ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಆಯುರ್ವೇದ ಮಹತ್ವದ ಪಾತ್ರ ವಹಿಸುತ್ತದೆ: ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ

On: February 7, 2026 7:31 PM
Follow Us:

ಶಿವಮೊಗ್ಗ: ಆರೋಗ್ಯಯುತ ಜೀವನ ಮತ್ತು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಆಯುರ್ವೇದ ಚಿಕಿತ್ಸಾ ಪದ್ಧತಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಆಯುರ್ವೇದಕ್ಕೆ ಸಂಬಂಧಿಸಿದಂತೆ ಇನ್ನಷ್ಟು ವೈಜ್ಞಾನಿಕ ಸಂಶೋಧನೆಗಳು ನಡೆಯಬೇಕು. ಈ ದಿಕ್ಕಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಕ್ರಮಗಳನ್ನು ಕೈಗೊಂಡು ಸಂಶೋಧನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಟಿಎಂಎಇ ಸೊಸೈಟಿ ಅಧ್ಯಕ್ಷರು ಹಾಗೂ ಹರಪನಹಳ್ಳಿ ತೆಗ್ಗಿನಮಠದ ಪೀಠಾಧ್ಯಕ್ಷರಾದ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಅವರು ಟಿಎಂಎಇಎಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಫೆಬ್ರವರಿ 7ರಂದು ನಿದಿಗೆಯಲ್ಲಿರುವ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಶಿಷ್ಯ ಸಂಸ್ಕಾರ (ಶಿಷ್ಯೋಪನಯನ), ಲೈಬ್ರರಿ, ವಿವಿಧ ವಿಭಾಗಗಳು ಹಾಗೂ ಸೆಮಿನಾರ್ ಹಾಲ್‌ನ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭ ಮತ್ತು ಘಟಿಕೋತ್ಸವ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು.

ಆಯುರ್ವೇದ ಕ್ಷೇತ್ರದಲ್ಲಿ ಸಂಶೋಧನೆ ಹೆಚ್ಚಿದಲ್ಲಿ ಔಷಧ ತಯಾರಿಕೆ, ವಿತರಣೆ ಮತ್ತು ಚಿಕಿತ್ಸಾ ವಿಧಾನಗಳಲ್ಲಿ ಹೆಚ್ಚಿನ ಪರಿಣಾಮಕಾರಿತ್ವ ಸಾಧ್ಯವಾಗುತ್ತದೆ. ಆಯುರ್ವೇದ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು ಹಾಗೂ ಈ ಪದ್ಧತಿಯನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಯಾವುದೇ ಹಿಂಜರಿಕೆ ಹೊಂದಬೇಕಾಗಿಲ್ಲ. ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆಯುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆಯುರ್ವೇದಕ್ಕೆ ಇನ್ನಷ್ಟು ಪ್ರೋತ್ಸಾಹ ನೀಡುವ ಮೂಲಕ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಿ, ವೈಜ್ಞಾನಿಕ ಅಧ್ಯಯನಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ನೂತನ ಆಧುನಿಕ ಆಪರೇಷನ್ ಕೊಠಡಿ (ಓಟಿ), ವಿವಿಧ ವಿಭಾಗಗಳ ಕಟ್ಟಡ ಹಾಗೂ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು, ಆಯುರ್ವೇದವು ವಿಜ್ಞಾನದ ದೃಢವಾದ ಆಧಾರದ ಮೇಲೆ ನಿಂತಿರುವ ಚಿಕಿತ್ಸಾ ಪದ್ಧತಿಯಾಗಿದೆ. ಇದರ ಮಹತ್ವವನ್ನು ಎಲ್ಲ ವರ್ಗದ ಜನರಿಗೆ ತಿಳಿಸುವ ಅಗತ್ಯವಿದೆ ಎಂದರು.

ಬದಲಾದ ಜೀವನಶೈಲಿಯಿಂದಾಗಿ ಕ್ಯಾನ್ಸರ್, ಹೃದ್ರೋಗದಂತಹ ಸಾಂಕ್ರಾಮಿಕವಲ್ಲದ ರೋಗಗಳು ಹೆಚ್ಚುತ್ತಿವೆ. ರೋಗ ಬಂದ ನಂತರ ಮಾತ್ರ ಔಷಧಗಳ ಮೊರೆ ಹೋಗುವ ಬದಲು, ರೋಗವೇ ಬರದಂತೆ ತಡೆಯುವತ್ತ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಯೋಗ ಮತ್ತು ಆಯುರ್ವೇದ ಆರೋಗ್ಯ ಸಂರಕ್ಷಣೆಗೆ ಬಹಳ ಸಹಕಾರಿಯಾಗಿವೆ. ಆಯುರ್ವೇದ ಚಿಕಿತ್ಸಾ ಪದ್ಧತಿಗೆ ಕೇಂದ್ರ ಸರ್ಕಾರ ಅಗತ್ಯ ಪ್ರೋತ್ಸಾಹ ನೀಡುತ್ತಿದೆ ಎಂದು ಅವರು ತಿಳಿಸಿದರು.

ಮುದಗಲ್‌ನ ಕಲ್ಯಾಣ ಆಶ್ರಮದ ಪ್ರವಚನ ಯೋಗಿ ಶ್ರೀ ಮಹಾಂತ ಮಹಾ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ವೇದಿಕೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ರಿಜಿಸ್ಟಾರ್ ಪ್ರೊ. ಆರ್. ತಿಮ್ಮರಾಯಪ್ಪ, ಆರ್‌ಜಿಯುಹೆಚ್‌ಎಸ್ ಸೆನೆಟ್ ಸದಸ್ಯ ಡಾ. ವೀರೇಶ್ ಕರಬಸಪ್ಪ ಹಂಚಿನಾಳ, ಲ್ಯಾಂಡ್ ಡೆವಲಪರ್ಸ್ ಮತ್ತು ಬಿಲ್ಡರ್ ಡಾ. ಟಿ.ಎಂ. ವಿಶ್ವನಾಥ್, ನಿವೃತ್ತ ಪ್ರಾಧ್ಯಾಪಕ ಹಾಗೂ ಜಾನಪದ ತಜ್ಞ ಬಸವರಾಜ್ ನೆಲ್ಲಿಸರ, ಟಿಎಂಎಇಎಸ್ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಜಿ.ಎ. ಹಿರೇಮಠ, ಪ್ರಾಂಶುಪಾಲರಾದ ರುದ್ರಾಂಬಿಕಾ ಬಿರಾದರ್, ಉಪ ಪ್ರಾಂಶುಪಾಲ ಡಾ. ಸದಾನಂದ ಜೋಷಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಡಾ. ಪ್ರಕೃತಿ ಮಂಚಾಲೆ ಮತ್ತು ಡಾ. ನಾಗರಾಜ್ ಅಂಗಡಿ ಶಿಷ್ಯೋಪನಯನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ನಂದಿನಿ ಮತ್ತು ವೈಷ್ಣವಿ ಧನ್ವಂತರಿ ಗೀತೆ ಹಾಡಿದರು. ಸುಮಿತ್ ಮತ್ತು ಅನೂಪ್ ಪ್ರಾರ್ಥನೆ ಸಲ್ಲಿಸಿದರು. ಡಾ. ಸದಾನಂದ ಜೋಷಿ ಸ್ವಾಗತಿಸಿದರು. ಡಾ. ಕಂಚನ್ ಕುಲಕರ್ಣಿ ಹಾಗೂ ಡಾ. ಎಸ್.ಬಿ. ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.

K.M.Sathish Gowda

Join WhatsApp

Join Now

Facebook

Join Now

Leave a Comment