ಸೊರಬ: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಿಸಲ್ಪಟ್ಟಿರುವ ‘ಬಂಗಾರ ಧಾಮ’ವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಐತಿಹಾಸಿಕ ಪ್ರವಾಸಿ ತಾಣವಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
‘ಬಂಗಾರ ಧಾಮ’ವನ್ನು ಎಸ್. ಬಂಗಾರಪ್ಪ ಫೌಂಡೇಶನ್ ನಿರ್ವಹಿಸುತ್ತಿದ್ದು, ಮಧು ಬಂಗಾರಪ್ಪ ಅವರ ವೈಯಕ್ತಿಕ ಖರ್ಚಿನಲ್ಲಿ ನಿರ್ಮಾಣಗೊಂಡಿದೆ. ಇದು ಮಾಜಿ ಮುಖ್ಯಮಂತ್ರಿ ಸಾರೇಕೊಪ್ಪ ಬಂಗಾರಪ್ಪ ಮತ್ತು ಶಕುಂತಲಮ್ಮ ಅವರ ಪುಣ್ಯಸ್ಥಳವಾಗಿದ್ದು, ಅವರ ಚಿಂತನೆ, ಅಭಿರುಚಿ ಹಾಗೂ ಜನಸಮೂಹದೊಂದಿಗೆ ಇದ್ದ ಬಾಂಧವ್ಯವನ್ನು ಪ್ರತಿಬಿಂಬಿಸುತ್ತದೆ.
ಇಲ್ಲಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ, ಕಾನೂನು ಸಚಿವ ಎಚ್.ಕೆ. ಪಾಟೀಲ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಅನೇಕ ಗಣ್ಯರು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುಮಾರು ಒಂದು ಕಾಲು ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ಈ ಧಾಮವು 100×100 ಅಡಿ ವ್ಯಾಪ್ತಿಯ ವಿಶಿಷ್ಟ ವಿನ್ಯಾಸದ ಪುಣ್ಯಸ್ಥಳವಾಗಿದ್ದು, ಗ್ರಾನೈಟ್ ಮತ್ತು ಮಾರ್ಬಲ್ ಕೆತ್ತನೆಯ ಕಲಾಕೃತಿಗಳು ಇದರ ಸೌಂದರ್ಯವನ್ನು ಹೆಚ್ಚಿಸಿವೆ. ಧ್ಯಾನಮಂದಿರ, ಕುಡಿಯುವ ನೀರು, ಶೌಚಾಲಯ, ವಾಕಿಂಗ್ ಪಾಥ್, ಹೂವಿನ ತೋಟ, ಅಲಂಕಾರಿಕ ಗಿಡಗಳು ಸೇರಿದಂತೆ ಅಗತ್ಯ ಸೌಲಭ್ಯಗಳು ಇಲ್ಲಿವೆ.
ಇದಲ್ಲದೆ, 1,500 ಮಂದಿಗೆ ಆಸನ ವ್ಯವಸ್ಥೆಯೊಂದಿಗೆ ಆಧುನಿಕ ಬಯಲು ರಂಗಮಂದಿರ ನಿರ್ಮಾಣಗೊಂಡಿದ್ದು, ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳಿಗೆ ಅನುಕೂಲವಾಗಿದೆ. ಹೆಲಿಫ್ಯಾನ್ ಅಳವಡಿಕೆ, ಸಸ್ಯಸಂಪತ್ತಿ, 56 ಅಡಿ ಎತ್ತರದ ಕ್ಲಾಕ್ ಟವರ್, ವಿದ್ಯುದ್ಲಂಕಾರ ಹಾಗೂ ಆಕರ್ಷಕ ಸಂಗೀತ ಬಂಗಾರ ಧಾಮದ ವೈಶಿಷ್ಟ್ಯವನ್ನು ಹೆಚ್ಚಿಸಿವೆ.
ಇದೀಗ ರಾಜ್ಯ ಸರ್ಕಾರದ ಗುರುತಿನೊಂದಿಗೆ ‘ಬಂಗಾರ ಧಾಮ’ವು ಕರ್ನಾಟಕದ ಪ್ರಮುಖ ಐತಿಹಾಸಿಕ ಪ್ರವಾಸಿ ತಾಣಗಳ ಪಟ್ಟಿಗೆ ಸೇರ್ಪಡೆಯಾಗಿದೆ.