ಬೆಂಗಳೂರು, ಸೆಪ್ಟೆಂಬರ್ 19: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಗಣತಿ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಹತ್ವದ ಮನವಿ ಮಾಡಿದ್ದಾರೆ. “ಯಾವುದೇ ಜಾತಿ, ಸಮಾಜದವರಾದರೂ ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಬೇಕು” ಎಂದು ಅವರು ಬಿಜೆಪಿ ರಾಜಕೀಯ ಚಿಂತನಾ ಶಿಬಿರದಲ್ಲಿ ನಿರ್ಣಯ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದರು.
ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, “ಧರ್ಮ ಒಡೆಯುವ ಕೆಲಸಕ್ಕೆ ರಾಜ್ಯ ಸರ್ಕಾರ ಕೈ ಹಾಕಿರುವುದು ದುರಂತ. ಜಾತಿ, ಉಪ ಜಾತಿ ಎಂಬುದು ಸಮುದಾಯಕ್ಕೆ ಬಿಟ್ಟ ವಿಚಾರ. ಆದರೆ, ದೇಶ ಮತ್ತು ರಾಜ್ಯದ ಹಿತದೃಷ್ಟಿಯಿಂದ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ಬರೆಸಲು ಎಲ್ಲರಿಗೂ ಮನವಿ ಮಾಡುತ್ತಿದ್ದೇವೆ” ಎಂದರು.
ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ ಅವರು, “ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿ ಮಾಡಲು ಮುಂದಾಗಿದೆ. ರಾಜ್ಯಗಳಿಗೆ ಜಾತಿ ಜನಗಣತಿ ಅಧಿಕಾರವಿಲ್ಲದಿದ್ದರೂ 47 ಹೊಸ ಜಾತಿಗಳನ್ನು ಸೃಷ್ಟಿಸಿ ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ, ಕ್ರಿಶ್ಚಿಯನ್ ನೇಕಾರ, ಕ್ರಿಶ್ಚಿಯನ್ ಪರಿಶಿಷ್ಟ ಜಾತಿ, ಪಂಗಡ ಎಂದು ಗೊಂದಲ ಸೃಷ್ಟಿಸಿದೆ” ಎಂದು ಆರೋಪಿಸಿದರು.
ಅದೇ ರೀತಿ, ಕಾಂತರಾಜು ವರದಿ ಕುರಿತು ಮಾತನಾಡಿದ ಅವರು, “ಈ ವರದಿ ಅವೈಜ್ಞಾನಿಕವೆಂದು ನಾವು ವಿರೋಧಿಸಿದ್ದೆವು. ರಾಹುಲ್ ಗಾಂಧಿ ಹೇಳಿಕೆ ಆಧಾರವಾಗಿ ಸಿದ್ದರಾಮಯ್ಯನವರ ಸರ್ಕಾರ ಇದನ್ನು ಕಸದ ಬುಟ್ಟಿಗೆ ಹಾಕಿತ್ತು. ಹಿಂದೆಯೂ ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ ಗೊಂದಲ ಸೃಷ್ಟಿಸಿ ಸಮಾಜದಲ್ಲಿ ಬೆಂಕಿ ಹಚ್ಚಿದ ಸರ್ಕಾರ ಇದೇ” ಎಂದು ಟೀಕಿಸಿದರು.
ಈ ಚಿಂತನಾ ಶಿಬಿರದಲ್ಲಿ ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮೋದೀ ನೇತೃತ್ವದ ಎನ್ಡಿಎ ಸರ್ಕಾರ ಸರಳೀಕೃತ ಜಿಎಸ್ಟಿ ಜಾರಿಗೆ ತಂದಿರುವುದು ಒಂದು ಐತಿಹಾಸಿಕ ನಿರ್ಧಾರ ಎಂದು ಅವರು ಶ್ಲಾಘಿಸಿದರು. “ಇದರಿಂದ ದೇಶದ ಜನತೆ ಸಂತೋಷಗೊಂಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಸವಾಲುಗಳ ನಡುವೆ ಮೋದೀಜೀ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ಈ ಸುಧಾರಣೆ ಶ್ಲಾಘನೀಯ” ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್, ಶಾಸಕ ಅರವಿಂದ್ ಬೆಲ್ಲದ್, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯ ಉಪಾಧ್ಯಕ್ಷ ರಾಜು ಗೌಡ ನಾಯಕ್ ಮತ್ತು ಇತರರು ಉಪಸ್ಥಿತರಿದ್ದರು.