ರೋಣ (ಗದಗ ಜಿಲ್ಲೆ): ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರೋಣದಲ್ಲಿ ತಾಲ್ಲೂಕು ನೌಕರರ ಸಮಾವೇಶ ಹಾಗೂ ಉತ್ತಮ ಸರ್ಕಾರಿ ನೌಕರರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಉದ್ಘಾಟಿಸಿ ಮಾತನಾಡಿದರು.

ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅತಿ ಮಹತ್ವದ್ದು
ಮಹಿಳೆಯರು ಉತ್ತಮ ಸಮಾಜ ನಿರ್ಮಾಣದಲ್ಲಿ ಬೆನ್ನೆಲುಬಾಗಿ ನಿಲ್ಲುವ ಶಕ್ತಿಯುಳ್ಳವರು ಎಂದು ಅವರು ಹೇಳಿದರು. ಕುಟುಂಬ, ಸಮಾಜ ಮತ್ತು ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಹಿಳೆಯರು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ಅವರ ರಕ್ಷಣೆಗೆ ಮತ್ತು ಗೌರವಕ್ಕೆ ಇಡೀ ಸಮಾಜ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಕರೆ ನೀಡಿದರು.

ನೌಕರರ ಹಿತಕ್ಕಾಗಿ ಸಂಘಟನೆಯ ಬದ್ಧತೆ
ಸಂಘಟನೆಯ ಮಹತ್ವದ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಸಂಘವು ನೌಕರರ ಹಿತಾಸಕ್ತಿಗಳನ್ನು ಕಾಪಾಡುವ ದಿಸೆಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಸಂಘವು ನೌಕರ ಸ್ನೇಹಿ ಕಾರ್ಯಕ್ರಮಗಳು ಹಾಗೂ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವ ಹಲವು ಯೋಜನೆಗಳನ್ನು ಜಾರಿಗೆ ತರಲು ಗುರಿ ಹೊಂದಿದೆ ಎಂದು ವಿವರಿಸಿದರು.

ಷಡಾಕ್ಷರಿ ಅವರ ಕಾರ್ಯಕ್ಷಮತೆ ರಾಷ್ಟ್ರಕ್ಕೆ ಮಾದರಿ: ಜಿ.ಎಸ್. ಪಾಟೀಲ
ಈ ಸಂದರ್ಭದಲ್ಲಿ ರೋಣ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜಿ.ಎಸ್. ಪಾಟೀಲ ಅವರು ಮಾತನಾಡಿ, ರಾಜ್ಯಾಧ್ಯಕ್ಷರಾದ ಷಡಾಕ್ಷರಿ ಅವರ ನಡೆ-ನುಡಿ, ಕಾರ್ಯಕ್ಷಮತೆ ಮತ್ತು ಕ್ರಿಯಾಶೀಲತೆ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ಪ್ರಶಂಸಿಸಿದರು.
ಉತ್ತಮ ಸಂಘಟನೆಯಿಂದ ನೌಕರರಿಗೆ ಒತ್ತಡರಹಿತ ಕೆಲಸ
ರೋಣ ತಾಲ್ಲೂಕಿನ ತಹಶೀಲ್ದಾರ್ ನಾಗರಾಜ ಕೆ. ಅವರು ಮಾತನಾಡಿ, ಉತ್ತಮ ನಾಯಕತ್ವ ಹೊಂದಿರುವ ಸಂಘಟನೆ ಇದ್ದಾಗ ಸರ್ಕಾರಿ ನೌಕರರು ನೆಮ್ಮದಿಯಿಂದ ಹಾಗೂ ಒತ್ತಡರಹಿತವಾಗಿ ತಮ್ಮ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ರಾಜ್ಯಾಧ್ಯಕ್ಷರ ಮಾರ್ಗದರ್ಶನದಲ್ಲಿ ನೌಕರರಿಗೆ ಉತ್ತಮ ಬೆಂಬಲ ದೊರೆಯುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಅಧ್ಯಕ್ಷರಾದ ಡಾ. ಬಸವರಾಜ ವಿ. ಬಳ್ಳಾರಿ, ರೋಣ ತಾಲ್ಲೂಕು ಅಧ್ಯಕ್ಷರಾದ ಎಸ್.ಜಿ. ದಾನಪ್ಪಗೌಡ್ರ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಾಯ್.ಡಿ. ಗಾಣಿಗೇರ, ಖ್ಯಾತ ಹಾಸ್ಯ ಭಾಷಣಗಾರ್ತಿ ಇಂದುಮತಿ ಸಾಲಿಮಠ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಹೆಚ್. ಗಿರಿಗೌಡ, ಗೌರವಾಧ್ಯಕ್ಷರಾದ ಎಸ್. ಬಸವರಾಜು, ಕಾರ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಿ. ಬಳ್ಳಾರಿ, ಉಪಾಧ್ಯಕ್ಷರಾದ ಸುರೇಶ ಸಿ. ಶೆಡಶ್ಯಾಳ, ಶಿವಾನಂದ ಮಂಗಣ್ಣವರ, ಬಸನಗೌಡ ಕೋಣತಿ ಸೇರಿದಂತೆ ಹಲವು ಗಣ್ಯರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಸರ್ಕಾರಿ ನೌಕರರನ್ನು ಗೌರವಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.





