಯಕ್ತಿ ಬಹು ರಾಜ್ಯಗಳಲ್ಲಿ ಬಹು ಮತಗಳನ್ನು ಚಲಾಯಿಸುತ್ತಾನೆ. ಅಂತಹ ಮತದಾರರ ಸಂಖ್ಯೆ ಸಾವಿರಾರು ಸಂಖ್ಯೆಯಲ್ಲಿದೆ. ಅಂತಹ 40 ಸಾವಿರಕ್ಕೂ ಹೆಚ್ಚು ಮತದಾರರ ವಿಳಾಸಗಳು ನಕಲಿ ಎಂದು ಕಂಡುಬಂದಿದೆ. ಅನೇಕ ಮತದಾರರು ಏಕಕಾಲದಲ್ಲಿ ಮನೆ ಸಂಖ್ಯೆ -0 ನಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಕರ್ನಾಟಕದಲ್ಲಿ ಒಂದು ಕೋಣೆಯ ಮನೆಯಲ್ಲಿ 80 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಒಂದೇ ವಿಳಾಸದಲ್ಲಿ 10,452 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಮತದಾರರ ಪಟ್ಟಿಯಲ್ಲಿ 4000 ಕ್ಕೂ ಹೆಚ್ಚು ಮತದಾರರ ಹೆಸರಲ್ಲಿ ಛಾಯಾಚಿತ್ರ ಮತ್ತು ಹೆಸರಿನ ಕೊರತೆ ಇದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಚುನಾವಣಾ ಆಯೋಗ ಪ್ರತಿಕ್ರಿಯೆ..
ರಾಹುಲ್ ಗಾಂಧಿ ಆರೋಪಕ್ಕೆ ರಾಜ್ಯ ಚುನಾವಣಾ ಆಯೋಗದ ಪ್ರತ್ಯುತ್ತರ ನೀಡಿದೆ. ಮತದಾರರ ಪಟ್ಟಿಯನ್ನು ಪ್ರಕಟಿಸಿದ ಬಳಿಕ ಕಾಂಗ್ರೆಸ್ ಯಾವುದೇ ದೂರು ನೀಡಿಲ್ಲ. 2024ರ ನವಂಬರ್ನಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. 2025ರ ಜನವರಿಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು. ಬಳಿಕ ಕಾಂಗ್ರೆಸ್ ಜಿಲ್ಲಾ ಚುನಾವಣಾಧಿಕಾರಿಗಳಿಗೂ ಕಾಂಗ್ರೆಸ್ ಯಾವುದೇ ದೂರು ನೀಡಿಲ್ಲ. ಮತದಾರರ ಪಟ್ಟಿಯನ್ನು ಆಕ್ಷೇಪಿಸಿ ದೂರು ನೀಡಿಲ್ಲ. ಚುನಾವಣಾ ಫಲಿತಾಂಶಗಳನ್ನು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಪ್ರಶ್ನಿಸಬಹುದು.
ಇಂದು ನೀವು ಅನರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೀರಿ. ಇದರ ಬಗ್ಗೆ ನೀವು ರಿಜಿಸ್ಟ್ರೇಷನ್ ಆಫ್ ಎಲೆಕ್ಟಾರ್ಸ್ ರೂಲ್ಸ್, 1960ರ 20(3)(ಬಿ)ಅಡಿ ಘೋಷಣಾ ಪತ್ರಕ್ಕೆ ಸಹಿ ಹಾಕಿ ದೂರು ನೀಡಿ. ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವುದು, ಅನರ್ಹರ ಸೇರ್ಪಡೆ ಬಗ್ಗೆ ಹೆಸರು ಸಹಿತ ದೂರು ನೀಡಿ. ಬಳಿಕ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದ ರಾಜ್ಯ ಚುನಾವಣಾ ಆಯೋಗ ಹೇಳಿದೆ.
ನಾಳೆ (ಆಗಸ್ಟ್ 8) ಬೆಂಗಳೂರಿನಲ್ಲಿ ಚುನಾವಣಾ ಆಯೋಗ ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ನಿಂದ ಪ್ರತಿಭಟನಾ ಜಾಥಾ ನಡೆಯಲಿದೆ. ರಾಹುಲ್ ಗಾಂಧಿ ಈ ಜಾಥಾದ ನೇತೃತ್ವ ವಹಿಸಲಿದ್ದಾರೆ.