ಕಾರವಾರ, ಅಕ್ಟೋಬರ್ 13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶಪಾಂಡೆಗೆ ಸ್ವತಃ ಕರೆ ಮಾಡಿ, ಹೇಳಿಕೆಯ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ ಎನ್ನಲಾಗಿದೆ.
ಮಾಹಿತಿ ಪ್ರಕಾರ, ಸಿಎಂ ಅವರೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ದೇಶಪಾಂಡೆ ಅವರು, “ನಾನು ಬೆಂಗಳೂರಿಗೆ ಬಂದು ಈ ಕುರಿತು ಸ್ವತಃ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ. ಹುಬ್ಬಳ್ಳಿಯಿಂದ ರಾತ್ರಿ 8 ಗಂಟೆಗೆ ಬೆಂಗಳೂರಿಗೆ ತೆರಳಲಿರುವ ಅವರು ಇಂದು ರಾತ್ರಿ ಅಥವಾ ನಾಳೆ ಮುಖ್ಯಮಂತ್ರಿಯನ್ನು ಭೇಟಿಯಾಗುವ ಸಾಧ್ಯತೆಯಿದೆ.
ದೇಶಪಾಂಡೆ ಸ್ಪಷ್ಟನೆ
ಚರ್ಚೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮಾಧ್ಯಮ ಪ್ರಕಟಣೆ ಮೂಲಕ ದೇಶಪಾಂಡೆ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
“ದಾಂಡೇಲಿಯಲ್ಲಿ ನಡೆದ ಸಭೆಯಲ್ಲಿ ನಾನು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿಲ್ಲ. ಸಿದ್ದರಾಮಯ್ಯ ಅವರು ಬಡವರ ಪರವಾಗಿ ಜಾರಿಗೆ ತಂದಿರುವ ಈ ಯೋಜನೆಗಳು ಶ್ಲಾಘನೀಯ. ನನ್ನ ಮಾತಿನ ಉದ್ದೇಶ ಟೀಕಿಸುವುದಲ್ಲ, ಪ್ರಶಂಸಿಸುವುದೇ. ಆದರೆ ಕೆಲವರು ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂಬುದು ವಿಷಾದನೀಯ,” ಎಂದು ಅವರು ತಿಳಿಸಿದ್ದಾರೆ.
ಅವರು ಮುಂದುವರೆದು, “ಸಿದ್ದರಾಮಯ್ಯ ಅವರ ಜನಪರ ಆಡಳಿತ ಶಕ್ತಿ ಈ ಯೋಜನೆಗಳಲ್ಲಿದೆ. ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ತಂದಿದೆ ಎಂಬ ಮಾತು ನಾನು ಎಲ್ಲಿಯೂ ಹೇಳಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಈಗಾಗಲೇ ಗ್ಯಾರಂಟಿಗಳ ಆರ್ಥಿಕ ಪರಿಣಾಮಗಳ ಬಗ್ಗೆ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ, ಸ್ವಪಕ್ಷದ ಹಿರಿಯ ನಾಯಕರ ಹೇಳಿಕೆ ಸಿಎಂಗೆ ಹೊಸ ತಲೆನೋವಾಗಿ ಪರಿಣಮಿಸಿದೆ.







