ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2025ಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ. ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ, ಗುರುವಾರ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಿಎಂಗೆ ಕರೆಯೋಲೆ ಹಸ್ತಾಂತರಿಸಲಾಯಿತು.
ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಫಲಪುಷ್ಪ ನೀಡಿ, ರೇಷ್ಮೆ ಶಾಲು ಹೊದಿಸಿ, ಹಾರ ಹಾಕಿ ಆಹ್ವಾನ ಪತ್ರಿಕೆ ನೀಡಲಾಯಿತು. ಈ ವೇಳೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ಚಾಮುಂಡಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ
ಆಹ್ವಾನ ಸ್ವೀಕರಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿ ಹೀಗೆ ತಿಳಿಸಿದ್ದಾರೆ:
“ನಾಡಹಬ್ಬ ದಸರೆಯ ಅಧಿಕೃತ ಆಮಂತ್ರಣ ಪತ್ರಿಕೆ ಇಂದು ನನ್ನ ಕೈಸೇರಿತು. ದಸರೆಯು ಕೇವಲ ಧಾರ್ಮಿಕ ಹಬ್ಬ ಮಾತ್ರವಲ್ಲ, ಶತಮಾನಗಳಿಂದ ಈ ನೆಲದ ಪರಂಪರೆ, ಕಲೆ, ಸಂಸ್ಕೃತಿಗಳನ್ನು ವಿಶ್ವಕ್ಕೆ ಪರಿಚಯಿಸುತ್ತಿರುವ ಸಾಂಸ್ಕೃತಿಕ ಉತ್ಸವ. ಒಳಿತಿನ ವಿಜೃಂಭಣೆ, ಜನಮನದ ಸಂಭ್ರಮ, ನಾಡಿನ ಕಲೆ-ಸಾಹಸಗಳ ಪ್ರದರ್ಶನ — ಇವೆಲ್ಲವನ್ನು ಒಟ್ಟುಗೂಡಿಸುವ ಹಬ್ಬವೇ ದಸರಾ. ಈ ಬಾರಿ ವೈಮಾನಿಕ ಪ್ರದರ್ಶನ ಕೂಡ ದಸರಾ ಮೆರುಗು ಹೆಚ್ಚಿಸಲಿದೆ. ಕರೆಯೋಲೆ ನೀಡಿ ಆತ್ಮೀಯವಾಗಿ ಆಹ್ವಾನಿಸಿದ ಸಚಿವ ಹೆಚ್.ಸಿ. ಮಹದೇವಪ್ಪ ಹಾಗೂ ಜಿಲ್ಲಾಡಳಿತಕ್ಕೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ಈ ಬಾರಿಯ ದಸರಾವನ್ನು ನಾವು ಎಲ್ಲರೂ ಸೇರಿ ಯಶಸ್ವಿಯಾಗಿಸೋಣ.”







