ಶಿವಮೊಗ್ಗ: ಶಿವಮೊಗ್ಗ ನಗರದ ಊರುಗಡೂರು ವ್ಯಾಪ್ತಿಯ ಸೂಳೆಬೈಲು ಪ್ರದೇಶದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ನ ಹತ್ಯೆ ಪ್ರಕರಣ ರಾಜ್ಯದ ಗಮನ ಸೆಳೆದಿದೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಮೃತ ವಿದ್ಯಾರ್ಥಿಯ ನಿವಾಸಕ್ಕೆ ಭೇಟಿ ನೀಡಿ, ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದರು.
“ಭವಿಷ್ಯದಲ್ಲಿ ಕುಟುಂಬಕ್ಕೆ ಆಸರೆಯಾಗಬೇಕಿದ್ದ ಮಗನನ್ನು ಕಳೆದುಕೊಂಡಿರುವುದು ತುಂಬಾ ದುಃಖಕರ ಸಂಗತಿ. ಹೆತ್ತವರ ಆಕ್ರಂದನವನ್ನು ಕಂಡಾಗ ಮನಸ್ಸು ಕಲುಕಿತು. ಇಂತಹ ಅಮಾನುಷ ಘಟನೆಗಳು ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುತ್ತವೆ,” ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಘಟನೆಗೆ ಕಾರಣವಾದ ಆರೋಪಿಗಳು ಗಾಂಜಾ ನಶೆಯಲ್ಲಿ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ ಎನ್ನಲಾಗುತ್ತಿದ್ದು, ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ಆಗ್ರಹಿಸಿದರು. “ಮತಾಂಧತೆ, ನಶಾ ಪದಾರ್ಥಗಳ ಅಡ್ಡಿ ಹಾಗೂ ಪುಂಡರ ಹಾವಳಿ ರಾಜ್ಯದಲ್ಲಿ ಹೆಚ್ಚುತ್ತಿರುವುದು ಕಳವಳಕಾರಿ. ವಿದ್ಯಾರ್ಥಿಗಳ ಸುರಕ್ಷತೆ ಸರ್ಕಾರದ ಮೊದಲ ಆದ್ಯತೆಯಾಗಬೇಕು,” ಎಂದು ಹೇಳಿದರು.
ಇದೊಂದು ಕಾನೂನು ಸುವ್ಯವಸ್ಥೆಯ ಭೀಕರ ವೈಫಲ್ಯವಾಗಿದ್ದು, ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ, ಕಾನೂನಿನ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಪ್ರಕರಣದ ಸಮಗ್ರ ತನಿಖೆ ನಡೆಯಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಬೇಕು ಎಂದು ರಾಘವೇಂದ್ರ ಒತ್ತಾಯಿಸಿದರು.
ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು, ಸಾರ್ವಜನಿಕರ ಭದ್ರತೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸ್ಪಷ್ಟ ಕ್ರಮಗಳನ್ನು ಕೈಗೊಳ್ಳಬೇಕು. ಯುವಜನರ ಭವಿಷ್ಯವನ್ನು ಕಾಪಾಡುವ ಹೊಣೆಗಾರಿಕೆ ಸರ್ಕಾರದ ಮೇಲಿದೆ ಎಂಬುದನ್ನು ಮರೆಯಬಾರದು ಎಂದು ಅವರು ಹೇಳಿದರು.

ದುಃಖಿತ ಕುಟುಂಬಕ್ಕೆ ಮಾನವೀಯ ನೆರವು: ಸಂಸದ ಬಿ.ವೈ. ರಾಘವೇಂದ್ರರಿಂದ ₹1 ಲಕ್ಷ ವೈಯಕ್ತಿಕ ಪರಿಹಾರ
ಶಿವಮೊಗ್ಗದಲ್ಲಿ ನಡೆದ ದುರ್ಘಟನೆ ಹಿನ್ನೆಲೆ, ಮೃತ ವಿದ್ಯಾರ್ಥಿಯ ಕುಟುಂಬದ ನೋವನ್ನು ಮನಗಂಡ ಸಂಸದ ಬಿ.ವೈ.ರಾಘವೇಂದ್ರ ಅವರು ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ಪರಿಹಾರ ಧನವನ್ನು ನೀಡಿದರು. ದುಃಖಿತ ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಮೂಲಕ ತಾವು ಸದಾ ಅವರೊಂದಿಗೆ ಇರುವುದಾಗಿ ತಿಳಿಸಿದ ಅವರು, ಈ ಕಠಿಣ ಸಮಯದಲ್ಲಿ ಧೈರ್ಯ ಕಳೆದುಕೊಳ್ಳಬಾರದು ಎಂದು ಸಾಂತ್ವನ ಹೇಳಿದರು.
ಮೃತ ವಿದ್ಯಾರ್ಥಿಯ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಸದರು ಪ್ರಾರ್ಥಿಸಿದರು.







