ಬೆಂಗಳೂರು, ನ.5: ವಿಶ್ವದಲ್ಲೇ ದೊಡ್ಡದಾದ ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಈಗ ಅದರ ಮಾದರಿಯಲ್ಲೇ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ (ಸೊಸೈಟಿ) ಮತ್ತು ಗೃಹಲಕ್ಷ್ಮಿ ಬ್ಯಾಂಕ್ ಸ್ಥಾಪನೆಗೆ ಮುಂದಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, “ಫಲಾನುಭವಿಗಳಿಗೆ ಹೆಚ್ಚಿನ ಲಾಭ ತಂದುಕೊಡುವ ಗುರಿಯಿಂದ 2000 ಜನ ಫಲಾನುಭವಿಗಳಿಂದ ಹಣ ಸಂಗ್ರಹ ಪ್ರಾರಂಭವಾಗಿದೆ. ಇದು ದೊಡ್ಡ ಜವಾಬ್ದಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯ ಯಶಸ್ಸಿನಂತೆಯೇ ಬ್ಯಾಂಕ್ಗೂ ಜನಮನ್ನಣೆ ಗಳಿಸುವಂತೆ ಅಧಿಕಾರಿಗಳು ಶ್ರಮವಹಿಸಬೇಕು” ಎಂದರು.
ಬೆಂಗಳೂರು ಕಂಠೀರವ ಸ್ಟೇಡಿಯಂನಲ್ಲಿ ನವೆಂಬರ್ 19ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕಾ ಪಡೆ ಲೋಕಾರ್ಪಣೆ ಹಾಗೂ ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತಂತೆ ಡಾ. ಬಾಬು ಜಗಜೀವನರಾಮ್ ಆಡಿಟೋರಿಯಂನಲ್ಲಿ ನಡೆದ ರಾಜ್ಯಮಟ್ಟದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಗೃಹಲಕ್ಷ್ಮಿ ಸೊಸೈಟಿಯಿಂದ ಕಡಿಮೆ ಬಡ್ಡಿದರ ಸಾಲ
ಸಚಿವರು ಮುಂದುವರಿದು, “ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಸೊಸೈಟಿಯನ್ನು ವಿಸ್ತರಿಸಲಾಗುವುದು. ಈ ಸೊಸೈಟಿ ಮೂಲಕ ಫಲಾನುಭವಿಗಳಿಗೆ ₹3 ಲಕ್ಷದವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ನಾವು ಯಾರಿಂದಲೂ ಹಣ ಪಡೆಯುವುದಿಲ್ಲ; ಫಲಾನುಭವಿಗಳಿಂದಲೇ ಫೋನ್ಪೇ ಮೂಲಕ ಹಣ ಸಂಗ್ರಹಿಸಲಾಗುವುದು. ಎಲ್ಲರೂ ಜವಾಬ್ದಾರಿಯುತವಾಗಿ ಸಹಕರಿಸಿದರೆ ಈ ಯೋಜನೆ ಯಶಸ್ಸು ಕಾಣುತ್ತದೆ,” ಎಂದು ಹೇಳಿದರು.
ಮಹಿಳೆಯರ ಸುರಕ್ಷತೆಗೆ ‘ಅಕ್ಕಾ ಪಡೆ’
ರಾಜ್ಯಾದ್ಯಂತ ಮಹಿಳೆಯರ ಸುರಕ್ಷತೆಗಾಗಿ ‘ಅಕ್ಕಾ ಪಡೆ’ ಸ್ಥಾಪಿಸಲಾಗುತ್ತಿದೆ. ಹೋಮ್ಗಾರ್ಡ್ಸ್, ಎನ್ಸಿಸಿ ವಿದ್ಯಾರ್ಥಿಗಳು ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಶಾಲೆ, ಕಾಲೇಜು, ಪಾರ್ಕ್, ಮಾಲ್ಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು ತಿರುಗಲಿದ್ದಾರೆ. ಡೀಪ್ ಫೇಕ್ ಹಾವಳಿಯಿಂದ ಮಹಿಳೆಯರನ್ನು ರಕ್ಷಿಸಲು ಹಾಗೂ ಜಾಗೃತಿ ಮೂಡಿಸಲು ಅಕ್ಕಾ ಪಡೆ ಮುಂದಾಗಲಿದೆ.
ಎಲ್ಕೆಜಿ–ಯುಕೆಜಿ ದಾಖಲಾತಿ ಹೆಚ್ಚಿಸಬೇಕು
ಅಂಗನವಾಡಿ ಕೇಂದ್ರಗಳಲ್ಲಿ ಆರಂಭವಾಗುವ ಎಲ್ಕೆಜಿ, ಯುಕೆಜಿ ತರಗತಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾತಿಯಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನವೆಂಬರ್ 19ರಂದು ಇಂದಿರಾ ಗಾಂಧಿಯವರ ಹುಟ್ಟುಹಬ್ಬದ ದಿನದಂದು ನಡೆಯುವ ಈ ಮೂರು ಪ್ರಮುಖ ಕಾರ್ಯಕ್ರಮಗಳು ಯಶಸ್ವಿಯಾಗಲು ಎಲ್ಲರೂ ಕೈಜೋಡಿಸಬೇಕು ಎಂದರು.
ಎಂಟು ಜಿಲ್ಲೆಗಳಿಂದ ಹೆಚ್ಚಿನ ಮಹಿಳೆಯರ ಭಾಗವಹಿಕೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು 40 ಸಾವಿರಕ್ಕೂ ಅಧಿಕ ಮಹಿಳೆಯರು ಆಗಮಿಸುವ ನಿರೀಕ್ಷೆಯಿದೆ.
ಸಭೆಯಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಸರ್ಕಾರದ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ನಿರ್ದೇಶಕ ಮಹೇಶ್ ಬಾಬು, ಉಪ ಕಾರ್ಯದರ್ಶಿ ಮುರಳೀಧರ್ ಎಸ್. ತಳ್ಳೀಕೆರಿ, ಸಚಿವರ ಆಪ್ತ ಕಾರ್ಯದರ್ಶಿ ಡಾ. ಟಿ.ಎಚ್. ವಿಶ್ವನಾಥ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಸೇರಿದಂತೆ ರಾಜ್ಯದ 31 ಜಿಲ್ಲೆಗಳ ಅಧಿಕಾರಿಗಳು ಹಾಜರಿದ್ದರು.






