ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ; ಉಲ್ಲಂಘಿಸಿದರೆ ಕ್ರಮ – ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ

On: December 17, 2025 12:46 PM
Follow Us:

ಬೆಳಗಾವಿ: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳ ಖಾಸಗಿ ಶಾಲೆಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಲೇಬೇಕು. ಈ ನಿಯಮ ಉಲ್ಲಂಘಿಸಿದರೆ ಸಂಬಂಧಿಸಿದ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಅವರು ಈ ವಿಷಯ ಪ್ರಸ್ತಾಪಿಸಿ, ರಾಜ್ಯದಲ್ಲಿನ ICSE, CBSE, IB, IGCSE ಸೇರಿದಂತೆ ಅಂತರರಾಷ್ಟ್ರೀಯ ಬೋರ್ಡ್‌ಗಳ ಅನೇಕ ಖಾಸಗಿ ಶಾಲೆಗಳು ಕಡ್ಡಾಯ ಭಾಷಾ ಕಲಿಕೆ ನಿಯಮವನ್ನು ಜಾರಿ ಮಾಡಿಲ್ಲ ಎಂದು ಆರೋಪಿಸಿದರು. ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿರುವ ಶಾಲೆಗಳ ವಿರುದ್ಧ ಕೇವಲ ನೋಟಿಸ್ ನೀಡುವ ಮೂಲಕ ಶಿಕ್ಷಣ ಇಲಾಖೆ ಸೀಮಿತ ಕ್ರಮಕ್ಕೆ ತೃಪ್ತಿಪಟ್ಟಿದೆ. ಇಂತಹ ಶಾಲೆಗಳ ಮೇಲೆ ಕಠಿಣ ಕ್ರಮ ಅಗತ್ಯವಿದೆ ಎಂದು ಅವರು ಆಗ್ರಹಿಸಿದರು.

ಇದೇ ವೇಳೆ RTE (ಶಿಕ್ಷಣ ಹಕ್ಕು ಕಾಯ್ದೆ) ಅಡಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ ದಾಖಲಾತಿ ಕಡಿಮೆಯಾಗಿರುವ ಕುರಿತು ಪ್ರಶ್ನೆ ಮಾಡಿದ ಅವರು, ಖಾಸಗಿ ಶಾಲೆಗಳಲ್ಲಿ 25 ಶೇಕಡಾ ಸೀಟುಗಳನ್ನು ಮೀಸಲಿಡಬೇಕು ಹಾಗೂ ಅದಕ್ಕೆ ಸರ್ಕಾರವೇ ಶುಲ್ಕ ಪಾವತಿಸಬೇಕು ಎಂಬ ನಿಯಮ ಇದ್ದರೂ ದಾಖಲಾತಿ ಏಕೆ ಇಳಿಕೆಯಾಗುತ್ತಿದೆ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಯಾವುದೇ ಬೋರ್ಡ್‌ನ ಶಾಲೆಯಾಗಿದ್ದರೂ ಕನ್ನಡ ಕಲಿಕೆ ಕಡ್ಡಾಯವಾಗಿದ್ದು, ಈ ಕುರಿತು ಶಾಲೆಗಳಿಂದ ಮುಚ್ಚಳಿಕೆ ಪತ್ರ ಪಡೆದುಕೊಳ್ಳಲಾಗುತ್ತಿದೆ ಎಂದರು. ಕನ್ನಡ ಕಲಿಸದೇ ಇರುವುದಾಗಿ ದೂರು ಬಂದಲ್ಲಿ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಸೋಫಿಯಾ ಶಾಲೆಯ ಕುರಿತು ಆರೋಪ ಬಂದಾಗ ತನಿಖೆ ನಡೆಸಲಾಗಿದೆ. ಮುಂದೆಯೂ ಯಾವುದೇ ಶಾಲೆಯ ವಿರುದ್ಧ ದೂರು ಬಂದರೆ ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು. ಕನ್ನಡ ಕಲಿಕೆ ನಡೆಯುತ್ತಿದೆಯೇ ಇಲ್ಲವೇ ಎಂಬುದನ್ನು ಮತ್ತೆ ಸಮಗ್ರವಾಗಿ ಪರಿಶೀಲಿಸಲಾಗುವುದು ಎಂದರು.

RTE ನಿಯಮದ ಅನ್ವಯ ದಾಖಲಾತಿ ಪ್ರಕ್ರಿಯೆ ನಡೆಯುತ್ತಿದೆ. ಸರ್ಕಾರಿ ಶಾಲೆ ಲಭ್ಯವಿಲ್ಲದ ಪ್ರದೇಶಗಳಲ್ಲಿ ಮಾತ್ರ ಖಾಸಗಿ ಶಾಲೆಗಳಲ್ಲಿ ದಾಖಲಾತಿಗೆ ಅವಕಾಶ ನೀಡಲಾಗುತ್ತದೆ ಎಂದು ಅವರು ಹೇಳಿದರು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದ್ದು, ಎಲ್‌ಕೆಜಿ–ಯುಕೆಜಿ ತರಗತಿಗಳನ್ನು ಸಹ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲಾಗಿದೆ. ಕೆಪಿಎಸ್ (ಕರ್ನಾಟಕ ಪಬ್ಲಿಕ್ ಶಾಲೆ) ಯೋಜನೆಯಡಿ ಉತ್ತಮ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.

RTE ಶುಲ್ಕ ಬಿಡುಗಡೆ ವಿಳಂಬವಾಗಿದ್ದರೆ ಅದು ತಾಂತ್ರಿಕ (RR) ಸಮಸ್ಯೆಯಾಗಿದ್ದು, ಶೀಘ್ರದಲ್ಲೇ ಹಣ ಬಿಡುಗಡೆ ಮಾಡಲಾಗುವುದು. ಪಾಲಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಲು ಸಹಕಾರ ನೀಡಬೇಕು ಎಂದು ಸಚಿವರು ಮನವಿ ಮಾಡಿದರು.

K.M.Sathish Gowda

Join WhatsApp

Join Now

Facebook

Join Now

Leave a Comment