ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕಾಂಗ್ರೆಸ್ ಪಕ್ಷದೊಳಗಿನ ಸ್ಫೋಟಕ ಬೆಳವಣಿಗೆ: ಸಚಿವ ಜಮೀರ್ ಗೆ ಸಂಕಷ್ಟ

On: April 16, 2026 12:29 PM
Follow Us:

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ನಾಯಕರ ನಡುವೆ ಉಂಟಾದ ಅಂತರಾಳದ ಗಲಾಟೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಈ ಬೆಳವಣಿಗೆಯ ನಡುವೆ ಇನ್ನೂ ಕೆಲ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಹೈಕಮಾಂಡ್‌ನಿಂದ ಸೂಚನೆ ಬಂದಿದೆ ಎಂಬ ಸುದ್ದಿ ಆಡಳಿತ ಪಕ್ಷದೊಳಗೆ ವ್ಯಾಪಕವಾಗಿ ಹರಡಿದೆ.

ಈ ಬೆಳವಣಿಗೆಗಳು ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಆತಂಕಕ್ಕೆ ದೂಡಿದಂತಿವೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುಮಾರು ಒಂದೂವರೆ ಗಂಟೆಗಳ ಕಾಲ ದಾವಣಗೆರೆ ಉಪಚುನಾವಣೆ ವಿಚಾರವಾಗಿ ಅವರು ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹೈಕಮಾಂಡ್‌ನಿಂದ ಬಂದಿರುವ ಸಂದೇಶದ ಸುಳಿವನ್ನೂ ಅವರು ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ಈ ಚರ್ಚೆಯ ಬೆನ್ನಲ್ಲೇ ಜಮೀರ್ ಅಹಮದ್ ಅವರು ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿಯಾಗಲು ನಿರ್ಧರಿಸಿದ್ದರೂ, ಅವರು ತೀವ್ರ ಬ್ಯುಸಿಯಾಗಿರುವ ಕಾರಣ ಭೇಟಿಗೆ ಅವಕಾಶ ಸಿಗುವ ಸಾಧ್ಯತೆ ಕಡಿಮೆಯಾಗಿದೆ. ಇದರಿಂದಾಗಿ ಕೊನೆ ಕ್ಷಣದಲ್ಲಿ ತಮ್ಮ ಪ್ರಯಾಣವನ್ನು ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಹಿನ್ನೆಲೆಯಲ್ಲಿ ಈಗಾಗಲೇ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಕ್ರಮದ ಮುಂದುವರಿದ ಭಾಗವಾಗಿ ಇನ್ನೂ ಕೆಲ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಆದರೆ, ಕ್ರಮದ ಸ್ವರೂಪ ಹೇಗಿರಬೇಕು ಮತ್ತು ಅದರ ರಾಜಕೀಯ ಪರಿಣಾಮ ಏನಾಗಬಹುದು ಎಂಬುದರ ಬಗ್ಗೆ ಪಕ್ಷದೊಳಗೆ ತೀವ್ರ ಚರ್ಚೆಗಳು ನಡೆಯುತ್ತಿವೆ.

ತಕ್ಷಣ ಕ್ರಮ ಕೈಗೊಳ್ಳುವುದೇ ಅಥವಾ ಸಂಪುಟ ಪುನರ್‌ರಚನೆ ಸಂದರ್ಭದಲ್ಲಿ ಕ್ರಮ ಜರುಗಿಸುವುದೇ ಎಂಬ ಎರಡು ಮಾರ್ಗಗಳ ಕುರಿತು ಹೈಕಮಾಂಡ್‌ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ವದಂತಿಗಳಿಗೆ ಜಮೀರ್ ಸ್ಪಷ್ಟನೆ

ಈ ನಡುವೆ ತಮ್ಮ ವಿರುದ್ಧ ಕ್ರಮವಾಗಲಿದೆ ಎಂಬ ವದಂತಿಗಳಿಗೆ ಪ್ರತಿಕ್ರಿಯಿಸಿದ ಜಮೀರ್ ಅಹಮದ್, “ದಾವಣಗೆರೆ ದಕ್ಷಿಣ ಉಪಚುನಾವಣೆ ಸಂಬಂಧವಾಗಿ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಮಾತುಗಳು ಹರಿದಾಡುತ್ತಿವೆ. ನಾನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕೂಡ ಭೇಟಿಯಾಗಿ ಮಾತುಕತೆ ನಡೆಸುತ್ತೇನೆ,” ಎಂದು ತಿಳಿಸಿದ್ದಾರೆ.

