ಬೆಂಗಳೂರು: ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿಯೂ ರಾಜಕೀಯ ಹಸ್ತಕ್ಷೇಪ ಹೆಚ್ಚುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಶ್ಯಾಮಪ್ರಸಾದ ಮುಖರ್ಜಿ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ‘ಏಕಾತ್ಮ ಮಾನವ ದರ್ಶನ’ ಎಂಬ ಅಂತರರಾಷ್ಟ್ರೀಯ ಶೈಕ್ಷಣಿಕ ಅಧಿವೇಶನವನ್ನು ಏಕಾಏಕಿ ರದ್ದುಪಡಿಸಿರುವ ಕ್ರಮವನ್ನು ಖಂಡಿಸಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಭಾಗವಹಿಸಲು ನಿರ್ಧರಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರದ ಹಸ್ತಕ್ಷೇಪದಿಂದ ಕಾರ್ಯಕ್ರಮ ರದ್ದುಪಡಿಸಲ್ಪಟ್ಟಿದ್ದು, ಉಪಕುಲಪತಿಗಳಿಗೆ ನೋಟಿಸ್ ನೀಡಿರುವುದು ಅಸಮಂಜಸ ಕ್ರಮ ಎಂದು ಹೇಳಿದರು.
ವಿಶ್ವವಿದ್ಯಾಲಯಗಳು ಜ್ಞಾನ ಮತ್ತು ಚಿಂತನೆಯ ವಿನಿಮಯಕ್ಕೆ ವೇದಿಕೆಗಳಾಗಬೇಕು. ಇಂತಹ ಶೈಕ್ಷಣಿಕ ಕಾರ್ಯಕ್ರಮಗಳನ್ನು ರಾಜಕೀಯ ದೃಷ್ಟಿಕೋಣದಿಂದ ನೋಡದೇ, ಅವುಗಳ ಶೈಕ್ಷಣಿಕ ಮಹತ್ವವನ್ನು ಪರಿಗಣಿಸುವುದು ಅಗತ್ಯ ಎಂದು ವಿಜಯೇಂದ್ರ ಅಭಿಪ್ರಾಯಪಟ್ಟರು.
ಇದು ದ್ವೇಷದ ರಾಜಕಾರಣದ ಉದಾಹರಣೆಯಾಗಿದ್ದು, ವಿಶ್ವವಿದ್ಯಾನಿಲಯದ ಸ್ವಾಯತ್ತತೆಯನ್ನು ಹಾಳು ಮಾಡುವ ಪ್ರಯತ್ನವಾಗಿದೆ. ಬೆಳಗಾವಿಯಲ್ಲಿ ದ್ವೇಷ ಭಾಷಣ ಮಸೂದೆ ತರಲು ಮುಂದಾದ ರಾಜ್ಯ ಸರ್ಕಾರ, ಇದೇ ರೀತಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿಯೂ ನಿಯಂತ್ರಣ ಸಾಧಿಸಲು ಯತ್ನಿಸುತ್ತಿದೆ ಎಂದು ಅವರು ಟೀಕಿಸಿದರು.
ಸಚಿವರು ತೆಗೆದುಕೊಂಡಿರುವ ಈ ನಿರ್ಧಾರವನ್ನು ತಕ್ಷಣ ಮರುಪರಿಶೀಲಿಸಿ, ನಡೆದಿರುವ ತಪ್ಪನ್ನು ಸರಿಪಡಿಸಿ, ಕಾರ್ಯಕ್ರಮವನ್ನು ಮರು ಆಯೋಜಿಸಲು ಅವಕಾಶ ಕಲ್ಪಿಸಬೇಕು. ಶಿಕ್ಷಣ ಕ್ಷೇತ್ರವನ್ನು ರಾಜಕೀಯ ಪ್ರಭಾವದಿಂದ ದೂರವಿಟ್ಟು, ವಿದ್ಯಾರ್ಥಿಗಳು ಮತ್ತು ಪಂಡಿತರ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ಅವರು ಒತ್ತಾಯಿಸಿದರು.







