ಧರ್ಮಸ್ಥಳ: ಕರ್ನಾಟಕ ಬಿಜೆಪಿ ವತಿಯಿಂದ ಆಯೋಜಿಸಿರುವ “ಧರ್ಮಸ್ಥಳ ಚಲೋ” ಬೃಹತ್ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯದ ವಿವಿಧೆಡೆಗಳಿಂದ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಭಕ್ತಾದಿಗಳು ಭಾರಿ ಸಂಖ್ಯೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ.
ಸಮಾವೇಶದ ಅಂಗವಾಗಿ ಪಕ್ಷದ ಶಾಸಕರು, ಸಂಸದರು, ಪ್ರಮುಖರು ಹಾಗೂ ಸಾವಿರಾರು ಕಾರ್ಯಕರ್ತರೊಂದಿಗೆ ಶ್ರೀ ಮಂಜುನಾಥ ಸ್ವಾಮಿಯವರ ದರ್ಶನ ಪಡೆದು ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, “ಕಾರ್ಯಕರ್ತರು ಹಾಗೂ ಶ್ರೀ ಮಂಜುನಾಥ ಸ್ವಾಮಿಯ ಭಕ್ತರು ನಿರೀಕ್ಷೆ ಮೀರಿ ಧರ್ಮಸ್ಥಳದತ್ತ ಹರಿದು ಬರುತ್ತಿರುವುದು ಕಾರ್ಯಕ್ರಮದ ಭರ್ಜರಿ ಯಶಸ್ಸಿನ ಮುನ್ಸೂಚನೆ” ಎಂದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ, ಸಂಸದ ಕ್ಯಾಪ್ಟನ್ ಬ್ರಿಜೇಶ್, ರಾಜ್ಯ ಸಂಚಾಲಕ ಹಾಗೂ ಶಾಸಕ ಎಸ್.ಆರ್. ವಿಶ್ವನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಶಾಸಕರಾದ ಸುರೇಶ್ ಗೌಡ, ಮುನಿರತ್ನ, ಹರೀಶ್ ಪೂಂಜ ಸೇರಿದಂತೆ ಅನೇಕ ಸಂಸದರು, ಶಾಸಕರು, ಮಾಜಿ ಶಾಸಕರು, ಪಕ್ಷದ ಪ್ರಮುಖರು ಹಾಗೂ ಭಕ್ತಾದಿಗಳು ಭಾಗವಹಿಸಿದರು.
ಧರ್ಮಸ್ಥಳದ ಪವಿತ್ರ ಭೂಮಿಯಲ್ಲಿ ನಡೆದ ಈ ಬೃಹತ್ ಸಮಾವೇಶವು ಬಿಜೆಪಿಯ ಶಕ್ತಿ ಪ್ರದರ್ಶನವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯಕ್ಕೆ ಮಹತ್ವದ ಪ್ರಭಾವ ಬೀರುವ ನಿರೀಕ್ಷೆ ವ್ಯಕ್ತವಾಗಿದೆ.