ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ)’ (VB-GRAM-G) ಕಾಯ್ದೆಯನ್ನು ತೀವ್ರವಾಗಿ ವಿರೋಧಿಸಿ ಹಾಗೂ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ’ (MGNREGA) ಯನ್ನು ಹಿಂದಿನ ಸ್ವರೂಪದಲ್ಲೇ ಮರುಸ್ಥಾಪಿಸುವಂತೆ ಆಗ್ರಹಿಸಿ ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಣಯವನ್ನು ಮಂಡಿಸಿದರು.

ನಿರ್ಣಯ ಓದಲಾಗುತ್ತಿದ್ದಂತೆಯೇ ವಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ, “ಇದು ಸದನದ ನಿರ್ಣಯವಲ್ಲ, ಇದು ಕಾಂಗ್ರೆಸ್ ಪಕ್ಷದ ನಿರ್ಣಯ. ಇಂತಹ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸುವುದಿಲ್ಲ” ಎಂದು ಕಿಡಿಕಾರಿದರು. ಈ ವೇಳೆ ಸದನದಲ್ಲಿ ವಿಪಕ್ಷ ಸದಸ್ಯರು ಎದ್ದು ನಿಂತು ಗದ್ದಲ-ಕೋಲಾಹಲ ನಡೆಸಿದರು. ವಿರೋಧಗಳ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಣಯವನ್ನು ಸಂಪೂರ್ಣವಾಗಿ ಓದಿದರು.
ಪಂಚಾಯತ್ ರಾಜ್ ವ್ಯವಸ್ಥೆ ಮತ್ತು ವಿಕೇಂದ್ರೀಕರಣಕ್ಕೆ ಧಕ್ಕೆ
ನಿರ್ಣಯದ ಪ್ರಸ್ತಾವನೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಭಾರತೀಯ ಪ್ರಜಾಸತ್ತೆಯ ಬುನಾದಿಯಾದ ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ಅಧಿಕಾರ ವಿಕೇಂದ್ರೀಕರಣದ ತತ್ವಗಳಿಗೆ ಕರ್ನಾಟಕ ವಿಧಾನಸಭೆಯು ಸಂಪೂರ್ಣ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. ಗ್ರಾಮೀಣ ಬಡವರ ಪಾಲಿಗೆ ‘ಸಂಜೀವಿನಿ’ಯಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ರದ್ದುಪಡಿಸಿ, ಹೊಸ VB-GRAM-G ಕಾಯ್ದೆಯನ್ನು ಜಾರಿಗೆ ತಂದಿರುವುದು ಅತ್ಯಂತ ಗಂಭೀರ ವಿಚಾರವಾಗಿದೆ ಎಂದು ಹೇಳಿದರು.
ಈ ಹೊಸ ಕಾಯ್ದೆಯು ಒಕ್ಕೂಟ ವ್ಯವಸ್ಥೆಯ ಮೂಲ ಆಶಯಗಳಿಗೆ ವಿರುದ್ಧವಾಗಿದ್ದು, ಗ್ರಾಮೀಣ ಜನರ ಜೀವನೋಪಾಯದ ಹಕ್ಕಿಗೆ ಮಾರಕವಾಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
ಮನರೇಗದ ಇತಿಹಾಸ ಮತ್ತು ಸಾಧನೆ
2005ರಲ್ಲಿ ಅಂದಿನ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈ ಯೋಜನೆ ನಿರುದ್ಯೋಗ ನಿವಾರಣೆ, ಗ್ರಾಮೀಣ ವಲಸೆ ತಡೆ, ಲಿಂಗಭೇದವಿಲ್ಲದೆ ಸಮಾನ ಕೂಲಿ, ಪಂಚಾಯತ್ ವ್ಯವಸ್ಥೆಯ ಬಲವರ್ಧನೆ ಹಾಗೂ ವೈಯಕ್ತಿಕ ಮತ್ತು ಸಮುದಾಯ ಆಸ್ತಿಗಳ ಸೃಜನೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ ಎಂದು ಸಿಎಂ ವಿವರಿಸಿದರು.
