ಶಿವಮೊಗ್ಗ: ತಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನಡೆದ ದುರ್ಘಟನೆ ರಾಜ್ಯವನ್ನು ಕಂಬನಿ ಮಿಡಿಯುವಂತೆ ಮಾಡಿದೆ. ಕರ್ತವ್ಯನಿಷ್ಠೆಯಿಂದ ವನ್ಯಜೀವಿಗಳ ಸೇವೆಯಲ್ಲಿ ತೊಡಗಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ನೀರಾನೆ ದಾಳಿಯಿಂದ ದುರ್ಘಟನೆಯಲ್ಲಿ ಸಾವನ್ನಪ್ಪಿರುವುದು ಅತ್ಯಂತ ನೋವಿನ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಕುರಿತು ಸಂತಾಪ ಸೂಚಿಸಿರುವ ಅವರು, “ತಮ್ಮ ವೃತ್ತಿ ಜೀವನವನ್ನು ಸಂಪೂರ್ಣವಾಗಿ ವನ್ಯಜೀವಿಗಳ ರಕ್ಷಣೆಗೆ ಮತ್ತು ಆರೈಕೆಗೆ ಮುಡಿಪಾಗಿಟ್ಟಿದ್ದ ಡಾ. ಸಮೀಕ್ಷಾ ರೆಡ್ಡಿ ಅವರ ಅಗಲಿಕೆ ಕೇವಲ ಅವರ ಕುಟುಂಬಕ್ಕೆ ಅಥವಾ ಅರಣ್ಯ ಇಲಾಖೆಗೆ ಮಾತ್ರವಲ್ಲ, ಇಡೀ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಯುವ ವಯಸ್ಸಿನಲ್ಲೇ ಸೇವಾಭಾವದಿಂದ ಕೆಲಸ ಮಾಡುತ್ತಿದ್ದ ವೈದ್ಯೆಯನ್ನು ಕಳೆದುಕೊಂಡಿರುವುದು ಅತೀವ ದುಃಖಕರ” ಎಂದು ಹೇಳಿದ್ದಾರೆ.
ಇಂತಹ ದುರಂತದ ಸಂದರ್ಭದಲ್ಲಿ ಸರ್ಕಾರ ಮೃತರ ಕುಟುಂಬದೊಂದಿಗೆ ದೃಢವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ ಸಚಿವರು, ಘಟನೆ ಕುರಿತು ಈಗಾಗಲೇ ಅರಣ್ಯ ಸಚಿವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಡಾ. ಸಮೀಕ್ಷಾ ರೆಡ್ಡಿ ಅವರ ಅಗಲಿಕೆಯಿಂದ ಉಂಟಾದ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಸಹೋದ್ಯೋಗಿಗಳಿಗೆ ಮತ್ತು ಸ್ನೇಹಿತರಿಗೆ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ಸಂತಾಪ ತಿಳಿಸಿದ್ದಾರೆ.