“ನಾನು ಕಾಂಗ್ರೆಸ್‌ನಲ್ಲಿ ಅತಿ ಸಣ್ಣ ವ್ಯಕ್ತಿ. ನಾನು ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಯಾರೂ ನನ್ನ ವಿರುದ್ಧ ಅಂತಹ ಆರೋಪ ಮಾಡಿಲ್ಲ. ರಾಜಕಾರಣದಲ್ಲಿ ಜಾತಿಗೆ ಸ್ಥಾನ ಇರಬಾರದು; ಅದು ಮನೆಯೊಳಗೇ ಸೀಮಿತವಾಗಿರಬೇಕು. ನನ್ನದು ಬಡವರ ಪರ ರಾಜಕಾರಣ,” ಎಂದು ಅವರು ಹೇಳಿದರು.

ಇನ್ನೊಂದೆಡೆ, ಸಾಧ್ಯವಾದ ಕ್ರಮದಿಂದ ತಪ್ಪಿಸಿಕೊಳ್ಳಲು ಜಮೀರ್ ಅಹಮದ್ ರಾಜಕೀಯ ಮಟ್ಟದಲ್ಲಿ ಚಟುವಟಿಕೆಗಳನ್ನು ಹೆಚ್ಚಿಸಿದ್ದಾರೆ. ಮುಖ್ಯಮಂತ್ರಿ ಭೇಟಿಯ ಮರುದಿನವೇ ಅವರು ನಸೀರ್ ಅಹಮದ್ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಬಳಿಕ ಕುಮಾರಕೃಪಾ ಅತಿಥಿಗೃಹದ ಸಮೀಪದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಚಿವರಾದ ಕೃಷ್ಣ ಬೈರೇಗೌಡ ಮತ್ತು ದಿನೇಶ್ ಗುಂಡೂರಾವ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಮುಂದುವರಿದ ಭಾಗವಾಗಿ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಪರಿಸ್ಥಿತಿಯ ಬಗ್ಗೆ ವಿವರಿಸಲು ಸಜ್ಜಾಗಿದ್ದಾರೆ.

ಇದೇ ವೇಳೆ, ಕಾಂಗ್ರೆಸ್‌ನೊಳಗಿನ ಭಿನ್ನಮತಗಳು ಮತ್ತಷ್ಟು ಹೊರಬರುತ್ತಿವೆ. ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಕೆಲ ಅಲ್ಪಸಂಖ್ಯಾತ ನಾಯಕರು ಪ್ರಯತ್ನಿಸಿದ್ದಾರೆ ಎಂಬ ಗಂಭೀರ ಆರೋಪಗಳನ್ನು ಶಾಸಕರಾದ ರಿಜ್ವಾನ್ ಅರ್ಷದ್, ಯಾಸಿರ್ ಪಠಾಣ್ ಮತ್ತು ಸಲೀಂ ಅಹಮದ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಆರೋಪಗಳ ಹಿನ್ನೆಲೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಈ ನಾಯಕರು, ಸಂಪೂರ್ಣ ಬೆಳವಣಿಗೆಯ ವರದಿಯನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ, ಕಾಂಗ್ರೆಸ್ ಪಕ್ಷದೊಳಗಿನ ಅಂತರ ಕಲಹವು ಇದೀಗ ತೀವ್ರ ಹಂತ ತಲುಪಿದ್ದು, ಹೈಕಮಾಂಡ್ ಕೈಗೊಳ್ಳುವ ಮುಂದಿನ ಕ್ರಮಗಳು ರಾಜ್ಯ ರಾಜಕೀಯದ ಮೇಲೆ ಮಹತ್ವದ ಪ್ರಭಾವ ಬೀರುವ ಸಾಧ್ಯತೆ ಇದೆ.

K.M.Sathish Gowda

Join WhatsApp

Join Now

Facebook

Join Now

Leave a Comment