ಸಂವಿಧಾನ ಉಲ್ಲಂಘನೆ ಆರೋಪ
ಹೊಸ VB-GRAM-G ಕಾಯ್ದೆಯು ಸಂವಿಧಾನದ 21ನೇ ಅನುಚ್ಛೇದದಡಿ ಸಿಗುವ ಜೀವಿಸುವ ಹಕ್ಕು ಮತ್ತು ಜೀವನೋಪಾಯದ ಹಕ್ಕನ್ನು ಉಲ್ಲಂಘಿಸುತ್ತದೆ. ಜೊತೆಗೆ 73ನೇ ಸಂವಿಧಾನ ತಿದ್ದುಪಡಿಯ ಮೂಲಕ ಗ್ರಾಮ ಪಂಚಾಯತಿಗಳಿಗೆ ನೀಡಲಾಗಿರುವ ಅಧಿಕಾರ ಮತ್ತು ಸ್ವಾಯತ್ತತೆಯನ್ನು ಕಸಿದುಕೊಳ್ಳುತ್ತದೆ. ಇದು ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯದ ಕಲ್ಪನೆಗೂ ವಿರುದ್ಧವಾಗಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.
ಮನರೇಗ ಯೋಜನೆಯಡಿಯಲ್ಲಿ 100 ಮಾನವ ದಿನಗಳ ಕೂಲಿಯನ್ನು ಕೇಂದ್ರ ಸರ್ಕಾರವೇ ಶೇ.100ರಷ್ಟು ಭರಿಸುತ್ತಿತ್ತು. ಆದರೆ ಹೊಸ ಕಾಯ್ದೆಯಡಿ ರಾಜ್ಯ ಸರ್ಕಾರಗಳು ಶೇ.40ರಷ್ಟು ಅನುದಾನ ನೀಡಬೇಕೆಂಬ ನಿಯಮವನ್ನು ಕೇಂದ್ರ ಸರ್ಕಾರ ಏಕಾಏಕಿ ಹೇರಿದೆ. 125 ಮಾನವ ದಿನಗಳ ಕೆಲಸ ಒದಗಿಸುವುದಾಗಿ ಹೇಳಿದರೂ, ವಾಸ್ತವವಾಗಿ ಹೆಚ್ಚುವರಿ ಹೊರೆ ರಾಜ್ಯಗಳ ಮೇಲೆ ಬೀಳುತ್ತದೆ ಎಂದು ಆರೋಪಿಸಲಾಗಿದೆ. ಇದು ಸಂವಿಧಾನದ ಅನುಚ್ಛೇದ 258 ಮತ್ತು 280ರ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸಿಎಂ ಹೇಳಿದರು.
ಕರ್ನಾಟಕದ ಆರ್ಥಿಕತೆಗೆ ಹೊಡೆತ
ಕರ್ನಾಟಕವು ದೇಶದಲ್ಲೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಎರಡನೇ ಸ್ಥಾನದಲ್ಲಿದ್ದು, ಗ್ರಾಮ ಪಂಚಾಯತಿಗಳ ತೆರಿಗೆ ಸಂಗ್ರಹದಲ್ಲಿ ಮೊದಲ ಸ್ಥಾನದಲ್ಲಿದೆ. ವಿಕೇಂದ್ರೀಕರಣ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ರಾಜ್ಯವೂ ಕರ್ನಾಟಕವೇ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
14ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಶೇ.4.71ರಷ್ಟು ತೆರಿಗೆ ಹಂಚಿಕೆ ನೀಡಲಾಗಿತ್ತು. 15ನೇ ಆಯೋಗದಲ್ಲಿ ಇದು ಶೇ.3.64ಕ್ಕೆ ಇಳಿಕೆಯಾಯಿತು. 16ನೇ ಹಣಕಾಸು ಆಯೋಗದಲ್ಲಿ ಶೇ.4.131ರಷ್ಟು ಶಿಫಾರಸ್ಸು ಮಾಡಿದ್ದರೂ, ಅದು ಹಿಂದಿನ ಹಂಚಿಕೆಗೆ ಹೋಲಿಸಿದರೆ ಶೇ.14.1ರಷ್ಟು ಕಡಿಮೆ ಎಂದು ಸಿಎಂ ಗಮನ ಸೆಳೆದರು. ಇಂತಹ ಸಂದರ್ಭದಲ್ಲಿ ಹೊಸ ಕಾಯ್ದೆಯ ಮೂಲಕ ಶೇ.40ರಷ್ಟು ಹಣಕಾಸು ಹೊರೆ ರಾಜ್ಯದ ಮೇಲೆ ಹಾಕಿರುವುದು ರಾಜ್ಯದ ಆರ್ಥಿಕ ಭದ್ರತೆ ಮತ್ತು ಅಭಿವೃದ್ಧಿಗೆ ಅಪಾಯಕಾರಿಯಾಗಿದೆ ಎಂದು ಎಚ್ಚರಿಸಿದರು.
