ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದ ಬಜೆಟ್: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

On: March 7, 2026 7:23 PM
Follow Us:

ಮೈಸೂರು: ರಾಜ್ಯದ ಸಮಗ್ರ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಈ ಬಾರಿಯ ಬಜೆಟ್ ರೂಪಿಸಲಾಗಿದೆ. ಸಮಾಜದ ಎಲ್ಲಾ ವರ್ಗದ ಜನರಿಗೆ ಸಮಾನ ಅವಕಾಶ ಕಲ್ಪಿಸುವುದು ಈ ಬಜೆಟ್‌ನ ಪ್ರಮುಖ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹೆಚ್ಚು ಸಾಲ ಮಾಡಿದೆ ಎಂಬ ವಿರೋಧ ಪಕ್ಷದ ಆರೋಪಗಳಿಗೆ ತಿರುಗೇಟು ನೀಡಿದರು.

ಬಿಜೆಪಿಯವರು ರಾಜ್ಯ ಸರ್ಕಾರದ ಮೇಲೆ ಅನಾವಶ್ಯಕ ಆರೋಪ ಮಾಡುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಲ ಮಾಡುವುದು ಅನಿವಾರ್ಯ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವೂ ದೊಡ್ಡ ಪ್ರಮಾಣದಲ್ಲಿ ಸಾಲ ಮಾಡಿದೆ. ಅಭಿವೃದ್ಧಿಗೆ ಸಾಲ ಮಾಡದೇ ಸಾಧ್ಯವಿಲ್ಲ ಎಂಬುದು ವಾಸ್ತವ ಎಂದು ಅವರು ಹೇಳಿದರು.

ಆರ್ಥಿಕ ಹೊಣೆಗಾರಿಕೆ ಕಾಯ್ದೆ ಸೂಚಿಸಿರುವ ಮಾನದಂಡಗಳ ಮಿತಿಯೊಳಗೇ ರಾಜ್ಯ ಸರ್ಕಾರ ಸಾಲ ಮಾಡಿದೆ. ಈ ಕಾಯ್ದೆಯ ಪ್ರಕಾರ ಸಾಲದ ಪ್ರಮಾಣ ಜಿಡಿಪಿಯ ಶೇ.25ರೊಳಗೆ ಇರಬೇಕು. ಆದರೆ ಕರ್ನಾಟಕದ ಸಾಲದ ಪ್ರಮಾಣ ಶೇ.24.94ರಷ್ಟಿದ್ದು, ಅದು ನಿಗದಿತ ಮಿತಿಯೊಳಗೇ ಇದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಇದಕ್ಕೆ ವಿರುದ್ಧವಾಗಿ ಕೇಂದ್ರ ಸರ್ಕಾರದ ಒಟ್ಟು ಸಾಲದ ಪ್ರಮಾಣ ಸುಮಾರು ₹214 ಲಕ್ಷ ಕೋಟಿ ಇದೆ. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರವೇ ಸುಮಾರು ₹165 ಲಕ್ಷ ಕೋಟಿ ಸಾಲ ಹೆಚ್ಚಾಗಿದೆ. ಇದು ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಪ್ರಕಾರ ಶೇ.55.6ರಷ್ಟಾಗಿದೆ ಎಂದು ಅವರು ಆರೋಪಿಸಿದರು.

ವಿತ್ತೀಯ ಕೊರತೆಯ ವಿಚಾರದಲ್ಲೂ ಕರ್ನಾಟಕ ರಾಜ್ಯ ಉತ್ತಮ ಸ್ಥಿತಿಯಲ್ಲಿದೆ. ದೇಶದ ವಿತ್ತೀಯ ಕೊರತೆ ಶೇ.4.4ರಷ್ಟಿದ್ದರೆ, ಕರ್ನಾಟಕದ ವಿತ್ತೀಯ ಕೊರತೆ ಶೇ.2.95ರಷ್ಟಿದ್ದು, ಇದು ಕಾಯ್ದೆ ಸೂಚಿಸಿರುವ ಜಿಡಿಪಿಯ ಶೇ.3ರ ಮಿತಿಯೊಳಗೇ ಇದೆ ಎಂದು ಅವರು ತಿಳಿಸಿದರು.

ರಾಜ್ಯದ ಜಿಎಸ್‌ಡಿಪಿ ₹33,05,500 ಕೋಟಿಯಷ್ಟಿದೆ. ಆದ್ದರಿಂದ ರಾಜ್ಯ ಸರ್ಕಾರ ಅತಿಯಾದ ಸಾಲ ಮಾಡುತ್ತಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಈ ಬಾರಿಯ ಬಜೆಟ್‌ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿ ರೂಪಿಸಲಾಗಿದೆ. ಸಮಾಜದ ಹಿಂದುಳಿದ ವರ್ಗಗಳು, ರೈತರು, ಮಹಿಳೆಯರು ಹಾಗೂ ಯುವಜನರಿಗೆ ಹೆಚ್ಚು ಅವಕಾಶ ಮತ್ತು ಸಹಾಯ ಒದಗಿಸುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಘೋಷಿಸಲಾಗಿದೆ. ಇದರಿಂದ ರಾಜ್ಯದ ಸಮಗ್ರ ಅಭಿವೃದ್ಧಿಗೆ ದಿಕ್ಕು ಸಿಗಲಿದೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾಗಿದ್ದ ಅನುದಾನವನ್ನು ನೀಡದಿರುವುದರಿಂದ ರಾಜ್ಯದ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಉಂಟಾಗಿದೆ. ಜೊತೆಗೆ ಕೇಂದ್ರ ಸರ್ಕಾರ ಜಿಎಸ್‌ಟಿ ದರ ಪರಿಷ್ಕರಣೆ ಮಾಡಿದ ಪರಿಣಾಮ ಕರ್ನಾಟಕಕ್ಕೆ ಸುಮಾರು ₹10 ಸಾವಿರ ಕೋಟಿ ನಷ್ಟ ಉಂಟಾಗಿದೆ ಎಂದು ಅವರು ಆರೋಪಿಸಿದರು.

ಮುಂದಿನ ಬಜೆಟ್ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ವರಿಷ್ಠರು ಅವಕಾಶ ನೀಡಿದರೆ ಮುಂದಿನ ಎರಡು ಬಜೆಟ್‌ಗಳನ್ನೂ ತಾನೇ ಮಂಡಿಸಲು ಸಿದ್ಧನಿದ್ದೇನೆ ಎಂದರು. ಅಂತಿಮ ತೀರ್ಮಾನ ಹೈಕಮಾಂಡ್‌ಗೆ ಸೇರಿದೆ. ದಾಖಲೆ ಮುರಿಯುವುದು ನನ್ನ ಉದ್ದೇಶವಲ್ಲ. ಆದರೆ ಜನರು ಆಶೀರ್ವದಿಸಿ ಅವಕಾಶ ನೀಡಿದರೆ, ನೀಡಲಾದ ಜವಾಬ್ದಾರಿಯನ್ನು ಖಂಡಿತವಾಗಿ ಸಮರ್ಪಕವಾಗಿ ನಿರ್ವಹಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

K.M.Sathish Gowda

Join WhatsApp

Join Now

Facebook

Join Now

Leave a Comment