ಶಿವಮೊಗ್ಗ: ಉದ್ಯೋಗ ಹಾಗೂ ಕುಟುಂಬ ನಿರ್ವಹಣೆಯ ಉದ್ದೇಶದಿಂದ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಲಕ್ಷಾಂತರ ಕನ್ನಡಿಗರ ಸುರಕ್ಷತೆ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಸರ್ಕಾರ ತಕ್ಷಣ ಕ್ರಮ ಕೈಗೊಂಡು ಅಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಬೇಕೆಂದು ಒತ್ತಾಯಿಸಿದೆ.

ಕರ್ನಾಟಕದ ಅನೇಕ ಕುಟುಂಬಗಳ ಆರ್ಥಿಕ ಆಧಾರವಾಗಿರುವ ಕೊಲ್ಲಿ ರಾಷ್ಟ್ರಗಳಲ್ಲಿ ಇತ್ತೀಚಿನ ಜಾಗತಿಕ ರಾಜಕೀಯ ಉದ್ವಿಗ್ನತೆ ಹಾಗೂ ಯುದ್ಧ ಪರಿಸ್ಥಿತಿಗಳ ಪರಿಣಾಮವಾಗಿ ಅನಿಶ್ಚಿತತೆ ಹೆಚ್ಚಾಗಿದೆ. ವಿಶೇಷವಾಗಿ ಅಮೆರಿಕ ಸಂಯುಕ್ತ ಸಂಸ್ಥಾನ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳ ಮೇಲೆ ಬೀರಿದೆ ಎಂದು ವೇದಿಕೆ ತಿಳಿಸಿದೆ.

ಇದರ ಪರಿಣಾಮವಾಗಿ ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್, ಕುವೈತ್, ಬಹ್ರೈನ್, ಇರಾಕ್ ಹಾಗೂ ಜೋರ್ಡನ್ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ಭದ್ರತಾ ಪರಿಸ್ಥಿತಿ ಅಸ್ಥಿರವಾಗಿದೆ ಎನ್ನಲಾಗಿದೆ. ಈ ದೇಶಗಳಲ್ಲಿ ಉದ್ಯೋಗ ಅರಸಿ ನೆಲೆಸಿರುವ ಕನ್ನಡಿಗರು ಜೀವಭಯದ ನಡುವೆ ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದಲ್ಲಿರುವ ಅವರ ಕುಟುಂಬಗಳು ತಮ್ಮವರ ಭದ್ರತೆ ಕುರಿತು ತೀವ್ರ ಆತಂಕದಲ್ಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯ ಸಾಧಿಸಿ, ಅಲ್ಲಿನ ಭಾರತೀಯ ರಾಯಭಾರ ಕಚೇರಿಗಳೊಂದಿಗೆ ಸಂಪರ್ಕ ಸಾಧಿಸಿ, ಅಗತ್ಯವಿದ್ದಲ್ಲಿ ವಿಶೇಷ ವಿಮಾನಗಳ ಮೂಲಕ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಈ ಸಂಬಂಧ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ಕಿರಣ್ ಕುಮಾರ್ ಎಚ್.ಎಸ್., ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ಸಿ., ಜಿಲ್ಲಾ ಉಪಾಧ್ಯಕ್ಷ ಮುಜಿಬುಲ್ಲ, ವಿಜಯ್ ಕುಮಾರ್, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ, ಮಹಿಳಾ ಪ್ರಧಾನ ಕಾರ್ಯದರ್ಶಿ ಆರತಿ ತಿವಾರಿ, ಯುವ ನಗರ ಅಧ್ಯಕ್ಷ ಪ್ರವೀಣ್ ಕುಮಾರ್ ಸೇರಿದಂತೆ ಸತೀಶ್, ಹನುಮಂತ, ಮಂಜುನಾಥ್, ಪಾಪು, ಅನುಪಮಾ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜ್ಯೋತಿ ಹಾಗೂ ಅನೇಕ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಜೀವ ರಕ್ಷಣೆ ಹಾಗೂ ಅವರ ಕುಟುಂಬಗಳ ಆತಂಕ ನಿವಾರಣೆಗಾಗಿ ತುರ್ತು ಕ್ರಮ ಕೈಗೊಳ್ಳಬೇಕೆಂದು ವೇದಿಕೆ ಹೇಳಿದೆ.