ಬಡವರ ಹಕ್ಕು ಕಸಿತ
ಮನರೇಗದಲ್ಲಿ ಉದ್ಯೋಗವು ‘ಹಕ್ಕು’ ಹಾಗೂ ‘ಬೇಡಿಕೆ ಆಧಾರಿತ’ವಾಗಿತ್ತು. ಆದರೆ ಹೊಸ ಕಾಯ್ದೆಯಲ್ಲಿ ಉದ್ಯೋಗವನ್ನು ಕೇಂದ್ರ ಸರ್ಕಾರ ರೂಪಿಸುವ ಮಾನದಂಡಗಳ ಅಡಿಗೆ ಒಳಪಡಿಸಲಾಗಿದೆ. ಗ್ರಾಮಸಭೆ ಮತ್ತು ಪಂಚಾಯತಿಗಳ ಅಧಿಕಾರವನ್ನು ಕಡಿತಗೊಳಿಸಿ, ಕೆಲವೇ ಆಯ್ಕೆ ಮಾಡಿದ ಪಂಚಾಯತಿಗಳಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಹಳೆಯ ಕಾಯ್ದೆಯಡಿ ಹೊಲ-ನಮ್ಮ ದಾರಿ, ದನದ ಕೊಟ್ಟಿಗೆ, ಕುರಿ ದೊಡ್ಡಿ, ಶಾಲಾ ಕಾಂಪೌಂಡ್, ಶೌಚಾಲಯ, ಪಂಚಾಯತಿ ಕಟ್ಟಡ, ತೋಟಗಾರಿಕೆ ಬೆಳೆಗಳು, ಆಟದ ಮೈದಾನ ಸೇರಿದಂತೆ ಸ್ಥಳೀಯ ಅಗತ್ಯ ಆಸ್ತಿಗಳನ್ನು ನಿರ್ಮಿಸಲಾಗುತ್ತಿತ್ತು. ಆದರೆ ಹೊಸ ಕಾಯ್ದೆಯನ್ನು ‘ಪಿಎಂ ಗತಿಶಕ್ತಿ’ ಯೋಜನೆಗೆ ಜೋಡಿಸಿ, ದೊಡ್ಡ ರಸ್ತೆ ಹಾಗೂ ಹೆದ್ದಾರಿ ನಿರ್ಮಾಣಕ್ಕೆ ಬಳಸಲಾಗುತ್ತಿದ್ದು, ಗುತ್ತಿಗೆದಾರರು ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ಲಾಭವಾಗುತ್ತಿದೆ ಎಂದು ಸಿಎಂ ಆರೋಪಿಸಿದರು.
ಇದಲ್ಲದೆ, ವರ್ಷಕ್ಕೆ 12 ತಿಂಗಳ ಬದಲು ಕೇವಲ 10 ತಿಂಗಳು ಮಾತ್ರ ಕೆಲಸದ ಅವಕಾಶ, ಕೂಲಿ ದರದ ಖಚಿತತೆಯಿಲ್ಲದ ಸ್ಥಿತಿ, ಮಹಿಳೆಯರು, ಪರಿಶಿಷ್ಟ ಜಾತಿ-ಪಂಗಡದವರು, ಆದಿವಾಸಿಗಳು ಮತ್ತು ರೈತಾಪಿ ಜನರ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.
ಸದನದ ನಿರ್ಣಯ
ಈ ಎಲ್ಲ ಅಂಶಗಳನ್ನು ಪರಿಗಣಿಸಿ, ಕರ್ನಾಟಕ ವಿಧಾನಸಭೆಯು ಸರ್ವಾನುಮತದಿಂದ ಕೇಂದ್ರ ಸರ್ಕಾರವನ್ನು ಕೆಳಕಂಡಂತೆ ಒತ್ತಾಯಿಸುತ್ತದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ:
- ಒಕ್ಕೂಟ ತತ್ವಕ್ಕೆ ವಿರುದ್ಧವಾಗಿರುವ ಮತ್ತು ರಾಜ್ಯದ ಬೊಕ್ಕಸಕ್ಕೆ ತೀವ್ರ ಹೊರೆ ಉಂಟುಮಾಡುವ VB-GRAM-G ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು.
- ಗ್ರಾಮ ಪಂಚಾಯತಿಗಳ ಅಧಿಕಾರವನ್ನು ಕಸಿದುಕೊಂಡಿರುವ ಈ ಕಾಯ್ದೆಯನ್ನು ಹಿಂಪಡೆಯಬೇಕು.
- ಗ್ರಾಮೀಣ ಜನರ ಬದುಕಿನ ಹಕ್ಕನ್ನು ರಕ್ಷಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು.
ಈ ನಿರ್ಣಯವನ್ನು ಕೇಂದ್ರ ಸರ್ಕಾರಕ್ಕೆ ಹಾಗೂ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಕಳುಹಿಸಿಕೊಡಲು ವಿಧಾನಸಭೆ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.







